ಹುಬ್ಬಳ್ಳಿ: ಕೋವಿಡ್ ಸಂಕಷ್ಟದ ಸಮಯದಲ್ಲಿಯೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅತ್ಯಂತ ದಕ್ಷತೆಯಿಂದ ಕೆಲಸ ಮಾಡುತ್ತಿದ್ದಾರೆ. ಅವರಿಂದ ರಾಜೀನಾಮೆ ಕೊಡಿಸುವ ಯಾವ ಉದ್ದೇಶ ಪಕ್ಷದ ಮುಂದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಭಾನುವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಹೈಕಮಾಂಡ್ ವಿಶ್ವಾಸ ಇಟ್ಟಿರುವಷ್ಟು ದಿನ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ‘ ಎಂಬ ಯಡಿಯೂರಪ್ಪ ಅವರ ಹೇಳಿಕೆಗೆ ಈ ಪ್ರತಿಕ್ರಿಯೆ ನೀಡಿದರು.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಮಾಧ್ಯಮಗಳಲ್ಲಿ ಪದೇ ಪದೇ ಚರ್ಚೆ ನಡೆದ ಹಿನ್ನೆಲೆಯಲ್ಲಿ ಅವರು ಆ ರೀತಿ ಹೇಳಿರಬಹುದು. ಇಳಿ ವಯಸ್ಸಿನಲ್ಲಿಯೂ ಉತ್ತಮ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಮರ್ಥರಿದ್ದು, ಕ್ರಿಯಾಶೀಲರಾಗಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆ ಸದ್ಯಕ್ಕಂತೂ ಇಲ್ಲ ಎಂದು ಸ್ಪಷ್ಟಪಡಿಸಿದರು.
ಸದ್ಯಕ್ಕೆ ನಮ್ಮ ಮುಂದಿರುವುದು ಕೋವಿಡ್ ನಿಯಂತ್ರಣ. ಹೈಕಮಾಂಡ್ ಹೇಳಿದಷ್ಟು ದಿನ ಇರುತ್ತೇನೆ ಎಂದು ಹೇಳಿದ್ದು ಅವರ ಪಕ್ಷ ನಿಷ್ಠೆಗೆ ಸಾಕ್ಷಿಯಾಗಿದೆ. ಹೈಕಮಾಂಡ್ನಿಂದ ಯಾವುದೇ ರೀತಿಯ ಸೂಚನೆ ಅವರಿಗಿಲ್ಲ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.
ʼನಾನು ರಾಜೀನಾಮೆ ಕೊಟ್ಟು ಮನೆಗೆ ಹೋಗುತ್ತೇನೆ ಎಂದು ಯಡಿಯೂರಪ್ಪನವರು ಎಲ್ಲಿಯೂ ಹೇಳಿಲ್ಲ. ಪಕ್ಷ ಹೇಳಿದ ಹಾಗೆ ಕೇಳುತ್ತೇನೆ ಎನ್ನುವುದಷ್ಟೇ ಅವರ ಮಾತಿನ ಅರ್ಥವಾಗಿದೆʼ ಎಂದು ಜೋಶಿ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.