ADVERTISEMENT

ಗಣಪತಿ ಮೂರ್ತಿ 2-4 ಅಡಿ ನಿರ್ಬಂಧ ಸರ್ಕಾರ ಹಿಂಪಡೆಯಬೇಕು: ಡಿಕೆಶಿ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2021, 8:38 IST
Last Updated 8 ಸೆಪ್ಟೆಂಬರ್ 2021, 8:38 IST
ಗಣೇಶ ಮೂರ್ತಿಗಳು
ಗಣೇಶ ಮೂರ್ತಿಗಳು   

ಬೆಂಗಳೂರು: ‘ಗಣೇಶ ಹಬ್ಬಕ್ಕೆ ಕೇವಲ ಮೂರು ದಿನ ಬಾಕಿ ಇರುವಾಗ ಮನೆಯಲ್ಲಿ 2 ಅಡಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ 4 ಅಡಿ ಗಣೇಶ ಮೂರ್ತಿ ಇಡಬೇಕೆಂಬ ಅರ್ಥಹೀನ ನಿರ್ಬಂಧ ಹೇರುವ ಮೂಲಕ ಮೂರ್ತಿ ತಯಾರಕರ ಬದುಕಿನ ಜತೆ ರಾಜ್ಯ ಸರ್ಕಾರ ಚೆಲ್ಲಾಟವಾಡಿದೆ. ತಕ್ಷಣ ಈ ಆದೇಶ ಹಿಂಪಡೆಯಬೇಕು ಮತ್ತು ಮೂರ್ತಿ ತಯಾರಕರಿಗೆ ಪರಿಹಾರ ನೀಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.

‘ಎರಡು ತಿಂಗಳಿಂದ ಗಣೇಶ ಮೂರ್ತಿ ತಯಾರಕರು ಲಕ್ಷಾಂತರ ಮೂರ್ತಿಗಳನ್ನು ತಯಾರಿಸಿದ್ದಾರೆ. ಸರ್ಕಾರ ಕೊನೆಕ್ಷಣದಲ್ಲಿ ಇಂಥ ನಿರ್ಬಂಧ ಹೇರಿದರೆ ಅವರ ಸ್ಥಿತಿ ಏನಾಗಬೇಕು? ಸರ್ಕಾರ ಇದನ್ನೇ ಎರಡು ಮೂರು ತಿಂಗಳ ಹಿಂದೆಯೇ ಹೇಳಿದ್ದರೆ, ಮೂರ್ತಿ ತಯಾರಕರು ದೊಡ್ಡ ಮೂರ್ತಿಗಳನ್ನು ಮಾಡುತ್ತಲೇ ಇರಲಿಲ್ಲ' ಎಂದಿದ್ದಾರೆ.

'ಕೋವಿಡ್ ಸಮಯದಲ್ಲಿ ಆದಾಯ ಇಲ್ಲದಿದ್ದ ಗಣೇಶ ಮೂರ್ತಿ ತಯಾರಕರು, ತಮ್ಮ ಬಳಿ ಇದ್ದಬದ್ದ ಹಣ ಹಾಕಿ ಮೂರ್ತಿಗಳನ್ನು ತಯಾರಿಸಿದ್ದಾರೆ. ಸರ್ಕಾರ ಇದುವರೆಗೂ ಅವರಿಗೆ ನಯಾ ಪೈಸೆ ಕೋವಿಡ್ ಪರಿಹಾರ ಕೊಟ್ಟಿಲ್ಲ. ಹೀಗಿರುವಾಗ ಈ ರೀತಿ ನಿರ್ಬಂಧ ಎಷ್ಟು ಸರಿ? ದೇವರ ಮೂರ್ತಿ ಮಾಡಿಕೊಂಡು ಜೀವನ ನಡೆಸುವವರ ಬದುಕಿಗೆ ಸರ್ಕಾರ ಕೊಳ್ಳಿ ಇಟ್ಟಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

‘ಗಣೇಶೋತ್ಸವಕ್ಕೆ ಕಡಿವಾಣ ಹಾಕುವ ಭರದಲ್ಲಿ ಭಕ್ತ ಹಾಗೂ ಭಗವಂತನ ನಡುವೆ ಸರ್ಕಾರ ಕಂದಕ ನಿರ್ಮಿಸಿರುವುದು ದುರದೃಷ್ಟಕರ ಸಂಗತಿ. ಗಣೇಶ ಪ್ರತಿಮೆಯನ್ನು ಮನೆಯಲ್ಲಿ 2 ಅಡಿ, ಸಾರ್ವಜನಿಕ ಪ್ರದೇಶದಲ್ಲಿ 4 ಅಡಿಗೆ ಸೀಮಿತಗೊಳಿಸಿ, ದೇವರಿಗೂ ನೀನು ಇಷ್ಟೇ ಎತ್ತರ ಇರಬೇಕು ಎಂದು ನಿಯಂತ್ರಣ ಹೇರುತ್ತಿದ್ದಾರೆ’ ಎಂದು ಕುಟುಕಿದ್ದಾರೆ.

'ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚು ಜನ ಸೇರಬಾರದು, ಮೆರವಣಿಗೆ ಮಾಡಬಾರದು ಎಂಬುದನ್ನು ಒಪ್ಪುತ್ತೇವೆ. ಆದರೆ, ಗಣೇಶನ ಪ್ರತಿಮೆ 2-4 ಅಡಿಯೇ ಇರಬೇಕು ಎಂಬ ನಿರ್ಬಂಧದ ಹಿಂದೆ ಯಾವ ತರ್ಕ ಇದೆ. ಹಿಂದೂ ಸಂಸ್ಕೃತಿ ವಕ್ತಾರರು ಎಂದು ಹೇಳಿಕೊಳ್ಳುವವರು ಮಾಡುವ ಕೆಲಸ ಇದೇನಾ’ ಎಂದು ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.

'ಸರ್ಕಾರ ಅಂತಿಮ ಗಳಿಗೆಯಲ್ಲಿ ಈ ನಿರ್ಧಾರ ತೆಗೆದುಕೊಂಡರೆ, ಈಗ ಮಾಡಿರುವ ಮೂರ್ತಿಗಳನ್ನು ನಿರ್ಧಾರ ಪ್ರಕಟಿಸಿರುವವರ ಮನೆ ಮುಂದೆ ಇಡಬೇಕಾ? ನಿರ್ಧಾರ ಪ್ರಕಟಿಸಿರುವವರೇ ಇವುಗಳನ್ನು ಖರೀದಿಸಲಿ. ಸರ್ಕಾರದ ಈ ತಿಕ್ಕಲುತನದ ನಿರ್ಧಾರ, ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ’ ಎಂಬಂತಿದೆ’ ಎಂದೂ ಅವರು ಟೀಕಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.