ADVERTISEMENT

ಸಮರ್ಪಕ ಅಭಿವೃದ್ಧಿಗೆ ಜಿಬಿಎ: ಮುಖ್ಯಮಂತ್ರಿ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2025, 1:05 IST
Last Updated 11 ಅಕ್ಟೋಬರ್ 2025, 1:05 IST
<div class="paragraphs"><p>ಸಿದ್ದರಾಮಯ್ಯ&nbsp;, ಮುಖ್ಯಮಂತ್ರಿ</p></div>

ಸಿದ್ದರಾಮಯ್ಯ , ಮುಖ್ಯಮಂತ್ರಿ

   

ಬೆಂಗಳೂರು: ‘ಅತಿ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದ ಸಮಸ್ತ ಜನರಿಗೆ ಸುಗಮ ಆಡಳಿತ, ಸಮರ್ಪಕ‌ ಅಭಿವೃದ್ಧಿಗಾಗಿ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ (ಜಿಬಿಎ) ಅಸ್ತಿತ್ವಕ್ಕೆ ತರಲಾಗಿದೆ. ಅದರಡಿ ಐದು ನಗರ ಪಾಲಿಕೆಗಳನ್ನು ರಚಿಸಲಾಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ದ ಮೊದಲ ಸಭೆಯ ಶುಕ್ರವಾರ ನಡೆಯಿತು. ಸಭೆಯಲ್ಲಿ ಜಿಬಿಎ ರಚನೆ ಹಿಂದಿನ‌ ಉದ್ದೇಶಗಳನ್ನು ಪ್ರಸ್ತಾಪಿಸಿ, ನಗರದ ಸರ್ವತೋಮುಖ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ADVERTISEMENT

‘ಕಸ ವಿಲೇವಾರಿ ಆಗಬೇಕು. ಪಾಲಿಕೆಗಳ ಆದಾಯ ಹೆಚ್ಚಳ ಆಗಬೇಕು. ಟ್ರಾಫಿಕ್ ದಟ್ಟಣೆ ನಿವಾರಣೆ ಆಗಬೇಕು. ನಗರವನ್ನು ಚೊಕ್ಕವಾಗಿಡಬೇಕು. ರಸ್ತೆ, ಚರಂಡಿ, ಪಾದಚಾರಿ ಮಾರ್ಗ, ಉದ್ಯಾನಗಳ ನಿರ್ಮಾಣಕ್ಕೆ ಆದ್ಯತೆ ನೀಡಿ ಮಾದರಿ ಪಾಲಿಕೆಗಳನ್ನಾಗಿ ರೂಪಿಸಬೇಕು ಎನ್ನುವ ಮಹತ್ತರ ಗುರಿ ಮತ್ತು ಉದ್ದೇಶಗಳೊಂದಿಗೆ ಕಾರ್ಯನಿರ್ವಹಿಸಬೇಕು’ ಎಂದು ಅಧಿಕಾರಿಗಳಿಗೆ ಕಟ್ಟಪ್ಪಣೆ ಮಾಡಿದರು.

‘ಬೆಂಗಳೂರಿನ ಜನಸಂಖ್ಯೆ 1.40 ಕೋಟಿ ತಲುಪಿದೆ. ಒಂದು ಪಾಲಿಕೆಯಿಂದ ದೊಡ್ಡ ನಗರದ ಸಮರ್ಪಕ ಅಭಿವೃದ್ಧಿ ಬಹಳ ದೊಡ್ಡ ಸವಾಲು. ಈ ಚರ್ಚೆ ಹಲವು ವರ್ಷಗಳಿಂದ ಇದ್ದೇ ಇದೆ. ಒಂದಕ್ಕಿಂತ ಹೆಚ್ಚು ಪಾಲಿಕೆಗಳಿಂದ ಅಭಿವೃದ್ಧಿ ಸಾಧ್ಯ ಎನ್ನುವ ಕಾರಣಕ್ಕೆ, ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗಲೇ ಸಮಿತಿ ರಚಿಸಲಾಗಿತ್ತು. ನಂತರ ಬಂದ ಸರ್ಕಾರಗಳು ಈ ದಿಕ್ಕಿನಲ್ಲಿ ಗಮನಹರಿಸಲೇ ಇಲ್ಲ. ನಮ್ಮ ಸರ್ಕಾರವೇ ಪುನಃ ಅಧಿಕಾರಕ್ಕೆ ಬಂದ ಬಳಿಕ ಸಮಿತಿಯನ್ನು ಪುನರ್‌ ರಚಿಸಿ, ಅದು ನೀಡಿದ ವರದಿಯಂತೆ ಮುಖ್ಯಮಂತ್ರಿ ಅಧ್ಯಕ್ಷತೆಯ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದಿದೆ’ ಎಂದರು.

‘ನಮ್ಮ ಗುರಿ ಮತ್ತು ಉದ್ದೇಶ ನೆರವೇರಲು ಜಲಮಂಡಳಿ, ಬಿಡಿಎ, ಬೆಸ್ಕಾಂ ಸೇರಿ ಎಲ್ಲಾ ಇಲಾಖೆಗಳು ಜಿಬಿಎ ಜತೆ ಪರಸ್ಪರ ಸಹಕಾರ, ಸಹಯೋಗವನ್ನು ಅತ್ಯಂತ ಕಡ್ಡಾಯವಾಗಿ ಆಚರಣೆಗೆ ತರಬೇಕು’ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.