ADVERTISEMENT

ಸರ್ಕಾರಿ ಕೊಲೆಯಲ್ಲದೆ ಬೇರೇನು: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2023, 22:15 IST
Last Updated 25 ಫೆಬ್ರುವರಿ 2023, 22:15 IST
   

ಬೆಂಗಳೂರು: ‘ಪಿಂಚಣಿ ಆಗ್ರಹಿಸಿ ಮುಷ್ಕರದಲ್ಲಿ ತೊಡಗಿದ್ದ ಶಿಕ್ಷಕರಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಅವುಗಳನ್ನು ಸರ್ಕಾರಿ ಕೊಲೆಗಳು ಎನ್ನದೆ ಬೇರೇನು ಹೇಳಬೇಕು’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ
ವ್ಯಕ್ತಪಡಿಸಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಅವರು, ‘ಶಿಕ್ಷಕರಾದ ಬಾಗಲಕೋಟೆಯ ಸಿದ್ದಯ್ಯ ಹಿರೇಮಠ ಮತ್ತು ರಾಯಚೂರು ಜಿಲ್ಲೆ ಸಿಂಧನೂರಿನ ಶಂಕರಪ್ಪ ಬೋರಡ್ಡಿ ಅವರು ತಮ್ಮ ಹೋರಾಟಕ್ಕೆ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನಷ್ಟು ಜೀವಗಳು ಬಲಿಯಾಗುವ ಮುನ್ನ ಮುಷ್ಕರ ನಿರತರನ್ನು ಕರೆದು ಬೇಡಿಕೆಗಳನ್ನು ಈಡೇರಿಸುವ ಕೆಲಸ ಮಾಡಬೇಕು. ಈಗಾಗಲೇ ಪ್ರಾಣ ಕಳೆದು ಕೊಂಡವರಿಗೆ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದ್ದಾರೆ.

‘ಸ್ವಾತಂತ್ರ್ಯ ಉದ್ಯಾನದಲ್ಲಿ 141 ದಿನಗಳಿಂದ ಮುಷ್ಕರ ನಿರತರಾಗಿರುವ ಈ ಶಿಕ್ಷಕರ ಗೋಳು ಕೇಳುವವರಿಲ್ಲ. ಶಿಕ್ಷಕರು ಕೇಳುತ್ತಿರುವುದು ತಮ್ಮ ಹಕ್ಕಿನ ಪಿಂಚಣಿಯನ್ನು ಎಂಬ ಕನಿಷ್ಠ ಜ್ಞಾನ ರಾಜ್ಯ ಸರ್ಕಾರಕ್ಕೆ ಬೇಡವೇ? ಪ್ರತಿಭಟನೆ ವಿಚಾರ ತಮ್ಮ ಗಮನಕ್ಕೆ ಬಂದಿರಲಿಲ್ಲ ಎಂದು ಹೇಳುವ ಮೂಲಕ ಸರ್ಕಾರ ಇಷ್ಟು ದಿನ ಕೋಮಾದಲ್ಲಿತ್ತು ಎಂಬುದನ್ನು ಒಪ್ಪಿಕೊಂಡಿದೆ.‌ ಕಿವಿಯಲ್ಲಿ ಸದಾ ಕಮಿಷನ್ ಸದ್ದು ಗುಯ್ದುಡುವಾಗ ಬಡವರ ಕೂಗು ಕೇಳುವುದಾದರೂ ಹೇಗೆ’ ಎಂದೂ ಕುಟುಕಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.