ಬೆಂಗಳೂರು: ‘ಪಾಕಿಸ್ತಾನ ಜಿಂದಾ ಬಾದ್’ ಎಂಬ ಘೋಷಣೆ ಕೂಗಿದ್ದನ್ನು ಖಂಡಿಸಿ ಫೆ. 21ರಂದು ನಡೆಯುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ‘ಫ್ರೀ ಕಾಶ್ಮೀರ’ ಎಂಬ ಭಿತ್ತಿಪತ್ರ ಹಿಡಿದ ಕಾರಣಕ್ಕೆ ಬಂಧನಕ್ಕೆ ಒಳಗಾಗಿರುವ ಆರ್ದ್ರಾಗೆ ಜಾಮೀನು ನೀಡಲು ನಗರದ ಆರನೇ ಎಸಿಎಂಎಂ ನ್ಯಾಯಾಲಯ ನಿರಾಕರಿಸಿದೆ.
ಜಾಮೀನು ಕೋರಿ ಆರ್ದ್ರಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ‘ಪ್ರಕರಣದ ತನಿಖೆ ಪ್ರಗತಿಯಲ್ಲಿದೆ. ತನಿಖಾಧಿಕಾರಿಗಳು ಇನ್ನಷ್ಟು ಸಾಕ್ಷ್ಯಗಳನ್ನು ಕಲೆ ಹಾಕು ತ್ತಿದ್ದಾರೆ. ಅಲ್ಲದೆ, ಆರೋಪಿಯ ವರ್ತನೆ ಎರಡು ಕೋಮುಗಳ ನಡುವೆ ಗೊಂದಲ ಮೂಡಿಸುವಂತಿದೆ. ಈ ಸಂದರ್ಭದಲ್ಲಿ ಜಾಮೀನು ಮಂಜೂರು ಮಾಡಲು ಸಾಧ್ಯ ಇಲ್ಲ’ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿದ್ದಾರೆ. ಸರ್ಕಾರದ ಪರ ವಾದ ಮಂಡಿಸಿದ ವಕೀಲರು, ‘ಪ್ರಕರಣ ಅತ್ಯಂತ ಗಂಭೀರವಾಗಿದ್ದು, ರಾಜದ್ರೋಹ ಆರೋಪದ ಅಡಿಯಲ್ಲಿ ತನಿಖೆ ನಡೆಯುತ್ತಿದೆ. ಆದ್ದರಿಂದ, ಜಾಮೀನು ನೀಡಬಾರದು’ ಎಂದು ವಾದ ಮಂಡಿಸಿದ್ದರು.
ಈ ವಾದ ಪುರಸ್ಕರಿಸಿದ ನ್ಯಾಯಾ ಲಯ, ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.
ಶ್ರೀರಾಮ ಸೇನೆ ಅರ್ಜಿ ವಜಾ: ‘ಆರ್ದ್ರಾ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ವೇಳೆ ನಮ್ಮನ್ನು ಪ್ರತಿವಾದಿಯನ್ನಾಗಿ ಪರಿಗಣಿಸಬೇಕು’ ಎಂದು ಕೋರಿ ಶ್ರೀರಾಮ ಸೇನೆ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
‘ಪ್ರಕರಣ ಸಂಬಂಧ ನಡೆಯು ತ್ತಿರುವ ತನಿಖೆ ಪೂರ್ಣಗೊಂಡಿಲ್ಲ. ಈ ಸಂದರ್ಭದಲ್ಲಿ ಮಧ್ಯಂತರ ಅರ್ಜಿ ಪರಿಗಣಿಸಲು ಸಾಧ್ಯ ಇಲ್ಲ’ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.