
ಬೆಂಗಳೂರು: ಸರ್ಕಾರಿ ಕೋಟಾದಡಿ 2024–25ನೇ ಸಾಲಿನಲ್ಲಿ ಎಂಬಿಬಿಎಎಸ್ ಪೂರ್ಣಗೊಳಿಸಿ ಗ್ರಾಮೀಣ ಭಾಗದ ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದು ವರ್ಷದ ಕಡ್ಡಾಯ ಸೇವೆಗೆ ನಿಯೋಜನೆಗೊಂಡ ವೈದ್ಯರ ಪ್ರತಿ ತಿಂಗಳ ವೇತನ ಕಡಿತಗೊಳಿಸಿರುವುದನ್ನು ಪ್ರಶ್ನಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಈ ಸಂಬಂಧ ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲ್ಲೂಕು ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ಡಾ.ಶಶಿಕುಮಾರ್ ಶಿವರಾಮ್ ರಾಠೋಡ್ ಸೇರಿದಂತೆ ರಾಜ್ಯದ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ಕಿರಿಯ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಒಟ್ಟು 38 ಎಂಬಿಬಿಎಸ್ ಪದವೀಧರರು ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ಕೆಲ ಕಾಲ ಅರ್ಜಿದಾರರ ಪರ ವಾದ ಆಲಿಸಿದ ನ್ಯಾಯಪೀಠ, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು. ನಾಲ್ಕು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.
ಅರ್ಜಿಯಲ್ಲಿ ಏನಿದೆ?: ಸರ್ಕಾರಿ ಕೋಟಾದಡಿ ಎಂಬಿಬಿಎಸ್ ಮುಗಿಸಿ ಆರೋಗ್ಯ ಇಲಾಖೆಯಡಿ ಒಂದು ವರ್ಷದ ಕಡ್ಡಾಯ ಸರ್ಕಾರಿ ಸೇವೆಗೆ ನಿಯೋಜನೆಗೊಂಡ ವೈದ್ಯರಿಗೆ ತಿಂಗಳಿಗೆ ₹62 ಸಾವಿರ ಹಾಗೂ ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ನಿಯೋಜನೆಗೊಂಡ ವೈದ್ಯರಿಗೆ ₹75 ಸಾವಿರ ನಿಗದಿಪಡಿಸಿ 2025ರ ಆಗಸ್ಟ್ 18ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ, 2025ರ ಅಕ್ಟೋಬರ್ 28ಕ್ಕೆ ಪರಿಷ್ಕೃತ ಅಧಿಸೂಚನೆ ಹೊರಡಿಸಿ ₹60 ಸಾವಿರದ ಮೊತ್ತವನ್ನು ಕಡಿತಗೊಳಿಸಲಾಗಿತ್ತು.
‘ಇದು ಕಾನೂನು ಬಾಹಿರ. ಹಳೆಯ ಅಧಿಸೂಚನೆ ಅನುಸಾರವೇ ವೇತನ ನೀಡಬೇಕು. ಕಳೆದ ವರ್ಷದ ಆಗಸ್ಟ್ನಿಂದ ಈತನಕದ ವೇತನ ಹಿಂಬಾಕಿ ಪಾವತಿಸಲು ನಿರ್ದೇಶಿಸಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.