ADVERTISEMENT

ಗಂಗಾಕಲ್ಯಾಣ: 2018ರಿಂದ ನಡೆದ ಅಕ್ರಮಗಳ ತನಿಖೆ– ವಿಧಾನಸಭೆಯಲ್ಲಿ ಬೊಮ್ಮಾಯಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2022, 11:33 IST
Last Updated 14 ಸೆಪ್ಟೆಂಬರ್ 2022, 11:33 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   

ಬೆಂಗಳೂರು: ಗಂಗಾ ಕಲ್ಯಾಣ ಯೋಜನೆಯಲ್ಲಿ 2018 ರಿಂದ ಈಚೆಗೆ ನಡೆದ ಎಲ್ಲ ಅಕ್ರಮಗಳ ಬಗ್ಗೆ ತನಿಖೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ನ ಯತೀಂದ್ರ ಸಿದ್ದರಾಮಯ್ಯ ವಿಷಯ ಪ್ರಸ್ತಾಪಿಸಿದರು. ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಉತ್ತರದಿಂದ ಸಮಾಧಾನಗೊಳ್ಳಲಿಲ್ಲ.

ಗಂಗಾ ಕಲ್ಯಾಣ ಯೋಜನೆಯಲ್ಲಿ ₹430 ಕೋಟಿ ಮೊತ್ತದಷ್ಟು ಅವ್ಯವಹಾರ ನಡೆದಿದೆ. ಆದರೆ, ಸರ್ಕಾರ ಸಮರ್ಪಕವಾಗಿ ಉತ್ತರ ನೀಡಿಲ್ಲ ಎಂದು ದೂರಿ ಕಾಂಗ್ರೆಸ್‌ನ ಪ್ರಿಯಾಂಕ ಖರ್ಗೆ, ಯತೀಂದ್ರ ಸಿದ್ದರಾಮಯ್ಯ, ಪ್ರಸಾದ್ ಅಬ್ಬಯ್ಯ, ಭೀಮಾ ನಾಯಕ್ ಧರಣಿ ನಡೆಸಲು ಸಭಾಧ್ಯಕ್ಷರ ಪೀಠದ ಮುಂದೆ ಧಾವಿಸಿದರು. ಆರೋಪಗಳ ಕುರಿತು ಶಾಸಕರ ಸಭೆ ಕರೆಸುತ್ತೇನೆ ಎಂದು ಸಮಾಜ ಕಲ್ಯಾಣ ಸಚಿವ ಭರವಸೆ ನೀಡಿದರೂ ಕಾಂಗ್ರೆಸ್‌ ಸದಸ್ಯರು ಜಗ್ಗಲಿಲ್ಲ.

ADVERTISEMENT

ಕಾಂಗ್ರೆಸ್‌ ಸದಸ್ಯರು ಸದನದಲ್ಲಿ ಈ ವಿಷಯದ ಬಗ್ಗೆ ದೊಡ್ಡ ಗದ್ದಲ ಎಬ್ಬಿಸಬಹುದು ಎಂಬುದನ್ನು ಅರಿತ ಬೊಮ್ಮಾಯಿ, ಈ ವಿಚಾರವನ್ನು ತನಿಖೆ ಒಪ್ಪಿಸುತ್ತೇನೆ. 2018 ರಿಂದ ಈ ವರೆಗಿನ ಎಲ್ಲ ಪ್ರಕರಣಗಳನ್ನು ತನಿಖೆ ಮಾಡಿಸುತ್ತೇನೆ ಎಂದು ಬೊಮ್ಮಾಯಿ ಹೇಳಿದ ಬಳಿಕ ಕಾಂಗ್ರೆಸ್ ಸದಸ್ಯರು ಧರಣಿ ನಿಲ್ಲಿಸಿದರು.

ಇದಕ್ಕೂ ಮುನ್ನ ಉತ್ತರ ನೀಡಿದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಅವರು, ಕೊಳವೆ ಬಾವಿಗಳನ್ನು ತೋಡಿಸುವ ವ್ಯವಸ್ಥೆಯನ್ನು ಪಾರದರ್ಶಕವಾಗಿ ನಡೆಸುವ ವ್ಯವಸ್ಥೆ ಮಾಡಿದ್ದೇವೆ. ಹಿಂದೆ ಕೊಳವೆ ಬಾವಿ ಕೊರೆಸುವವರು ಒಬ್ಬರು, ಪಂಪ್‌ ಅಳವಡಿಸುವವರು ಮತ್ತು ವಿದ್ಯುತ್‌ ಸಂಪರ್ಕ ನೀಡುವವರು ಒಬ್ಬರೇ ಆಗಿದ್ದರು. ಈಗ ಕೊಳವೆ ಬಾವಿ ತೋಡಿಸುವವರೇ ಪಂಪ್‌ ಹಾಕಿಸಿ ವಿದ್ಯುತ್‌ ಸಂಪರ್ಕವನ್ನೂ ನೀಡಬೇಕು ಎಂದು ಮಾಡಲಾಗಿದೆ. ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ಪಾವತಿ ಮಾಡಲಾಗುತ್ತದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.