ADVERTISEMENT

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನಿಧನ: ಸಿಎಂ ಸೇರಿದಂತೆ ಗಣ್ಯರಿಂದ ಸಂತಾಪ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಡಿಸೆಂಬರ್ 2024, 2:10 IST
Last Updated 10 ಡಿಸೆಂಬರ್ 2024, 2:10 IST
<div class="paragraphs"><p>ಎಸ್.ಎಂ. ಕೃಷ್ಣ&nbsp;</p></div>

ಎಸ್.ಎಂ. ಕೃಷ್ಣ 

   

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾಗಿದ್ದ ಎಸ್.ಎಂ ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಮಂಗಳವಾರ ಬೆಳಗಿನ ಜಾವ 2.30 ರ ಸುಮಾರಿಗೆ ನಿಧನರಾದರು. ಇವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌, ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ, ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

'ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ' ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ADVERTISEMENT

'ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ‌ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು.ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮಖ ರಾಜಕಾರಣಿಗಳಿಗೆ ಮಾದರಿಯಾಗಿದೆ. ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ‌ ನಾನೂ ಭಾಗಿಯಾಗಿದ್ದೇನೆ.‌ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ' ಎಂದು ಹೇಳಿದ್ದಾರೆ.

'ರಾಜ್ಯದ ವಿಧಾನಸಭಾಧ್ಯಕ್ಷರು, ಉಪ ಮುಖ್ಯಮಂತ್ರಿಗಳು, ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ರಾಜ್ಯಪಾಲರೂ ಸೇರಿದಂತೆ ಅನೇಕ ಉನ್ನತ ಹುದ್ದೆಗಳಲ್ಲಿ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿ ರಾಜ್ಯಕ್ಕೆ, ದೇಶಕ್ಕೆ ತಮ್ಮದೇ ಆದ ಅನುಪಮ ಕೊಡುಗೆ ನೀಡಿದ್ದ ಹಿರಿಯರು, ಮುತ್ಸದ್ದಿಗಳಾದ ಎಸ್.ಎಂ.ಕೃಷ್ಣ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವುಂಟಾಯಿತು. ವೈಯಕ್ತಿಕವಾಗಿ ನನಗೆ ಅವರ ಅಗಲಿಕೆ ಬಹಳ ದುಃಖ ಉಂಟು ಮಾಡಿದೆ. ಆ ಚೇತನಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ, ರಾಜ್ಯದ ಜನತೆಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಆತ್ಮೀಯರು, ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಮಾಜಿ ಸಚಿವರಾದ ಎಸ್.ಎಂ. ಕೃಷ್ಣ ಅವರ ನಿಧನದಿಂದ ಮನಸ್ಸಿಗೆ ಅಪಾರ ನೋವುಂಟಾಗಿದೆ. ಕರ್ನಾಟಕದ ಪ್ರಗತಿಗೆ ಅವರು ಸಾಕಷ್ಟು ಕೊಡುಗೆ ನೀಡಿದ್ದಾರೆ. ನನ್ನ ರಾಜಕೀಯ ಬೆಳವಣಿಗೆಗೂ ಸೂಕ್ತ ಮಾರ್ಗದರ್ಶನ ‌ನೀಡಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ದುಃಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು.
ಡಿ.ಕೆ ಶಿವಕುಮಾರ್‌, ಉಪ ಮುಖ್ಯಮಂತ್ರಿ

'ಧೀಮಂತ ಮುತ್ಸದ್ಧಿ ರಾಜಕಾರಣಿ, ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು, ಮಾಜಿ ಕೇಂದ್ರ ವಿದೇಶಾಂಗ ಸಚಿವರು, ಪಕ್ಷದ ಹಿರಿಯ ನಾಯಕ, ಪದ್ಮವಿಭೂಷಣ ಎಸ್.ಎಂ.ಕೃಷ್ಣ ಅವರು ನಮ್ಮನ್ನು ಬಿಟ್ಟು ಅಗಲಿದ ಸುದ್ದಿ ತಿಳಿದು ಅತೀವ ಆಘಾವಾಗಿದೆ. ರಾಷ್ಟ್ರ, ರಾಜ್ಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದ ಎಸ್.ಎಂ.ಕೃಷ್ಣ ಅವರ ನಿಧನದಿಂದ ನಾಡು ಒಬ್ಬ ಶ್ರೇಷ್ಠ ನಾಯಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯಿಂದ ವೈಯಕ್ತಿಕವಾಗಿ ಒಬ್ಬ ಹಿರಿಯಣ್ಣನನ್ನು ಕಳೆದುಕೊಂಡ ನೋವು ನನಗಾಗಿದೆ. ಶ್ರೀ ಎಸ್.ಎಂ.ಕೃಷ್ಣ ಅವರಿಗೆ ಅಶ್ರುಪೂರ್ಣ ಶ್ರದ್ಧಾಂಜಲಿ ಸಲ್ಲಿಸುತ್ತಾ, ಅಗಲಿದ ಆ ಹಿರಿಯ ಚೇತನಕ್ಕೆ ದೇವರು ಉತ್ತಮ ಸದ್ಗತಿಯನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದ ಸದಸ್ಯರು, ಅಪಾರ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಕೋರುತ್ತೇನೆ. ಓಂ ಶಾಂತಿ

- ಬಿ.ಎಸ್.ಯಡಿಯೂರಪ್ಪ, ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.