ಬೆಂಗಳೂರು: ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಮಸೂದೆಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಬುಧವಾರ ಅಂಕಿತ ಹಾಕಿದ್ದಾರೆ.
ವಿಧಾನಮಂಡಲದ ಕಳೆದ ಅಧಿವೇಶನದಲ್ಲಿ ಉಭಯ ಸದನಗಳಲ್ಲೂ ಈ ಮಸೂದೆಗೆ ಅಂಗೀಕಾರ ನೀಡಲಾಗಿತ್ತು. ಬಳಿಕ ಅದನ್ನು ರಾಜ್ಯಪಾಲರ ಒಪ್ಪಿಗೆಗಾಗಿ ರಾಜಭವನಕ್ಕೆ ಕಳುಹಿಸಲಾಗಿತ್ತು. ರಾಜ್ಯಪಾಲರ ಅಂಕಿತ ದೊರಕಿರುವುದರಿಂದ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆ ಜಾರಿಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.
2021ರ ಡಿಸೆಂಬರ್ನಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ವಿಧಾನಮಂಡಲ ಅಧಿವೇಶನದಲ್ಲಿ ಈ ಮಸೂದೆಯನ್ನು ಮಂಡಿಸಲಾಗಿತ್ತು. ವಿಧಾನಸಭೆಯ ಅಂಗೀಕಾರವೂ ದೊರಕಿತ್ತು. ಆದರೆ, ವಿಧಾನ ಪರಿಷತ್ನಲ್ಲಿ ಸದಸ್ಯಬಲದ ಕೊರತೆಯಿಂದ ಮಸೂದೆ ಮಂಡಿಸಿರಲಿಲ್ಲ. ಕಳೆದ ಮೇ ತಿಂಗಳಲ್ಲಿ ಸುಗ್ರೀವಾಜ್ಞೆ ಮೂಲಕ ಮಸೂದೆಯನ್ನು ಜಾರಿಗೊಳಿಸಲಾಗಿತ್ತು. ಈಗ ಉಭಯ ಸನದಗಳಲ್ಲೂ ಮತ್ತೆ ಅಂಗೀಕಾರ ಪಡೆದು, ರಾಜ್ಯಪಾಲರ ಒಪ್ಪಿಗೆಯೊಂದಿಗೆ ಕಾಯ್ದೆ ಜಾರಿಗೊಳಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.