ADVERTISEMENT

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಪೈಲಟ್‌ ತರಬೇತಿ ಉಚಿತ

​ಪ್ರಜಾವಾಣಿ ವಾರ್ತೆ
Published 16 ಜೂನ್ 2022, 16:31 IST
Last Updated 16 ಜೂನ್ 2022, 16:31 IST

ಬೆಂಗಳೂರು: ರಾಜ್ಯದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಉಚಿತವಾಗಿ ವಿಮಾನ ಚಾಲನಾ (ಪೈಲಟ್‌) ತರಬೇತಿ ನೀಡಲು ನಿರ್ಧರಿಸಲಾಗಿದೆ.

ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್‌ ನೇತೃತ್ವದಲ್ಲಿ ಗುರುವಾರ ನಡೆದ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ತರಬೇತಿಗೆ ಆಯ್ಕೆಯಾಗುವ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಸಂಪೂರ್ಣ ವೆಚ್ಚವನ್ನು ಭರಿಸುವುದಕ್ಕೆ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 600ಕ್ಕಿಂತ ಹೆಚ್ಚು ಅಂಕ ಪಡೆದಿರುವ 2,500ಕ್ಕೂ ಹೆಚ್ಚಿನ ಕಾರ್ಮಿಕರ ಮಕ್ಕಳಿಗೆ ಈಗಾಗಲೇ ನೀಡುತ್ತಿರುವ ಪ್ರೋತ್ಸಾಹಧನದ ಜತೆಗೆ ₹ 10,000 ವಿಶೇಷ ಪ್ರೋತ್ಸಾಹಧನ ಮತ್ತು ಅಭಿನಂದನಾ ಪತ್ರ ವಿತರಿಸಲು ಮಂಡಳಿ ನಿರ್ಧರಿಸಿದೆ.

ADVERTISEMENT

ಸಭೆಯಲ್ಲಿ ಮಾತನಾಡಿದ ಶಿವರಾಂ ಹೆಬ್ಬಾರ್‌, ‘ಕಾರ್ಮಿಕರ ಮಕ್ಕಳು ಕಾರ್ಮಿಕರಾಗಿಯೇ ಉಳಿಯಬಾರದು ಎಂಬುದು ರಾಜ್ಯ ಸರ್ಕಾರದ ನಿಲುವು. ಆದ್ದರಿಂದ ಉಚಿತವಾಗಿ ಪೈಲಟ್‌ ತರಬೇತಿ ಮತ್ತು ವಿಶೇಷ ಪ್ರೋತ್ಸಾಹಧನ ವಿತರಿಸುವ ನಿರ್ಧಾರವನ್ನು ಕೈಗೊಳ್ಳಲಾಗಿದೆ’ ಎಂದರು.

ಕಾರ್ಮಿಕ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗುರುಪ್ರಸಾದ ಎಂ.ಪಿ, ಕಾರ್ಯದರ್ಶಿ ಮನೋಜ್ ಜೈನ್ ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.