ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಭೇಟಿಯಾಗಿ ಚರ್ಚಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಬೆಂಗಳೂರಿನಲ್ಲಿ ಇರುವ ಸಿದ್ದರಾಮಯ್ಯ ನಿವಾಸದಲ್ಲಿ ಬುಧವಾರ ಅರ್ಧ ತಾಸಿಗೂ ಹೆಚ್ಚು ಕಾಲ ಸಮಾಲೋಚಿಸಿದರು.
ಮೈಮುಲ್ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆಪಾದನೆಯನ್ನು ಜೆಡಿಎಸ್ ಮಾಡಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಬಂಧಿಯಾಗಿರುವ ಅಶೋಕ್ ಎಂಬುವರು ಇದರಲ್ಲಿ ಭಾಗಿಯಾಗಿದ್ದಾರೆ ಎಂದು ಈ ಪಕ್ಷದ ಶಾಸಕ ಸಾ.ರಾ. ಮಹೇಶ್ ಆರೋಪ ಮಾಡಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
‘ಮೈಮುಲ್ ಬೆಳವಣಿಗೆಗಳ ಬಗ್ಗೆ ಸಿದ್ದರಾಮಯ್ಯ ಅವರಿಗೆ ಪೂರ್ಣ ಮಾಹಿತಿ ಇರಲಿಲ್ಲ. ಈ ಕುರಿತು ಮಾಹಿತಿ ನೀಡಲು ದೇವೇಗೌಡ ಬಂದಿದ್ದು, ಈ ಬಗ್ಗೆ ಇಬ್ಬರೂ ಚರ್ಚಿಸಿದ್ದಾರೆ. ಇದರ ಹೊರತು ರಾಜಕೀಯ ಚರ್ಚೆ ನಡೆದಿಲ್ಲ’ ಎಂದು ಮೂಲಗಳು ಹೇಳಿವೆ.
‘ಗ್ರಾಮ ಪಂಚಾಯಿತಿ ಸದಸ್ಯರ ಅವಧಿ ಮುಗಿದ ಬೆನ್ನಲ್ಲೇ ಆಡಳಿತ ಸಮಿತಿ ನೇಮಿಸಲು ಬಿಜೆಪಿ ಸರ್ಕಾರ ಮುಂದಾಗಿದೆ. ಈಗಿರುವ ಸದಸ್ಯರ ಅವಧಿ ವಿಸ್ತರಿಸುವ ಬಗ್ಗೆ ವಿರೋಧ ಪಕ್ಷದ ನಾಯಕರಾಗಿ ಸರ್ಕಾರದ ಮೇಲೆ ಒತ್ತಡ ಹೇರಿ ಎಂದು ಮನವಿ ಮಾಡಲು ಸಿದ್ಧರಾಮಯ್ಯ ಭೇಟಿಯಾಗಿದ್ದೆ’ ಎಂದು ದೇವೇಗೌಡ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.