ಬೆಂಗಳೂರು: ಎಸ್ಸೆಸ್ಸೆಲ್ಸಿಯಲ್ಲಿ ಸರ್ಕಾರಿ ಪ್ರೌಢಶಾಲೆಗಳು ಉತ್ತಮ ಫಲಿತಾಂಶ ಪಡೆದಿರುವ ಕಾರಣ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಎಂಬ ಹೆಸರಿನಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಅಭಿಯಾನ ಆರಂಭಿಸಿರುವ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
‘ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ: ಅಭಿಯಾನ’ ಶೀರ್ಷಿಕೆಯಲ್ಲಿ ಪ್ರಕಟವಾದ ‘ಪ್ರಜಾವಾಣಿ’ ವರದಿ ಉಲ್ಲೇಖಿಸಿ ಅವರು ಟ್ವೀಟ್ ಮಾಡಿದ್ದಾರೆ.
‘ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವಂತೆ ಪ್ರೇರೇಪಿಸಲು ರಾಜ್ಯ ಶಿಕ್ಷಣ ಇಲಾಖೆ ಕೈಗೊಂಡಿರುವ ಅಭಿಯಾನ ಅಭಿನಂದನೀಯ. ಇದಕ್ಕೆ ಪಾಲಕರು ಸಕಾರಾತ್ಮಕವಾಗಿ ಸ್ಪಂದಿಸಿ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕೆಂಬುದು ನನ್ನ ಕಳಕಳಿಯ ಮನವಿ’ ಎಂದು ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಶಿಕ್ಷಣ ಇಲಾಖೆಯ ಅಧಿಕಾರಿಗಳ ವಲಯದಲ್ಲಿ ಈ ವಿಷಯ ವ್ಯಾಪಕ ಚರ್ಚೆಗೆ ಆಗಿದ್ದು, ‘ಪ್ರಜಾವಾಣಿ’ ವರದಿಯ ಕ್ಲಿಪಿಂಗ್ ಅನ್ನು ಎಲ್ಲ ಕಚೇರಿಗಳು ಮತ್ತು ಸರ್ಕಾರಿ ಶಾಲೆಗಳಲ್ಲಿ ಅಂಟಿಸಿ, ಮಕ್ಕಳು ಮತ್ತು ಪೋಷಕರ ಮನವೊಲಿಸುವ ಅಭಿಯಾನ ಬಿರುಸುಗೊಳಿಸಲು ತೀರ್ಮಾನಿಸಿದ್ದಾರೆ ಎಂದುಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಾಥಮಿಕ ಶಿಕ್ಷಣ ನಿರ್ದೇಶಕ ಎಸ್.ಜಯಕುಮಾರ್ ತಿಳಿಸಿದ್ದಾರೆ.
‘ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಸರ್ಕಾರಿ ಪ್ರೌಢ ಶಾಲೆಗಳು ಉತ್ತಮ ಪ್ರಗತಿ ಸಾಧಿಸಿವೆ ಮತ್ತು ಯಾವುದೇ ಸರ್ಕಾರಿ ಶಾಲೆಯೂ ಶೂನ್ಯ ಫಲಿತಾಂಶ ಪಡೆದಿಲ್ಲ. ಇದರಿಂದಅಧಿಕಾರಿಗಳ ವಲಯದಲ್ಲಿ ಹುರುಪು ತಂದಿದೆ.
ಎಂಟನೇ ತರಗತಿ ಸೇರಬಯಸುವ ವಿದ್ಯಾರ್ಥಿಗಳು ಮತ್ತು ಪೋಷಕರು ಈ ದಿಸೆಯಲ್ಲಿ ಚಿಂತನೆ ನಡೆಸಬೇಕು’ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.