
ಬೆಳಗಾವಿ (ಸುವರ್ಣ ವಿಧಾನಸೌಧ): ‘ಗೃಹ ಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಆಗಸ್ಟ್ ತಿಂಗಳವರೆಗೆ ಹಣ ಪಾವತಿ ಮಾಡಲಾಗಿದೆ. ಒಂದು ವೇಳೆ ಫೆಬ್ರುವರಿ ಮತ್ತು ಮಾರ್ಚ್ ತಿಂಗಳ ಹಣ ಅವರ ಖಾತೆಗಳಿಗೆ ಜಮೆ ಆಗಿಲ್ಲ ಎಂದಾದರೆ ತಕ್ಷಣ ಬಿಡುಗಡೆ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ ಅವರು ವಿಧಾನಸಭೆಗೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ವಿರೋಧ ಪಕ್ಷಗಳ ಸದಸ್ಯರು ಆರೋಪಿಸಿದರು. ಈ ಬಗ್ಗೆಯೂ ಸಚಿವರಿಂದ ಸೋಮವಾರ ಸ್ಪಷ್ಟನೆ ಕೊಡಿಸಲಾಗುವುದು ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.
ಪ್ರಶ್ನೋತ್ತರ ಅವಧಿ ಬಳಿಕ ವಿಷಯ ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ, ‘ಡಿ. 9ರಂದು ಸದಸ್ಯರು ಸದನದಲ್ಲಿ ಕೇಳಿದ ಪ್ರಶ್ನೆಗೆ ಲಕ್ಷ್ಮೀ ಹೆಬ್ಬಾಳಕರ ಸುಳ್ಳು ಮಾಹಿತಿ ನೀಡಿದ್ದಾರೆ. ಫೆಬ್ರುವರಿ ಹಾಗೂ ಮಾರ್ಚ್ ತಿಂಗಳ ಗೃಹ ಲಕ್ಷ್ಮೀ ಹಣ ನೀಡಿಲ್ಲ ಎಂದು ಹೇಳುತ್ತಿದ್ದರೂ ವಿರೋಧ ಪಕ್ಷದ ಸದಸ್ಯರೇ ದಡ್ಡರು ಎಂಬಂತೆ ಮಾತನಾಡಿದ್ದಾರೆ. ಸೆಪ್ಟೆಂಬರ್ವರೆಗೆ ಹಣ ನೀಡಿದ್ದೇವೆ ಎಂದು ಸುಳ್ಳು ಹೇಳಿದ್ದಾರೆ. ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಚಿವರ ಮೇಲೆ ಕ್ರಮ ತೆಗೆದುಕೊಳ್ಳಬೇಕು, ಇಲ್ಲದಿದ್ದರೆ ಅವರಿಂದ ಸುಳ್ಳು ಹೇಳಿಸಿದ ಅಧಿಕಾರಿಯನ್ನು ಅಮಾನತು ಮಾಡಬೇಕು’ ಎಂದು ಒತ್ತಾಯಿಸಿದರು.
ಬಿಜೆಪಿಯ ವಿ. ಸುನಿಲ್ ಕುಮಾರ್, ಮಹೇಶ ಟೆಂಗಿನಕಾಯಿ ಸೇರಿದಂತೆ ಕೆಲವು ಸದಸ್ಯರು, ‘ಸಚಿವರು ನೀಡಿದ ತಪ್ಪು ಮಾಹಿತಿಯಿಂದ ಸದನದ ಹಕ್ಕು ಚ್ಯುತಿ ಆಗಿದೆ. ಸದನದ ದಿಕ್ಕು ತಪ್ಪಿಸಿ ಅವಮಾನ ಮಾಡಲಾಗಿದೆ’ ಎಂದು ದೂರಿದರು.
ಆಗ ಸಿದ್ದರಾಮಯ್ಯ ಅವರು, ‘ಲಕ್ಷ್ಮೀ ಹೆಬ್ಬಾಳಕರ ಸದ್ಯ ಸದನದಲ್ಲಿ ಉಪಸ್ಥಿತರಿಲ್ಲ. ಆಗಸ್ಟ್ವರೆಗೆ ಎಲ್ಲ ಹಣ ಪಾವತಿ ಮಾಡಲಾಗಿದೆ. ಸೆಪ್ಟೆಂಬರ್ ಹಾಗೂ ಅಕ್ಟೋಬರ್ ಹಣವನ್ನು ಸದ್ಯದಲ್ಲೇ ಪಾವತಿಸಲಾಗುವುದು. ಫೆಬ್ರುವರಿ, ಮಾರ್ಚ್ ತಿಂಗಳ ಹಣ ನೀಡಿಲ್ಲ ಎಂದಾದರೆ ಕೂಡಲೇ ಬಿಡುಗಡೆ ಮಾಡಿಸಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.