ADVERTISEMENT

14 ಬೇಡಿಕೆ ಈಡೇರಿಕೆಗೆ ಸರ್ಕಾರಕ್ಕೆ ವೈದ್ಯಾಧಿಕಾರಿಗಳ ಗಡುವು; ಮುಷ್ಕರದ ಎಚ್ಚರಿಕೆ

ಮಾರ್ಚ್‌ 11ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳುವ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2026, 0:30 IST
Last Updated 14 ಫೆಬ್ರುವರಿ 2026, 0:30 IST
<div class="paragraphs"><p>ವೈದ್ಯ</p></div>

ವೈದ್ಯ

   

ಬೆಂಗಳೂರು: ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ, ಮುಂಬಡ್ತಿ, ಕರ್ತವ್ಯದ ಬಳಿಕ ಖಾಸಗಿ ವ್ಯವಸ್ಥೆಯಡಿ ಚಿಕಿತ್ಸೆಗೆ ಅವಕಾಶ ಸೇರಿ 14 ಬೇಡಿಕೆಗಳನ್ನು ಮಾರ್ಚ್ 10ರೊಳಗೆ ಈಡೇರಿಸುವಂತೆ ಸರ್ಕಾರಿ ವೈದ್ಯಾಧಿಕಾರಿಗಳು ರಾಜ್ಯ ಸರ್ಕಾರಕ್ಕೆ ಗಡುವು ನೀಡಿದ್ದಾರೆ. 

ಈ ಬಗ್ಗೆ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಕೇಂದ್ರ ಸಂಘ ಹಾಗೂ ಇಲಾಖೆಯ ಎಲ್ಲ ವೃಂದ ಸಂಘಗಳು ಜಂಟಿಯಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳುವ ಬಗ್ಗೆ ತಿಳಿವಳಿಕೆ ಪತ್ರ ನೀಡಿದ್ದಾರೆ. 

ADVERTISEMENT

‘ಆರೋಗ್ಯ ಇಲಾಖೆಯಲ್ಲಿ ವಿವಿಧ ವೃಂದಗಳಲ್ಲಿ ಒಟ್ಟು 36,397 ಅಧಿಕಾರಿಗಳು ಹಾಗೂ ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ವಯೋನಿವೃತ್ತಿ ಸೇರಿ ಇತರೆ ಕಾರಣಗಳಿಂದ ಅಧಿಕಾರಿ, ನೌಕರರ ಸಂಖ್ಯೆ ಕಡಿಮೆಯಾಗುತ್ತಿದೆ. ಖಾಲಿ ಹುದ್ದೆಗಳು ಭರ್ತಿಯಾಗದಿರುವುದರಿಂದ ಅಧಿಕಾರಿಗಳು ಹಾಗೂ ನೌಕರರ ಮೇಲೆ ಕಾರ್ಯದೊತ್ತಡ ಹೆಚ್ಚುತ್ತಿದೆ. ನಮ್ಮ ಬೇಡಿಕೆಗಳನ್ನು ಇಲಾಖೆ ಸಚಿವರು ಹಾಗೂ ಉನ್ನತ ಅಧಿಕಾರಿಗಳ ಗಮನಕ್ಕೆ ತಂದರೂ ಪರಿಹಾರವಾಗಿಲ್ಲ. ಆದ್ದರಿಂದ, ಮಾರ್ಚ್ 10 ರೊಳಗೆ ಬೇಡಿಕೆಗಳನ್ನು ಈಡೇರಿಸದಿದ್ದರೆ, ಮಾರ್ಚ್‌ 11ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗುತ್ತದೆ’ ಎಂದು ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ. ರವೀಂದ್ರನಾಥ ಎಂ. ಮೇಟಿ ಹಾಗೂ ಆರೋಗ್ಯ ಇಲಾಖೆ ಕೇಂದ್ರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಬಿ. ಬಳ್ಳಾರಿ ತಿಳಿಸಿದ್ದಾರೆ.

‘ಮಾರ್ಚ್‌ 11ರಿಂದ ಮಾರ್ಚ್‌ 15ರವರೆಗೆ ಹೊರರೋಗಿ ಸೇವೆಯನ್ನು ಸ್ಥಗಿತಗೊಳಿಸಿ, ತುರ್ತು ಸೇವೆಯನ್ನು ಮಾತ್ರ ನೀಡಲಾಗುತ್ತದೆ. ಎರಡನೇ ಹಂತದಲ್ಲಿ ಮಾರ್ಚ್ 16ರಿಂದ ಬೇಡಿಕೆಗಳು ಈಡೇರುವವರೆಗೆ ಎಲ್ಲ ವೈದ್ಯರು, ಅಧಿಕಾರಿಗಳು ಹಾಗೂ ನೌಕರರು ಕರ್ತವ್ಯಕ್ಕೆ ಗೈರಾಗಲಿದ್ದಾರೆ’ ಎಂದು ಹೇಳಿದ್ದಾರೆ.

‘ಸರ್ಕಾರಿ ವೈದ್ಯರನ್ನು ಗುರಿಯಾಗಿಸಿಕೊಂಡು ಸರ್ಕಾರವು ಮನಸೋ ಇಚ್ಛೆ ಆದೇಶಗಳನ್ನು ಹೊರಡಿಸುತ್ತಿರುವ ಪರಿಣಾಮ, ವೈದ್ಯರ ಆತ್ಮಸ್ಥೈರ್ಯ ಕುಗ್ಗುವ ಜತೆಗೆ ಸರ್ಕಾರಿ ಕರ್ತವ್ಯದ ಮೇಲೆ ದುಷ್ಪರಿಣಾಮಗಳು ಬೀರುತ್ತಿವೆ. ನಾಲ್ಕು ವರ್ಷಗಳಿಂದ ವೃಂದ ಮತ್ತು ನೇಮಕಾತಿ ನಿಯಮಕ್ಕೆ ತಿದ್ದುಪಡಿಗಾಗಿ ಹಲವು ಬಾರಿ ಸಭೆ ನಡೆಸಿ, ಮನವಿ ಸಲ್ಲಿಸಿದರೂ ಅದು ಕಾರ್ಯಗತವಾಗಿಲ್ಲ. ವೈದ್ಯರ ಜ್ಯೇಷ್ಠತಾಪಟ್ಟಿಯನ್ನು ಪ್ರತಿ ವರ್ಷ ಡಿಸೆಂಬರ್ ತಿಂಗಳಲ್ಲಿ ಪರಿಷ್ಕರಿಸಬೇಕೆಂಬ ನಿಯಮವಿದ್ದರೂ, 13 ವರ್ಷಗಳಿಂದ ಪರಿಷ್ಕರಿಸಿಲ್ಲ. ಇದರಿಂದ ವೈದ್ಯರು ಮುಂಬಡ್ತಿಯಿಂದ ವಂಚಿತರಾಗುತ್ತಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.