ಆರ್. ಆಶೋಕ, ಸಿದ್ದರಾಮಯ್ಯ
ಪ್ರಜಾವಾಣಿ ಚಿತ್ರ
ಬೆಂಗಳೂರು: ಜರ್ಮನಿಯ ಚಾನ್ಸಲರ್ ಫ್ರೆಡ್ರಿಕ್ ಮೆರ್ಜ್ ಅವರು ಬೆಂಗಳೂರಿಗೆ ಮಂಗಳವಾರ ಭೇಟಿ ನೀಡಿದ್ದು, ಅವರನ್ನು ಸ್ವಾಗತಿಸಲು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಹಾಜರಾಗದೇ ಲೋಪ ಎಸಗಿದ್ದಾರೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ ಟೀಕಿಸಿದ್ದಾರೆ.
ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಮೆರ್ಜ್ ಅವರನ್ನು ಬರ ಮಾಡಿಕೊಂಡರು.
‘ಜಗತ್ತಿನ ಮೂರನೇ ಅತಿದೊಡ್ಡ ಆರ್ಥಿಕತೆಯ ಮತ್ತು ಪ್ರಭಾವಿ ದೇಶವೊಂದರ ಮುಖ್ಯಸ್ಥ ಬಂದಾಗ ಸ್ವತಃ ಮುಖ್ಯಮಂತ್ರಿ ಸ್ವಾಗತಿಸಲು ಹೋಗಬೇಕಿತ್ತು’ ಎಂದು ಅಶೋಕ ‘ಎಕ್ಸ್’ನಲ್ಲಿ ತಿಳಿಸಿದ್ದಾರೆ.
‘ಯಾವುದೇ ಒಬ್ಬ ಜವಾಬ್ದಾರಿಯುತ ಮುಖ್ಯಮಂತ್ರಿ, ಇಂತಹ ಜಾಗತಿಕ ನಾಯಕರನ್ನು ಬರಮಾಡಿಕೊಂಡು, ಈ ಭೇಟಿಯನ್ನು ರಾಜ್ಯದ ಏಳಿಗೆಗಾಗಿ ಬಳಸಿಕೊಳ್ಳುತ್ತಿದ್ದರು. ನಮ್ಮ ರಾಜ್ಯದ ಹೂಡಿಕೆ, ಉದ್ಯೋಗ ಸೃಷ್ಟಿ ಮತ್ತು ಕೈಗಾರಿಕಾ ಅಭಿವೃದ್ಧಿಯನ್ನು ವೃದ್ಧಿಸಿಕೊಳ್ಳಲು ಸಿಕ್ಕಿರುವ ಒಂದು ಸುವರ್ಣ ಅವಕಾಶ ಎಂದು ಜಾಗತಿಕ ನಾಯಕರ ಭೇಟಿಯನ್ನು ಗಂಭೀರವಾಗಿ ಪರಿಗಣಿಸುತ್ತಿದ್ದರು. ಆದರೆ, ಸಿದ್ದರಾಮಯ್ಯ ಎಡವಿದ್ದಾರೆ’ ಎಂದು ಅವರು ಹೇಳಿದ್ದಾರೆ.
‘ಒಂದು ಕಡೆ ಜರ್ಮನಿಯ ಚಾನ್ಸಲರ್ ಬೆಂಗಳೂರಿಗೆ ಬಂದರೆ, ಮತ್ತೊಂದೆಡೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಊಟಿಗೆ ಹೋಗುವ ದಾರಿಯಲ್ಲಿ ಸುಮ್ಮನೆ ಹಾದು ಹೋಗುತ್ತಿದ್ದ ರಾಹುಲ್ಗಾಂಧಿಯನ್ನು ಸ್ವಾಗತಿಸಲು ಸಾಲುಗಟ್ಟಿ ನಿಂತಿದ್ದರು. ಇದು ನಮ್ಮ ರಾಜ್ಯದ ದುರಂತ. ಇದು ಕೇವಲ ಶಿಷ್ಟಾಚಾರದ ಲೋಪವಲ್ಲ, ಕರ್ನಾಟಕದ ಹಿತಾಸಕ್ತಿಗೆ ಮಾಡಿದ ದ್ರೋಹ. ಗುಲಾಮಗಿರಿಯ ಪರಾಕಾಷ್ಠೆ’ ಎಂದು ಟೀಕಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.