ಡಿ.ಕೆ. ಶಿವಕುಮಾರ್
ಬೆಂಗಳೂರು: ‘ಮೇಕೆದಾಟು ಯೋಜನೆ ವಿಚಾರದಲ್ಲಿ ನಿಲುವು ಸ್ಪಷ್ಟಪಡಿಸುವಂತೆ ಕೇಂದ್ರ ಜಲಶಕ್ತಿ ಸಚಿವರಿಗೆ ಪ್ರಸ್ತಾವ ಸಲ್ಲಿಸಿದ್ದೇವೆ’ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಮೇಕೆದಾಟು ವಿಚಾರದಲ್ಲಿ ಸಮಯ ವ್ಯರ್ಥ ಮಾಡುವುದು ಬೇಡ. ಈ ಯೋಜನೆ ಜಾರಿಗೊಳಿಸಲು ಬದ್ಧರಾಗಿದ್ದೀರೋ, ಇಲ್ಲವೋ ಎಂಬುದನ್ನು ಸ್ಪಷ್ಟಪಡಿಸುವಂತೆ ಕೇಂದ್ರ ಜಲಶಕ್ತಿ ಸಚಿವರನ್ನು ಕೇಳಿದ್ದೇವೆ’ ಎಂದರು.
‘ಪೆನ್ನಾರ್ ನದಿ ವಿಚಾರವಾಗಿ ಕರ್ನಾಟಕ ಹಾಗೂ ತಮಿಳುನಾಡು ನಡುವೆ ತಿಕ್ಕಾಟವಿದ್ದು, ಸಂಧಾನದ ಮೂಲಕ ಈ ಸಮಸ್ಯೆ ಬಗೆಹರಿಸಿಕೊಳ್ಳಬಹುದೇ ಎಂದೂ ಕೇಳಿದ್ದೇವೆ’ ಎಂದರು.
‘ನವಲಿ ಬಳಿ ಸಮಾನಾಂತರ ಅಣೆಕಟ್ಟು ನಿರ್ಮಿಸುವ ವಿಚಾರವಾಗಿ ಆಂಧ್ರ ಪ್ರದೇಶ ಮುಖ್ಯಮಂತ್ರಿ ಸಮಯ ನೀಡಿದ ಬಳಿಕ ನಾನು ಮತ್ತು ಇಡೀ ತಂಡ ಆ ರಾಜ್ಯಕ್ಕೆ ಭೇಟಿ ನೀಡಲಿದ್ದೇವೆ’ ಎಂದರು.
ಜಲಶಕ್ತಿ ಸಚಿವರ ಜೊತೆ ಮತ್ತೆ ಸಭೆ: ‘ನದಿ ಜೋಡಣೆ ವಿಚಾರವಾಗಿ ಕೇಂದ್ರ ಸರ್ಕಾರದ ಮುಂದೆ ಅನೇಕ ಪ್ರಸ್ತಾಪಗಳಿದ್ದು, ನಾವು ನಮ್ಮ ಪಾಲಿನ ನೀರಿನ ಬಗ್ಗೆ ಪ್ರಸ್ತಾಪಿಸಿದ್ದೇವೆ. ಮಾರ್ಚ್ 18ರ ಒಳಗೆ ಮತ್ತೊಮ್ಮೆ ಜಲಶಕ್ತಿ ಸಚಿವರ ಭೇಟಿಗೆ ಸಮಯ ಪಡೆಯಲಾಗಿದೆ’ ಎಂದರು.
ಸಂಸದರಿಗೆ ಪತ್ರ: ‘ಎಲ್ಲ ಸಂಸದರಿಗೆ ಇಲಾಖೆಯ ವತಿಯಿಂದ ಪತ್ರ ಬರೆದು ಅವರ ಕ್ಷೇತ್ರಗಳಿಗೆ ಮತ್ತು ರಾಜ್ಯಕ್ಕೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಗುವುದು. ಅವರೂ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ಈ ಯೋಜನೆಗಳಿಗೆ ಅನುಮತಿ ಪಡೆಯಬಹುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.