ಬೆಂಗಳೂರು: ಐಶ್ವರ್ಯಾ ಗೌಡ ಚಿನ್ನಾಭರಣ ವಂಚನೆ ಪ್ರಕರಣದಲ್ಲಿ ಕಾಂಗ್ರೆಸ್ನ ಡಿ.ಕೆ.ಸುರೇಶ್ ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಮಂಗಳವಾರ ವಿಚಾರಣೆ ನಡೆಸಿದರು.
ಡಿ.ಕೆ.ಸುರೇಶ್ ಅವರ ಮನೆಗೆ ಜೂನ್ 17ರಂದು ತೆರಳಿದ್ದ ಇ.ಡಿ ಅಧಿಕಾರಿಗಳು, ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದರು. ನಗರದ ಶಾಂತಿನಗರದಲ್ಲಿರುವ ಇ.ಡಿ ಕಚೇರಿಗೆ ಮಂಗಳವಾರ ತೆರಳಿದ್ದ ಸುರೇಶ್ ಅವರು ವಿಚಾರಣೆಗೆ ಹಾಜರಾಗಿದ್ದರು.
‘ಆಸ್ತಿಗೆ ಸಂಬಂಧಿಸಿದ ಮಾಹಿತಿ ಮತ್ತು ದಾಖಲೆಗಳನ್ನು ಅಧಿಕಾರಿಗಳು ಕೇಳಿದ್ದರು, ನೀಡಿದ್ದೇನೆ. ಅವರ ವಿಚಾರಣೆಗೆ ಸಹಕರಿಸಿದ್ದೇನೆ’ ಎಂದು ವಿಚಾರಣೆಯ ನಂತರ ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
‘ನನಗೂ ಐಶ್ವರ್ಯಾ ಗೌಡಗೂ ಯಾವುದೇ ರೀತಿಯ ಸಂಬಂಧ ಇಲ್ಲ. ಹೀಗಿದ್ದೂ ಅವರ ವಂಚನೆ ಪ್ರಕರಣಕ್ಕೆ ನನ್ನನ್ನು ಹೇಗೆ ತಳಕು ಹಾಕುತ್ತಿದ್ದಾರೆ ಎಂಬುದು ಗೊತ್ತಾಗಿಲ್ಲ. ಅವರು ತನಿಖೆ ನಡೆಸುತ್ತಿದ್ದಾರೆ, ನಡೆಸಲಿ. ನಾನು ಸಂಪೂರ್ಣ ಸಹಕಾರ ನೀಡುತ್ತೇನೆ’ ಎಂದರು.
‘ಐಶ್ವರ್ಯಾ ಗೌಡ ಅವರು ಚಿನ್ನ ಮತ್ತು ಹಣ ಹೂಡಿಕೆಗೆ ದುಪ್ಪಟ್ಟು ಲಾಭ ಕೊಡಿಸುತ್ತೇನೆ ಎಂದು ಹೇಳಿ ಹಲವು ಚಿನ್ನಾಭರಣ ವ್ಯಾಪಾರಿಗಳಿಂದ ಚಿನ್ನ ಪಡೆದುಕೊಂಡಿದ್ದರು. ಆದರೆ ಹಣವನ್ನೂ ನೀಡಿಲ್ಲ, ಚಿನ್ನವನ್ನೂ ವಾಪಸ್ ಮಾಡಿಲ್ಲ’ ಎಂದು ಕೆಲ ಚಿನ್ನಾಭರಣ ವ್ಯಾಪಾರಿಗಳು ಪೊಲೀಸರಿಗೆ ದೂರು ನೀಡಿದ್ದರು. ‘ಹಣ ವಾಪಸ್ ಕೇಳಿದಾಗ, ತಾನು ಡಿ.ಕೆ.ಸುರೇಶ್ ಅವರ ಸೋದರಿ ಎಂದು ಹೇಳಿ ಬೆದರಿಕೆ ಹಾಕಿದ್ದರು’ ಎಂದೂ ದೂರಿನಲ್ಲಿ ವಿವರಿಸಿದ್ದರು.
‘ನನ್ನ ಹೆಸರನ್ನು ದುರುಪಯೋಗ ಮಾಡಿಕೊಳ್ಳಲಾಗಿದೆ’ ಎಂದು ಡಿ.ಕೆ.ಸುರೇಶ್ ಅವರು ಸಹ ಪೊಲೀಸರಿಗೆ ದೂರು ನೀಡಿದ್ದರು.
ಐಶ್ವರ್ಯಾ ಗೌಡ ವಿರುದ್ಧ ದಾಖಲಾಗಿದ್ದ ದೂರಿನ ಸಂಬಂಧ ಇ.ಡಿ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ತನಿಖೆಯ ಭಾಗವಾಗಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ, ಕೆಲ ಉದ್ಯಮಿಗಳು ಮತ್ತು ಐಶ್ವರ್ಯ ಅವರ ಮನೆಯಲ್ಲಿ ಇ.ಡಿ ಅಧಿಕಾರಿಗಳು ಈಚೆಗೆ ಶೋಧ ನಡೆಸಿದ್ದರು. ಐಶ್ವರ್ಯ ಅವರ ಮನೆಯಿಂದ ₹2.25 ಕೋಟಿ ನಗದು ವಶಕ್ಕೆ ಪಡೆದಿದ್ದರು.
‘ತಮ್ಮಲ್ಲಿ ಹೂಡಿಕೆ ಮಾಡಿದವರು ಹಣವನ್ನು ವಾಪಸ್ ಕೇಳಿದಾಗ ಐಶ್ವರ್ಯಾ ಅವರು ರಾಜ್ಯದ ಕೆಲ ಪ್ರಭಾವಿ ರಾಜಕಾರಣಿಗಳ ಹೆಸರು ಬಳಸಿಕೊಂಡಿದ್ದಾರೆ. ಕೆಲ ರಾಜಕಾರಣಿಗಳ ಜತೆ ಐಶ್ವರ್ಯ ಸಂಪರ್ಕದಲ್ಲಿ ಇದ್ದುದಕ್ಕೆ ಮತ್ತು ಅವರೊಂದಿಗೆ ಹಣಕಾಸು ವ್ಯವಹಾರ ನಡೆಸಿರುವುದಕ್ಕೆ ಸಾಕ್ಷ್ಯಗಳು ದೊರೆತಿವೆ. ವಂಚನೆಯಲ್ಲಿ ರಾಜಕಾರಣಿಗಳ ಪಾತ್ರ ಇದೆಯೇ ಎಂಬ ದಿಕ್ಕಿನಲ್ಲಿ ತನಿಖೆ ನಡೆಸಲಾಗುತ್ತಿದೆ’ ಎಂದು ಇ.ಡಿ ಮೂಲಗಳು ತಿಳಿಸಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.