ADVERTISEMENT

ಬೆಂಗಳೂರು | ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ: ಕಠಿಣ ಕ್ರಮಕ್ಕೆ ವಿಜಯೇಂದ್ರ ಆಗ್ರಹ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಫೆಬ್ರುವರಿ 2025, 5:15 IST
Last Updated 23 ಫೆಬ್ರುವರಿ 2025, 5:15 IST
ಬಿ.ವೈ. ವಿಜಯೇಂದ್ರ
ಬಿ.ವೈ. ವಿಜಯೇಂದ್ರ   

ಬೆಂಗಳೂರು: ನಗರದಲ್ಲಿ 32 ವರ್ಷದ ವಿವಾಹಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆಯನ್ನು ಖಂಡಿಸಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪ್ರಜಾವಾಣಿ ವರದಿ ಉಲ್ಲೇಖಿಸಿ ಪೋಸ್ಟ್‌ ಮಾಡಿರುವ ಅವರು, ‘ಸಂಸ್ಕೃತಿ, ಸಂಸ್ಕಾರ, ಸುರಕ್ಷತೆ ಎಂದರೆ ಕರ್ನಾಟಕ ಎಂಬ ಖ್ಯಾತಿ ಪಡೆದಿದ್ದ ನಮ್ಮ ರಾಜ್ಯ ದರೋಡೆಕೋರರು ಹಾಗೂ ಅತ್ಯಾಚಾರಿಗಳ ತಾಣ ಎಂಬ ಕುಖ್ಯಾತಿಗೆ ಒಳಗಾಗುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ 32 ವರ್ಷದ ವಿವಾಹಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ವರದಿ ಅತ್ಯಂತ ಹೇಯ ಹಾಗೂ ಅಮಾನವೀಯ ಘಟನೆಯಾಗಿದ್ದು ಸ್ತ್ರೀ ಕುಲಕ್ಕೆ ರಕ್ಷಣೆ ನೀಡಲು ಸಾಧ್ಯವಾಗದ ಪರಿಸ್ಥಿತಿಗೆ ರಾಜ್ಯದ ಕಾನೂನು ಸುವ್ಯವಸ್ಥೆ ಬಂದು ತಲುಪಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ಸರ್ಕಾರದಲ್ಲಿ ಈಗ ನಡೆಯುತ್ತಿರುವುದು ಕೇವಲ ಗುಂಪುಗಾರಿಕೆಯ ರಾಜಕಾರಣ ಮಾತ್ರ. ಜನಹಿತ ಹಾಗೂ ಸಮಾಜ ಸುರಕ್ಷತೆಯನ್ನು ಮರೆತಿರುವ ಈ ಸರ್ಕಾರದ ವ್ಯವಸ್ಥೆಯಲ್ಲಿ ನಾಗರಿಕರು ಅಸುರಕ್ಷತೆಯ ವಾತಾವರಣ ಎದುರಿಸುತ್ತಿದ್ದಾರೆ. ಈ ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಇದೆಯೇ? ಗೃಹ ಇಲಾಖೆ ಇದೆಯೇ? ಒಂದು ಸರ್ಕಾರ ಈ ರಾಜ್ಯವನ್ನು ಆಳುತ್ತಿದೆಯೇ? ಎಂಬ ಪ್ರಶ್ನೆ ಜನಸಾಮಾನ್ಯರಿಂದ ಕೇಳಿ ಬರುತ್ತಿದೆ ಎಂದು ವಿಜಯೇಂದ್ರ ಕಿಡಿಕಾರಿದ್ದಾರೆ.

ADVERTISEMENT

ಒಂದು ಕಡೆ ಅಭಿವೃದ್ಧಿಯೂ ಇಲ್ಲ, ಮತ್ತೊಂದು ಕಡೆ ಆಡಳಿತ ನಿರ್ವಹಣೆಯಲ್ಲಿಯೂ ಸಂಪೂರ್ಣ ವಿಫಲ. ಕನಿಷ್ಠ ಕಾನೂನು ಸುರಕ್ಷತೆಯನ್ನಾದರೂ ಒದಗಿಸಲಾಗದ ಈ ಸರ್ಕಾರ ಯಾವ ಮುಖ ಹೊತ್ತುಕೊಂಡು ಅಧಿಕಾರದಲ್ಲಿದೆ ಎಂದು ಜನ ಪ್ರಶ್ನಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಅತ್ಯಾಚಾರಿ ದುರುಳರ ವಿರುದ್ಧ ಕಠಿಣ ಕ್ರಮಕ್ಕೆ ಒಳಪಡಿಸಲಿ ಎಂದು ಅವರು ಆಗ್ರಹಿಸಿದ್ದಾರೆ.

ಸರಣಿ ರೂಪದಲ್ಲಿ ನಡೆಯುತ್ತಿರುವ ಕೊಲೆ, ದರೋಡೆ ಪ್ರಕರಣಗಳು, ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳಿಂದ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದ್ದು, ರಾಜ್ಯದಲ್ಲಿ ಅರಾಜಕತೆ ಪರಿಸ್ಥಿತಿ ಉಂಟಾಗಿರುವುದನ್ನು ಸಾಕ್ಷೀಕರಿಸುತ್ತಿದೆ. ಇಂತಹ ಘಟನೆಗಳು ಮರುಕಳಿಸುತ್ತಿದ್ದರೆ ಈ ಸರ್ಕಾರಕ್ಕೆ ಜನರೇ ತಕ್ಕಪಾಠ ಕಲಿಸುವ ಪರಿಸ್ಥಿತಿ ಉದ್ಭವಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ಕಾನೂನು ಸುವ್ಯವಸ್ಥೆಯ ಭದ್ರತೆಗಾಗಿ ಬಿಜೆಪಿ ಹೋರಾಡಲಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.