ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸುಧನ್ವ ಗೊಂಧಾಳೇಕರ್ನನ್ನು ಎಸ್ಐಟಿ ಪೊಲೀಸರ ವಶಕ್ಕೆ ನೀಡಿ ಪುಣೆ ನ್ಯಾಯಾಲಯ ಶುಕ್ರವಾರ ಆದೇಶಿಸಿದೆ.
2017ರ ಸೆ.5ರ ಮಧ್ಯಾಹ್ನ ಗೌರಿ ಅವರ ಮನೆ ಬಳಿ ಸುಧನ್ವ ಸಹಚರನೊಂದಿಗೆ ಓಡಾಡಿದ್ದ. ಆ ದೃಶ್ಯ ‘ಸನ್ ರೈಸ್ ರೆಸಿಡೆನ್ಸಿ’ ಅಪಾರ್ಟ್ಮೆಂಟ್ ಸಮುಚ್ಚಯದ ಸಿ.ಸಿ ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಆ ಸಾಕ್ಷ್ಯವನ್ನು ಪುಣೆ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಎಸ್ಐಟಿ, ಹೆಚ್ಚಿನ ವಿಚಾರಣೆಗಾಗಿ ಆತನನ್ನು ಕಸ್ಟಡಿಗೆ ನೀಡುವಂತೆ ಕೋರಿತ್ತು. ಆ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ.
‘ಪುಣೆಯಲ್ಲಿರುವ ನಮ್ಮ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದುಕೊಂಡಿದ್ದು, ಶನಿವಾರ ನಗರಕ್ಕೆ ಕರೆತರಲಿದ್ದಾರೆ’ ಎಂದು ಎಸ್ಐಟಿ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.