ಬೆಂಗಳೂರು: ದೇಶದಲ್ಲಿ ಕೋವಿಡ್ನಿಂದ ಸಂಭವಿಸಿದ ಸಾವಿನ ಸಂಖ್ಯೆ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೇಳುತ್ತಿದ್ದ ಸುಳ್ಳು ವಿಶ್ವ ಆರೋಗ್ಯ ಸಂಸ್ಥೆಯ ವರದಿಯಿಂದ ಬಯಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಹೇಳಿದರು.
ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ‘ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆಯ ಕುರಿತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾಹಿತಿ ಮುಚ್ಚಿಡುತ್ತಿವೆ ಎಂಬುದನ್ನು ಹಿಂದೆಯೇ ನಾನು ಹೇಳಿದ್ದೆ. 2019 ಮತ್ತು 2020ರಲ್ಲಿ ದೇಶ ಹಾಗೂ ರಾಜ್ಯದಲ್ಲಿ ಸಂಭವಿಸಿದ ಮರಣಗಳ ಸಂಖ್ಯೆಯನ್ನು ಅವಲೋಕಿಸಿದಾಗ ಈ ವಿಚಾರ ಗೊತ್ತಾಗಿತ್ತು. ದೇಶದಲ್ಲಿ ಕೋವಿಡ್ನಿಂದ 42 ಲಕ್ಷ ಜನರು ಸತ್ತಿದ್ದಾರೆ ಎಂದು ಹೇಳಿದ್ದೆ. 47 ಲಕ್ಷ ಜನರು ಸತ್ತಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ’ ಎಂದರು.
‘ದೇಶದ ಇತಿಹಾಸದಲ್ಲಿ ಯಾವುದೇ ಸಾಂಕ್ರಾಮಿಕ ರೋಗದಿಂದ ಇಷ್ಟು ದೊಡ್ಡ ಪ್ರಮಾಣದ ಸಾವುಗಳು ಸಂಭವಿಸಿರಲಿಲ್ಲ. ಸುಳ್ಳು ಲೆಕ್ಕ ನೀಡಿ ಕೋವಿಡ್ ನಿರ್ವಹಣೆಯಲ್ಲಿ ಸಾಧನೆ ಮಾಡಿರುವುದಾಗಿ ಜಂಭ ಕೊಚ್ಚಿಕೊಳ್ಳುತ್ತಿದ್ದ ಬಿಜೆಪಿ ಸರ್ಕಾರಗಳ ಬಣ್ಣ ಬಹಿರಂಗವಾಗಿದೆ’ ಎಂದು ಟೀಕಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.