ADVERTISEMENT

ಕೃಷಿ ಕಾಯ್ದೆ ಹಿಂಪಡೆಯಲು ಆಗ್ರಹ: 12ರಂದು ವಿಧಾನಸೌಧಕ್ಕೆ ಮುತ್ತಿಗೆ– ರೈತ ಸಂಘ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2022, 13:18 IST
Last Updated 9 ಸೆಪ್ಟೆಂಬರ್ 2022, 13:18 IST
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರಧಾನ ಕಾರ್ಯದರ್ಶಿ ಜೆ.ಕಾರ್ತಿಕ್
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರಧಾನ ಕಾರ್ಯದರ್ಶಿ ಜೆ.ಕಾರ್ತಿಕ್    

ಹೊಸಪೇಟೆ (ವಿಜಯನಗರ): ‘ಕೃಷಿ ಕಾಯ್ದೆ ಹಿಂಪಡೆಯಬೇಕು. ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ಸೆ. 12ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರಧಾನ ಕಾರ್ಯದರ್ಶಿ ಜೆ.ಕಾರ್ತಿಕ್ ತಿಳಿಸಿದರು.

ದೇಶದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಿರಂತರವಾಗಿ ರೈತರ ಮೇಲೆ ಶೋಷಣೆ ಮಾಡುತ್ತಿದೆ. ಈ ಹಿಂದೆ ಮೂರು ಕೃಷಿ ಕಾಯ್ದೆಗಳನ್ನು ಜಾರಿಗೆ ತರಲಾಗಿತ್ತು. ರೈತರ ಭಾರಿ ವಿರೋಧದಿಂದ ಕೇಂದ್ರ ಸರ್ಕಾರ ಅದನ್ನು ಹಿಂಪಡೆಯಿತು. ಆದರೆ, ರಾಜ್ಯದಲ್ಲಿ ಹಿಂಪಡೆದಿಲ್ಲ. ಈಗ ವಿದ್ಯುತ್‌ ಕ್ಷೇತ್ರವನ್ನು ಖಾಸಗೀಕರಣಗೊಳಿಸಿ, ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಸಿ ರೈತರನ್ನು ಒಕ್ಕಲುತನದಿಂದ ಹೊರದಬ್ಬಲು ಹುನ್ನಾರ ನಡೆಸುತ್ತಿದೆ ಎಂದು ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ‘ಕಿಸಾನ್ ಸಮ್ಮಾನ್‌‘ ಬೇಕಿಲ್ಲ. ರೈತರು ಬೆಳೆಯುವ ಬೆಳೆಗಳಿಗೆ ವೈಜ್ಞಾನಿಕ ಬೆಲೆ ಕೊಡಬೇಕು. ಬೆಳೆ ನಷ್ಟದ ಪರಿಹಾರ ಧನ ಹೆಚ್ಚಿಸಬೇಕು. ಸಾಲ ಮನ್ನಾ ಮಾಡಬೇಕು. ಕುಟೀರ ಜ್ಯೋತಿ, ಭಾಗ್ಯ ಜ್ಯೋತಿ ಯೋಜನೆಗಳನ್ನು ಯಥಾವತ್ತಾಗಿ ಮುಂದುವರೆಸಬೇಕೆಂದು ಆಗ್ರಹಿಸಿದರು.

ADVERTISEMENT

ಸಂಘದ ಜಿಲ್ಲಾ ಸಂಚಾಲಕರಾದ ಸಣ್ಣಕ್ಕಿ ರುದ್ರಪ್ಪ, ಹನುಮಂತಪ್ಪ ಹೊಳೆಯಾಜೆ, ಟಿ.ನಾಗರಾಜ, ಆರ್.ಆರ್.ತಾಯಪ್ಪ, ಕೆ.ಎಚ್.ಮಹಾಂತೇಶ, ಮುಖಂಡರಾದ ನಾಗರಾಜ ಟಿ.ಎಸ್., ಅಯ್ಯಣ್ಣ, ಕೆ.ಎಂ.ರೆಡ್ಡಿ, ಎಲ್. ನಾಗೇಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.