ADVERTISEMENT

ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭ: ಬೊಮ್ಮಾಯಿ ಮನವಿ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2025, 15:24 IST
Last Updated 11 ಆಗಸ್ಟ್ 2025, 15:24 IST
ಅಶ್ವಿನಿ ವೈಷ್ಣವ್‌ ಅವರಿಗೆ ಬಸವರಾಜ ಬೊಮ್ಮಾಯಿ ಮನವಿ ಸಲ್ಲಿಸಿದರು. 
ಅಶ್ವಿನಿ ವೈಷ್ಣವ್‌ ಅವರಿಗೆ ಬಸವರಾಜ ಬೊಮ್ಮಾಯಿ ಮನವಿ ಸಲ್ಲಿಸಿದರು.    

ನವದೆಹಲಿ: ಗದಗ- ಯಲವಿಗಿ ರೈಲು ಯೋಜನೆಯನ್ನು ಆದಷ್ಟು ಬೇಗ ಪ್ರಾರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಸೋಮವಾರ ಭೇಟಿ ಮಾಡಿದ ಅವರು, ಈ ರೈಲ್ವೆ ಯೋಜನೆ ಹಾವೇರಿ- ಗದಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುತ್ತಿದ್ದು, 58 ಕಿ.ಮೀ ಉದ್ದದ ಈ ಯೋಜನೆಗೆ 2017-18ರಲ್ಲಿ ಕೇಂದ್ರ ಸರ್ಕಾರ ಅನುಮತಿ ನೀಡಿತ್ತು. ಈ ಯೋಜನೆ ಗದಗ, ಹಾವೇರಿ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಅಷ್ಟೇ ಅಲ್ಲದೇ ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕಕ್ಕೆ ಸಂಪರ್ಕ ಕಲ್ಪಿಸುವುದರಿಂದ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಯಾಣಿಕರ ಸಂಚಾರ ಹಾಗೂ ಸರಕು ಸಾಗಾಣಿಕೆಗೆ ಅನುಕೂಲವಾಗುವುದರಿಂದ ಕರ್ನಾಟಕದ ಆರ್ಥಿಕ ಚಟುವಟಿಕೆಗಳನ್ನು ಮೇಲ್ದರ್ಜೆಗೇರಿಸಲು ಸಹಾಯವಾಗುತ್ತದೆʼ ಎಂದು ತಿಳಿಸಿದ್ದಾರೆ.

ʼಈ ಯೋಜನೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಶೇ 50:50 ಅನುಪಾತದಲ್ಲಿ ಹಣಕಾಸು ಒದಗಿಸುತ್ತಿದ್ದು, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಒದಗಿಸಲಿದೆ. ಕರ್ನಾಟಕ ಸರ್ಕಾರವು ಯೋಜನೆಯ ಶೇ 50ರಷ್ಟು ವೆಚ್ಚವನ್ನು ಹಾಗೂ ಉಚಿತ ಭೂಮಿ ಕೊಡುವುದಾಗಿ ತಿಳಿಸಿದೆ. ಸರ್ವೆ ಕಾರ್ಯ ಮುಗಿದಿದ್ದು, ಆಗಸ್ಟ್ ಅಂತ್ಯದೊಳಗೆ ಪರಿಷ್ಕೃತ ಡಿಪಿಆರ್ ಸಿದ್ಧವಾಗಲಿದೆ. ಆದ್ದರಿಂದ ರಾಜ್ಯ ಸರ್ಕಾರದೊಂದಿಗೆ ತಕ್ಷಣವೇ ಸಮನ್ವಯ ಸಾಧಿಸಿ ಡಿಪಿಆರ್ ಪಡೆಯುವಂತೆ ನೈರುತ್ಯ ರೈಲ್ವೆ ವಲಯ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕುʼ ಎಂದು ಅವರು ಮನವಿ ಮಾಡಿದ್ದಾರೆ.

ADVERTISEMENT

ಯೋಜನೆಯ ಮೊದಲ ಹಂತದ ವೆಚ್ಚ ₹650 ಕೋಟಿಯನ್ನು ಬಿಡುಗಡೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ವಿನಂತಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.