ಬೆಂಗಳೂರು: ‘ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿಪಡಿಸುವ ಯೋಜನೆಯಡಿ ಈವರೆಗೆ 1,414 ಶಾಲೆಗಳನ್ನು ದತ್ತು ಪಡೆಯಲಾಗಿದ್ದು, ಈ ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರು, ಶೌಚಾಲಯ ಸೇರಿದಂತೆ 10 ಅಂಶಗಳಿಗೆ ಆದ್ಯತೆ ನೀಡಬೇಕು’ ಎಂದು ರಾಜ್ಯ ಸರ್ಕಾರದ ಶಿಕ್ಷಣ ಸುಧಾರಣೆಗಳ ಸಲಹೆಗಾರ ಪ್ರೊ.ಎಂ.ಆರ್. ದೊರೆಸ್ವಾಮಿ ಮನವಿ ಮಾಡಿದ್ದಾರೆ.
‘ಈ ಯೋಜನೆಯಡಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು, ಸಚಿವರು, ವಿಧಾನಸಭೆ, ವಿಧಾನಪರಿಷತ್, ಲೋಕಸಭೆ, ರಾಜ್ಯಸಭೆ ಸದಸ್ಯರು, ಚಿತ್ರನಟ ಸುದೀಪ್ ಶಾಲೆಗಳನ್ನು ದತ್ತು ತೆಗೆದುಕೊಂಡಿದ್ದಾರೆ. ಖಾಸಗಿ ಮತ್ತು ಸರ್ಕಾರಿ ಸೇರಿ 21 ವಿಶ್ವವಿದ್ಯಾಲಯಗಳು ತಲಾ 10 ಶಾಲೆಗಳನ್ನು ದತ್ತು ಪಡೆದುಕೊಂಡಿವೆ. ಬೆಂಗಳೂರಿನಲ್ಲಿ 200 ಸಾಫ್ಟ್ವೇರ್ ಕಂಪನಿಗಳು ತಲಾ 100 ಶಾಲೆಗಳನ್ನು ದತ್ತು ತೆಗೆದುಕೊಳ್ಳುವಂತೆ ಮನವಿ ಮಾಡಿಕೊಳ್ಳಲಾಗಿದೆ’ ಎಂದೂ ಅವರು ತಿಳಿಸಿದ್ದಾರೆ.
‘ದತ್ತು ಪಡೆಯಲು ಗುರುತಿಸಿರುವ ಶಾಲೆಗಳಲ್ಲಿ ಅಗತ್ಯ ಸಂಖ್ಯೆಯ ಶಿಕ್ಷಕರು, ಕೊಠಡಿಗಳು, ಗ್ರಂಥಾಲಯ, ಕಂಪ್ಯೂಟರ್, ಪೀಠೋಪಕರಣ, ಆವರಣಗೋಡೆ, ದುರಸ್ತಿ ಮತ್ತು ಪೇಂಟಿಂಗ್ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಬೇಕಿದೆ’ ಎಂದು ಅವರು ಹೇಳಿದ್ದಾರೆ.
‘ಖಾಸಗಿ ಕೈಗಾರಿಕಾ ಸಂಸ್ಥೆಗಳು, ಕಲಿತ ಸ್ವಗ್ರಾಮದಲ್ಲಿ ಸರ್ಕಾರಿ ಶಾಲೆಗಳನ್ನು ದತ್ತು ಪಡೆಯಲು ಬಯಸುವ ದಾನಿಗಳು 080–22033678/ 9141838866 ಸಂಖ್ಯೆ ಸಂಪರ್ಕಿಸಬಹುದು’ ಎಂದೂ ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.