ಬೆಂಗಳೂರು: ಗುಡಿಬಂಡೆ ತಾಲ್ಲೂಕಿನ ಹಿರೇನಾಗವಲ್ಲಿಯಲ್ಲಿ ಸಂಭವಿಸಿದ ಸ್ಫೋಟವು ಅಕ್ರಮ ಗಣಿಗಾರಿಕೆ ನಿಯಂತ್ರಣದ ವಿಷಯದಲ್ಲಿ ರಾಜ್ಯ ಸರ್ಕಾರದ ವೈಫಲ್ಯವನ್ನು ಸಾಬೀತುಪಡಿಸಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದರು.
ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಶಿವಮೊಗ್ಗ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲೂ ಕಾರ್ಮಿಕರು ಮೃತಪಟ್ಟಿದ್ದರು. ಈ ಸರ್ಕಾರದ ಆಡಳಿತ ಇಂತಹ ಘಟನೆಗಳು ನಡೆದಾಗ ಸ್ಥಳಕ್ಕೆ ಭೇಟಿ ನೀಡಿ ಹೇಳಿಕೆ ನೀಡಿ ಬರುವುದಕ್ಕೆ ಸೀಮಿತವಾಗಿದೆ’ ಎಂದರು.
‘ಕಾನೂನು ಪಾಲನೆ ಕಡತಕ್ಕೆ ಸೀಮಿತವಾಗಿ. ಅಕ್ರಮವೋ, ಸಕ್ರಮವೋ ಪ್ರತಿ ತಿಂಗಳೂ ಚಂದಾ ವಸೂಲಿ ನಡೆಯುತ್ತಿದೆ. ಮಂತ್ರಿಗಳು, ಶಾಸಕರು ನೇರವಾಗಿ ಇಂತಹ ಗಣಿಗಾರಿಕೆಯಲ್ಲಿ ಭಾಗಿಯಾಗಿದ್ದಾರೆ. ನಿತ್ಯವೂ ಇಂತಹ ಘಟನೆಗಳು ನಡೆಯುತ್ತಿದ್ದರೆ ಹೇಗೆ’ ಎಂದು ಪ್ರಶ್ನಿಸಿದರು.
ಹೋಟೆಲ್ಗೆ ಕರೆಸಿ ಬೇಡಿಕೆ: ‘ಮಂಡ್ಯ ಸಂಸದರು ಅಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸಲು ಭಾರಿ ಪ್ರಯತ್ನ ನಡೆಸುತ್ತಿದ್ದಾರೆ. ಅವರ ಬದ್ಧತೆಗೆ ನಾವು ತಲೆ ತಗ್ಗಿಸಬೇಕಾಗಿದೆ. ಗಣಿ ಸಚಿವರೂ ಸೋಮವಾರ ಮಂಡ್ಯಕ್ಕೆ ಹೋಗಿ ಸ್ಥಳ ಪರಿಶೀಲನೆ ಮಾಡಿ ಬಂದಿದ್ದಾರೆ. ಡಿವೈಎಸ್ಪಿಗಳು, ಅಧಿಕಾರಿಗಳು ಗಣಿ ಮಾಲೀಕರನ್ನು ಹೋಟೆಲ್ಗೆ ಕರೆದು ಚಂದಾ ಕೇಳಿರುವ ದಾಖಲೆಗಳು ನಮ್ಮ ಬಳಿ ಇವೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.