ADVERTISEMENT

‘ಕುಲಪತಿಗಳ ಬಾಯಿ ಮುಚ್ಚಿಸಿಲ್ಲ’: ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 20 ಜೂನ್ 2019, 19:00 IST
Last Updated 20 ಜೂನ್ 2019, 19:00 IST
ಜಿ.ಟಿ.ದೇವೇಗೌಡ
ಜಿ.ಟಿ.ದೇವೇಗೌಡ   

ಮೈಸೂರು: ’ರಾಜ್ಯ ಸರ್ಕಾರವು ವಿಶ್ವವಿದ್ಯಾಲಯಗಳ ಮೇಲೆ ಯಾವುದೇ ದಿಗ್ಬಂಧನ ವಿಧಿಸಿಲ್ಲ. ಕುಲಪತಿಗಳ ಬಾಯಿಮುಚ್ಚಿಸುವ ಆದೇಶ ಹೊರಡಿಸಿಲ್ಲ’ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಸ್ಪಷ್ಟಪಡಿಸಿದರು.

ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಮಾಧ್ಯಮಗಳ ಜತೆ ಮಾತನಾಡುವುದಕ್ಕೆ ನಿರ್ಬಂಧವಿಲ್ಲ. ಅದನ್ನು ಬಿಟ್ಟು ಬೇರೆ ವಿಷಯಗಳ ಬಗ್ಗೆ ಹೇಳಿಕೆ ನೀಡಬಾರದು ಎಂಬ ಸುತ್ತೋಲೆಯನ್ನು ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹೊರಡಿಸಿದ್ದಾರೆ ಎಂದು ಮೈಸೂರಿನಲ್ಲಿ ಗುರುವಾರ ಮಾಧ್ಯಮದವರಿಗೆ ತಿಳಿಸಿದರು.

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ವಿವಾದ ನಡೆದಿತ್ತು. ಆ ಸಂದರ್ಭದಲ್ಲಿ ಕೆಲವರು ಮಾಧ್ಯಮಗಳಿಗೆ ಹೇಳಿಕೆ ಕೊಟ್ಟಿದ್ದರು. ಅಂತಹ ಹೇಳಿಕೆಗಳನ್ನು ಕೊಡುವುದರ ಮೇಲೆ ಮಾತ್ರ ಸರ್ಕಾರ ಕಡಿವಾಣ ಹಾಕಿದೆ. ಶಿಕ್ಷಣಕ್ಕೆ ಹೊರತಾದ ವಿಷಯಗಳ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಬೇಕಾದರೆ ಇಲಾಖೆಯ ಅನುಮತಿ ಪಡೆಯಬೇಕೆಂದು ಸೂಚಿಸಿದೆ ಎಂದರು.

ADVERTISEMENT

ಸರ್ಕಾರಿ ವಿಶ್ವವಿದ್ಯಾಲಯಗಳ ಎಲ್ಲ ಹಾಲಿ ಕುಲಪತಿಗಳು ವಿಶ್ವವಿದ್ಯಾಲಯ ಕುರಿತಂತೆ ಮಾಧ್ಯಮಗಳಿಗೆ ಹೇಳಿಕೆ ನೀಡಬಾರದು ಎಂಬ ಆದೇಶವನ್ನು ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹೊರಡಿಸಿದ್ದರು.

’ಹೆಚ್ಚಿನ ಗಮನ ನೀಡಿ ಎಂದಿದ್ದಾರೆ’
‘ಶಿಕ್ಷಣ ಇಲಾಖೆಯನ್ನು ಸರ್ಕಾರ ನಿರ್ಲಕ್ಷಿಸುತ್ತಿದೆ‘ ಎಂಬ ಎಚ್‌.ವಿಶ್ವನಾಥ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಜಿ.ಟಿ.ದೇವೇಗೌಡ, ‘ಶಿಕ್ಷಣ ಖಾತೆ ಅತೀ ಮುಖ್ಯವಾದದ್ದು. ಅದಕ್ಕೆ ಇನ್ನೂ ಹೆಚ್ಚಿನ ಗಮನ ಕೊಡಿ ಎಂಬ ಅರ್ಥದಲ್ಲಿ ಅವರು ಮಾತನಾಡಿದ್ದಾರೆ’ ಎಂದರು.

ಪ್ರಾಥಮಿಕ ಹಾಗೂ ಉನ್ನತ ಶಿಕ್ಷಣದ ಬಗ್ಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಿಶೇಷ ಆಸಕ್ತಿ ಇಟ್ಟುಕೊಂಡಿದ್ದಾರೆ. ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದಾರೆ. ಅವುಗಳನ್ನು ಕಾರ್ಯರೂಪಕ್ಕಿಳಿಸಬೇಕೆಂಬುದು ಅವರ ಒತ್ತಾಯ ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.