ಮೈಸೂರು: ಪ್ರತಿಭಟನೆ ವೇಳೆ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶಿಸಿದ ಪ್ರಕರಣದ ಕುರಿತು ತನಿಖೆ ನಡೆಸಲು ಸಮಿತಿ ರಚಿಸಲು ಮೈಸೂರು ವಿಶ್ವವಿದ್ಯಾಲಯ ನಿರ್ಧರಿಸಿದೆ.
‘ಪ್ರತಿಭಟನೆಯಲ್ಲಿ ಭಾಗಿಯಾದ ಹಾಗೂ ವಿಶ್ವವಿದ್ಯಾಲಯದ ಹಾಸ್ಟೆಲ್ಗಳಲ್ಲಿ ಅನಧಿಕೃತವಾಗಿ ವಾಸವಾಗಿರುವ ವಿದ್ಯಾರ್ಥಿಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ಸಿಂಡಿಕೇಟ್ನ ಕೆಲ ಸದಸ್ಯರು ಒತ್ತಾಯಿಸಿದರು. ಈ ಸಂಬಂಧ ತನಿಖೆ ನಡೆಸಿ ವರದಿ ಸಲ್ಲಿಸಲು ಸಮಿತಿ ರಚಿಸಲು ನಿರ್ಧರಿಸಲಾಗಿದೆ’ ಎಂದು ಕುಲಸಚಿವ ಪ್ರೊ.ಆರ್.ಶಿವಪ್ಪ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.
ಇದುವರೆಗೆ ಪೊಲೀಸರ ವಿಚಾರಣೆಗೆ ಹಾಜರಾಗದ, ಪ್ರತಿಭಟನೆಯ ಆಯೋಜಕರಲ್ಲಿ ಒಬ್ಬರಾದ ಮೈಸೂರು ವಿಶ್ವವಿದ್ಯಾಲಯದ ಸಂಶೋಧಕರ ಸಂಘದ ಅಧ್ಯಕ್ಷ ಮರಿದೇವಯ್ಯ, ನಿರೀಕ್ಷಣಾ ಜಾಮೀನು ಪಡೆದು ವಿಚಾರಣೆಗೆ ಹಾಜರಾಗಿದ್ದರು ಎಂದು ಮೂಲಗಳು ತಿಳಿಸಿವೆ.
ದೇಶದ್ರೋಹ ಪ್ರಕರಣದಲ್ಲಿ ವಕಾಲತು ವಹಿಸಬಾರದೆಂಬ ನಿರ್ಣಯವನ್ನು ವಾಪಸ್ ಪಡೆಯಬೇಕೆಂದು ಕೆಲ ವಕೀಲರು ಸಲ್ಲಿಸಿರುವ ಮನವಿ ಕುರಿತು ಚರ್ಚಿಸಲು ಕಾರ್ಯಕಾರಿ ಸಮಿತಿ ಸಭೆಯನ್ನು ಜ. 18 ಇಲ್ಲವೇ 20ರಂದು ಕರೆಯಲಾಗುವುದು ಎಂದು ವಕೀಲರ ಸಂಘದ ಅಧ್ಯಕ್ಷ ಆನಂದಕುಮಾರ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.