ADVERTISEMENT

ಪ್ರತಿಪಕ್ಷ ಸ್ಥಾನಕ್ಕೂ ಸಿದ್ಧರಾಗಿ: ಸಭೆಯಲ್ಲಿ ಕಾಂಗ್ರೆಸ್ ಶಾಸಕರಿಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 10 ಜುಲೈ 2019, 2:00 IST
Last Updated 10 ಜುಲೈ 2019, 2:00 IST
ಕಾಂಗ್ರೆಸ್‌ನ ಸಿಎಲ್‌ಪಿ ಸಭೆಯಲ್ಲಿ ಜಿ.ಪರಮೇಶ್ವರ, ಸಿದ್ದರಾಮಯ್ಯ, ಕೆ.ಸಿ.ವೇಣುಗೋಪಾಲ್‌ ಇದ್ದಾರೆ.
ಕಾಂಗ್ರೆಸ್‌ನ ಸಿಎಲ್‌ಪಿ ಸಭೆಯಲ್ಲಿ ಜಿ.ಪರಮೇಶ್ವರ, ಸಿದ್ದರಾಮಯ್ಯ, ಕೆ.ಸಿ.ವೇಣುಗೋಪಾಲ್‌ ಇದ್ದಾರೆ.   

ಬೆಂಗಳೂರು: ಪ್ರತಿ ಪಕ್ಷದ ಸ್ಥಾನದಲ್ಲಿ ಕುಳಿತುಕೊಳ್ಳುವುದೂ ಸೇರಿದಂತೆ ಯಾವುದೇ ಸನ್ನಿವೇಶ ನಿರ್ಮಾಣವಾದರೂಎದುರಿಸಲು ಸಿದ್ಧರಾಗುವಂತೆ ಕಾಂಗ್ರೆಸ್ ಶಾಸಕರಿಗೆ ಸೂಚನೆ ನೀಡಲಾಗಿದೆ.

ಮಂಗಳವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುಮಾರು ಒಂದೂವರೆ ಗಂಟೆ ಕಾಲ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲಾಗಿದೆ.

ಈ ಸಮಯದಲ್ಲಿ ಕೆಲವರು ಶಾಸಕರ ರಾಜೀನಾಮೆ ವಿಷಯ ಪ್ರಸ್ತಾಪಿಸಿ, ‘ಗೊಂದಲ ನಿರ್ಮಾಣವಾಗಿರುವ ಇಂತಹ ಸನ್ನಿವೇಶದಲ್ಲಿ
ಮೈತ್ರಿ ಸರ್ಕಾರದಲ್ಲಿ ಮುಂದುವರಿಯುವುದು ಬೇಡ. ಪ್ರತಿ ಪಕ್ಷದ ಸ್ಥಾನದಲ್ಲಿ ಕುಳಿತುಕೊಂಡರೂ ಚಿಂತೆ ಇಲ್ಲ‘ ಎಂದು ಸಲಹೆ ನೀಡಿದ್ದಾರೆ. ಇದಕ್ಕೆ ಮತ್ತೆ ಕೆಲವರು ಸಹಮತ ವ್ಯಕ್ತಪಡಿಸಿದ್ದಾರೆ. ಮಧ್ಯೆ ಪ್ರವೇಶಿಸಿದ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಈಗ ಈ ಮಾತುಗಳು ಬೇಡ ಎಂದು ಸುಮ್ಮನಾಗಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಶಾಸಕರು ರಾಜೀನಾಮೆ ನೀಡಿ, ಪಕ್ಷದಿಂದ ಹೊರ ಹೋಗುತ್ತಿರುವುದು ಹಾಗೂ ಮುಂದೆ ಮತ್ತಷ್ಟು ಶಾಸಕರು ರಾಜೀನಾಮೆ ನೀಡದಂತೆ ತಡೆಯುವ ಬಗ್ಗೆ ಚರ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ವಿಧಾನಸಭೆ ಚುನಾವಣೆ ಎದುರಿಸಲು ಸಜ್ಜಾಗುವಂತೆಯೂ ಸಲಹೆ ನೀಡಲಾಗಿದೆ.

ಅಧಿವೇಶನ: ಸಭೆಯ ನಂತರ ಮಾತನಾಡಿದ ಸಿದ್ದರಾಮಯ್ಯ, ‘ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಲಾಯಿತು. ಇದೇ 12ರಿಂದ ವಿಧಾನಸಭೆ ಅಧಿವೇಶನ ಆರಂಭವಾಗಲಿದ್ದು, ಏನೆಲ್ಲ ಚರ್ಚೆ ಮಾಡಬೇಕು ಎಂದು ಸಲಹೆ ನೀಡಲಾಗಿದೆ. ಹಣಕಾಸು ಮಸೂದೆಗೆ ಒಪ್ಪಿಗೆ ನೀಡಬೇಕಿದ್ದು, ಪಕ್ಷದ ಎಲ್ಲ ಶಾಸಕರು ಉಪಸ್ಥಿತರಿರುವಂತೆ ಸೂಚನೆ ನೀಡಲಾಗಿದೆ ಎಂದರು.

ಪಕ್ಷದ ಚಿಹ್ನೆ ಮೇಲೆ ಆಯ್ಕೆಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದವರ ವಿರುದ್ಧ ಪಕ್ಷಾಂತರ ನಿಷೇಧ ಕಾಯಿದೆ ಅನ್ವಯ ಕ್ರಮ ಕೈಗೊಳ್ಳುವಂತೆ ಕೋರಿ ವಿಧಾನ ಸಭಾಧ್ಯಕ್ಷರಿಗೆ ಮನವಿ ಸಲ್ಲಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ನಮ್ಮ ಶಾಸಕರು ಬಿಜೆಪಿ ಬಲೆಗೆ ಸಿಲುಕಿದ್ದು, ಅಂತಹವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಲಾಗುವುದು ಎಂದು ತಿಳಿಸಿದರು.

ಹಣ ಎಲ್ಲಿಂದ ಬಂತು?

ಮೈತ್ರಿ ಪಕ್ಷಗಳ ಶಾಸಕರ ರಾಜೀನಾಮೆ ಕೊಡಿಸಲು ಹಣ ಹಾಗೂ ಅಧಿಕಾರದ ಆಮಿಷ ಒಡ್ಡಲಾಗುತ್ತಿದೆ. ಶಾಸಕರಿಗೆ ಕೋಟಿಗಟ್ಟಲೆ ಹಣ ನೀಡಲು ಎಲ್ಲಿಂದ ಬಂತು ಹಣ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಶಾಸಕರ ಖರೀದಿಗೆ ಇಷ್ಟೊಂದು ದೊಡ್ಡ ಮೊತ್ತದ ಹಣವನ್ನು ಬಿಜೆಪಿಗೆ ಯಾರು ಕೊಟ್ಟಿದ್ದಾರೆ ಎಂಬುದು ಗೊತ್ತಾಗಬೇಕು. ಅಕ್ರಮವಾಗಿ ಹಣ ತಂದು ಶಾಸಕರನ್ನು ಖರೀದಿಸಲಾಗುತ್ತಿದೆ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.