ಬೆಳಗಾವಿ: ‘ದೇಶದ ಅಭಿವೃದ್ಧಿ ವಿಷಯದಲ್ಲಿ ಕಾಂಗ್ರೆಸ್ ಸಾಧನೆ ಏನು ಎನ್ನುವುದನ್ನು ಆ ಪಕ್ಷದ ಮುಖಂಡರು ಹೇಳಲಿ’ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸವಾಲು ಹಾಕಿದರು.
ಇಲ್ಲಿ ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು, ‘ದೇಶದಲ್ಲಿ ಅತಿ ಹೆಚ್ಚು ಅವಧಿಗೆ ಆಡಳಿತ ನಡೆಸಿದ ಕಾಂಗ್ರೆಸ್ನವರು ಬಡತನ ನಿರ್ಮೂಲನೆ ಮಾಡುತ್ತೇವೆ ಎಂದು ಹೇಳಿದ್ದರು. ಎಷ್ಟು ಮಂದಿ ಬಡವರನ್ನು ಉದ್ದಾರ ಮಾಡಿದ್ದಾರೆ?’ ಎಂದು ಕೇಳಿದರು.
‘ಬಿಜೆಪಿಯವರು ದಿ. ಸುರೇಶ ಅಂಗಡಿ ಮೃತದೇಹವನ್ನು ಬೆಳಗಾವಿಗೆ ತರಲಾಗಲಿಲ್ಲ’ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಕೋವಿಡ್–19 ಮಾರ್ಗಸೂಚಿ ಎಲ್ಲರಿಗೂ ಒಂದೇ. ಹೀಗಾಗಿ, ಅಂಗಡಿ ಅವರ ಮೃತದೇಹವನ್ನು ಬೆಳಗಾವಿಗೆ ತರಲಾಗಲಿಲ್ಲ. ಇಂತಹ ವಿಷಯಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು’ ಎಂದು ತಿರುಗೇಟು ನೀಡಿದರು.
‘ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅವ್ಯವಹಾರ ಆಗಿರುವುದು ಅಥವಾ ಕಿಕ್ಬ್ಯಾಕ್ ಪಡೆದಿರುವ ಬಗ್ಗೆ ದಾಖಲೆಗಳಿದ್ದರೆ ಶಿವಕುಮಾರ್ ಒದಗಿಸಲಿ. ಅದನ್ನು ಆಧರಿಸಿ ತನಿಖೆ ಮಾಡಿಸುತ್ತೇನೆ’ ಎಂದು ಪ್ರತಿಕ್ರಿಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.