ಬೆಂಗಳೂರು:"ಜಮಖಂಡಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ" ಎಂಬ ಆರೋಪದಡಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ವಿರುದ್ಧ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಈ ಸಂಬಂಧ ವಿಚಾರಣಾ ನ್ಯಾಯಾಲಯದ ಸಮನ್ಸ್ ಪ್ರಶ್ನಿಸಿ ಪರಮೇಶ್ವರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಅಲೋಕ್ ಅರಾಧೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ಅಧೀನ ನ್ಯಾಯಾಲಯದ ಮುಂದಿನ ಪ್ರಕ್ರಿಯೆಗೆ ಮಧ್ಯಂತರ ತಡೆ ನೀಡಿದ ನ್ಯಾಯಪೀಠ ವಿಚಾರಣೆಯನ್ನು ಜುಲೈ 4ಕ್ಕೆ ಮುಂದೂಡಿತು.
ಪ್ರತಿವಾದಿಗಳಾದ ಸಾವಳಗಿ ಠಾಣೆ ಪೊಲೀಸ್ ಅಧಿಕಾರಿ ಹಾಗೂ ಚುನಾವಣಾ ಅಧಿಕಾರಿಗೆ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ.
ಪ್ರಕರಣವೇನು?:"ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿದರೆ ಜಂಬಗಿ-ಸಾವಳಗಿ ಮಾರ್ಗದ ರಸ್ತೆಯನ್ನು ಮೂರು ತಿಂಗಳ ಒಳಗಾಗಿ ದುರಸ್ತಿ ಮಾಡಿ ಅಭಿವೃದ್ಧಿಪಡಿಸಲಾಗುವುದು ಎಂದು ಪರಮೇಶ್ವರ್ ಚುನಾವಣಾ ಪ್ರಚಾರದ ವೇಳೆ ಮತದಾರರಿಗೆ ಭರವಸೆ ನೀಡುವ ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ" ಎಂದು ಆರೋಪಿಸಿ ಸ್ಥಳೀಯ ಚುನಾವಣಾಧಿಕಾರಿ ಪರಮೇಶ್ವರ್ ವಿರುದ್ಧ 2018ರ ಅಕ್ಟೋಬರ್ 24 ರಂದು ದೀರು ದಾಖಲಿಸಿದ್ದರು.
ಇದರನ್ವಯ ಪ್ರಕರಣ ಸಾವಳಗಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡೊದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಾಲಯದಲ್ಲಿ ಇದೇ 31ರಂದು ವಿಚಾರಣೆಗೆ ನಿಗದಿಯಾಗಿದೆ.
ಈ ವಿಚಾರಣೆಗೆ ಪರಮೇಶ್ವರ್ ಹಾಜರಾಗಬೇಕಿತ್ತು. ಪರಮೇಶ್ವರ್ ಪರ ಸಂದೀಪ್ ಪಾಟೀಲ್ ವಕಾಲತ್ತು ವಹಿಸಿದ್ದರು ಮತ್ತು ಹಿರಿಯ ವಕೀಲ ಬಿ.ವಿ. ಆಚಾರ್ಯ ವಾದ ಮಂಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.