ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವ ಪ್ರಸ್ತಾವಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಒಪ್ಪಿಗೆ ಸೂಚಿಸಿದ್ದಾರೆ.
ನಗರದ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಅಮಿತ್ ಶಾ ಅವರನ್ನು ಭೇಟಿಯಾದ ಹೊರಟ್ಟಿ, ಪಕ್ಷ ಸೇರ್ಪಡೆ ಕುರಿತು ಮಾತುಕತೆ ನಡೆಸಿದರು. ಹೂಗುಚ್ಛ ನೀಡಿ ಸಭಾಪತಿಯವರನ್ನು ಸ್ವಾಗತಿಸಿದ ಕೇಂದ್ರ ಗೃಹ ಸಚಿವರು, ಬಿಜೆಪಿ ಸೇರ್ಪಡೆಯ ಕೋರಿಕೆಯನ್ನು ಒಪ್ಪಿಕೊಂಡಿರುವ ಸಂದೇಶ ನೀಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಚಿವರಾದ ಆರ್. ಅಶೋಕ, ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಜಗದೀಶ ಶೆಟ್ಟರ್ ಜತೆಗಿದ್ದರು.
ಚರ್ಚೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಹೊರಟ್ಟಿ, ‘ಜೆಡಿಎಸ್ ಪಕ್ಷದ ಬಗ್ಗೆ ನನಗೆ ಒಳ್ಳೆಯ ಭಾವನೆಯೇ ಇದೆ. ಆದರೆ, ಬದಲಾದ ಸನ್ನಿವೇಶನದಲ್ಲಿ ಮತದಾರರ ಬಯಕೆಯಂತೆ ಬಿಜೆಪಿ ಸೇರುತ್ತಿದ್ದೇನೆ. ಸಭಾಪತಿ ಹುದ್ದೆಗೆ ಶೀಘ್ರದಲ್ಲಿಯೇ ರಾಜೀನಾಮೆ ನೀಡುತ್ತೇನೆ’ ಎಂದರು.
‘ಮೇ 11ರಂದು ಹೊರಟ್ಟಿ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಆ ಬಳಿಕ ಜೆಡಿಎಸ್ ತೊರೆದು ಬಿಜೆಪಿ ಸೇರಲಿದ್ದಾರೆ’ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.