ಬೆಂಗಳೂರು: ‘ರಾಜ್ಯದ ಒಟ್ಟು 29,616 ಗ್ರಾಮಗಳ ಪೈಕಿ 27,099 ಗ್ರಾಮಗಳಲ್ಲಿ ಈಗಾಗಲೇ ಸ್ಮಶಾನ ಸೌಲಭ್ಯ ಒದಗಿಸಲಾಗಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.
ಈ ಸಂಬಂಧ ವಕೀಲ ಮೊಹಮ್ಮದ್ ಇಕ್ಬಾಲ್ ಸಲ್ಲಿಸಿರುವ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ನ್ಯಾಯಪೀಠಕ್ಕೆ ಹಾಜರುಪಡಿಸಲು ಕಂದಾಯ ಇಲಾಖೆ ಶೇಖರಿಸಿದ್ದ ಬೃಹತ್ ದಾಖಲೆಗಳನ್ನು ಟೆಂಪೊಗಳಲ್ಲಿ ತುಂಬಿ ತರಲಾಗಿತ್ತು. 31 ಜಿಲ್ಲೆಗಳ 27 ಸಾವಿರಕ್ಕೂ ಹೆಚ್ಚು ಬಂಡಲ್ಗಳನ್ನು ಒಳಗೊಂಡಿದ್ದ ಈ ದಾಖಲೆಗಳಲ್ಲಿ 1,006 ಬೇಚರಾಕ್ (ದಾಖಲೆ ರಹಿತ ಜನ ವಸತಿಯ ಹಳ್ಳಿ) ಗ್ರಾಮಗಳ ಮಾಹಿತಿಯನ್ನೂ ಅಡಕಗೊಳಿಸಲಾಗಿತ್ತು.
ದಾಖಲೆಗಳ ಮಾಹಿತಿಯನ್ನು ಅರ್ಜಿದಾರರಿಗೂ ಒದಗಿಸುವಂತೆ ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಎರಡು ವಾರ ಕಾಲ ಮುಂದೂಡಿದೆ.
‘ಸ್ಮಶಾನಕ್ಕೆ ಜಾಗ ಇಲ್ಲದ ಗ್ರಾಮ ಮತ್ತು ಪಟ್ಟಣ ಪ್ರದೇಶಗಳಿಗೆ ಅಗತ್ಯ ಜಮೀನು ಒದಗಿಸಿರುವ ಕುರಿತಂತೆ ಗ್ರಾಮವಾರು ಮಾಹಿತಿ ಒದಗಿಸಿ’ ಎಂದು ಹೈಕೋರ್ಟ್, 2022ರ ಜೂನ್ 30ರಂದು ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರರು ಈಗಾಗಲೇ ಮೂರು ರಿಟ್ ಅರ್ಜಿಗಳನ್ನು ಸಲ್ಲಿಸಿ ಕಾನೂನು ಹೋರಾಟ ನಡೆಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.