ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್
ಬೆಂಗಳೂರು: ರಾಜ್ಯ ಸರ್ಕಾರದ ‘ಶಕ್ತಿ’ ಯೋಜನೆ ಸೇರಿದಂತೆ ಪಂಚ ಗ್ಯಾರಂಟಿಗಳಿಗೆ ಹೆಚ್ಚಿನ ಪ್ರಚಾರ ನೀಡಲು ಸರ್ಕಾರಿ ಬಸ್ಗಳಲ್ಲಿ ಭಿತ್ತಿಪತ್ರಗಳನ್ನು ಅಳವಡಿಸಬೇಕು ಎಂದು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರೂ ಆಗಿರುವ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಅಲ್ಲದೆ, ಗ್ಯಾರಂಟಿ ಸಮಿತಿಯ ಜಿಲ್ಲಾ, ತಾಲ್ಲೂಕು ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಗೌರವಧನ ಹಾಗೂ ಭತ್ಯೆಯನ್ನೂ ಹೆಚ್ಚಿಸಬೇಕು ಎಂದೂ ಅವರು ಕೋರಿದ್ದಾರೆ. ಈ ಮನವಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿ, ಅಗತ್ಯ ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
‘ಸರ್ಕಾರದ ಮಹತ್ವಕಾಂಕ್ಷೆಯ ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಸಾರಿಗೆ ನಿಗಮಗಳ ವಾಹನಗಳ ಮೇಲೆ ಭಿತ್ತಿ ಪತ್ರಗಳನ್ನು ಅಳವಡಿಸುವ ಮೂಲಕ ಹೆಚ್ಚಿನ ಪ್ರಚಾರ ನೀಡಬೇಕು. ‘ಶಕ್ತಿ’ ಯೋಜನೆಯ ಅಡಿಯಲ್ಲಿ ಮಹಿಳೆಯರು ಒಟ್ಟು 595 ಕೋಟಿ ಉಚಿತ ಬಸ್ ಪ್ರಯಾಣ ಮಾಡಿದ್ದಾರೆ. ಉಚಿತ ಸಾರಿಗೆಯ ಮೂಲಕ ಮಹಿಳೆಯರ ಸಬಲೀಕರಣವು ಸಾಮಾಜಿಕ ಕಲ್ಯಾಣ ಮತ್ತು ಲಿಂಗ ಸಮಾನತೆಗೆ ಮಹತ್ವದ ಕೊಡುಗೆ ಎಂದು ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ದಾಖಲಾಗಿದೆ. ಈ ಬಗ್ಗೆ ಭಿತ್ತಿಪತ್ರಗಳನ್ನು ಅಳವಡಿಸಲು ಸಂಬಂದಪಟ್ಟ ಇಲಾಖಾ ಮುಖ್ಯಸ್ಥರಿಗೆ ಸೂಚಿಸಬೇಕು’ ಎಂದು ದಿನೇಶ್ ಗೂಳಿಗೌಡ ಕೋರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.