ಎ.ಐ. ಚಿತ್ರ
ಬೆಂಗಳೂರು: ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ನಿಗದಿಪಡಿಸಿದ ‘ಅರ್ಹತೆ’ ಇರುವವರು, ಇಲ್ಲದವರ ನಡುವಿನ ಕಾನೂನು ಹೋರಾಟ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯನ್ನು ಮತ್ತಷ್ಟು ಕಗ್ಗಂಟಾಗಿಸಿದೆ.
ಯುಜಿಸಿ ಅರ್ಹತೆ ಪಡೆದ ಸ್ನಾತಕೋತ್ತರ ಪದವೀಧರರನ್ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಪರಿಗಣಿಸಬೇಕು ಎಂಬ ಹೈಕೋರ್ಟ್ನ ದ್ವಿಸದಸ್ಯ ಪೀಠ ಮಧ್ಯಂತರ ಆದೇಶ ಹೊರಡಿಸಿತ್ತು. ಈ ಆದೇಶದ ನಂತರ, ಅರ್ಹತೆ ಪಡೆಯದ 5,000ಕ್ಕೂ ಹೆಚ್ಚು ಉಪನ್ಯಾಸಕರನ್ನು ಅನಿವಾರ್ಯವಾಗಿ ಪ್ರಕ್ರಿಯೆಯಿಂದ ಕೈಬಿಡುವ ಇಕ್ಕಟ್ಟಿಗೆ ರಾಜ್ಯ ಸರ್ಕಾರ ಸಿಲುಕಿದೆ.
ಎರಡು ದಶಕಗಳಿಗೂ ಹೆಚ್ಚು ಅವಧಿಯಿಂದ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡಿಕೊಂಡು ಬಂದಿರುವ ಅವರನ್ನು ಮಾನವೀಯತೆ ದೃಷ್ಟಿಯಿಂದ ಮುಂದುವರಿಸಲು ಅವಕಾಶ ನೀಡುವಂತೆ’ ಪುನರ್ಪರಿಶೀಲನಾ ಅರ್ಜಿ ಸಲ್ಲಿಸಿದ್ದು, ನೇಮಕಾತಿ ಪ್ರಕ್ರಿಯೆಯನ್ನು ಮತ್ತೆ ಮುಂದೂಡಿದೆ. ಇದು ವಿದ್ಯಾರ್ಥಿಗಳ ಒಂದು, ಮೂರು ಮತ್ತು ಐದನೇ ಸೆಮಿಸ್ಟರ್ ಕಲಿಕೆಗೂ ತೊಡಕಾಗಿದೆ.
ರಾಜ್ಯದಲ್ಲಿನ ಶೇ 50ಕ್ಕೂ ಹೆಚ್ಚು ಪ್ರಥಮ ದರ್ಜೆ ಕಾಲೇಜುಗಳು ಬೋಧನೆಗಾಗಿ ಅತಿಥಿ ಉಪನ್ಯಾಸಕರನ್ನೇ ಅವಲಂಬಿಸಿವೆ. ಎರಡು ದಶಕಗಳಿಗೂ ಹೆಚ್ಚು ಸಮಯದಿಂದ ಅತಿಥಿ ಉಪನ್ಯಾಸಕರ ಸೇವೆಯನ್ನು ಕಾಲೇಜು ಶಿಕ್ಷಣ ಇಲಾಖೆ ಬಳಸಿಕೊಳ್ಳುತ್ತಾ ಬಂದಿದೆ. ನಿಯಮದಂತೆ, ಅವರನ್ನು ಶೈಕ್ಷಣಿಕ ವರ್ಷದ ಆರಂಭದಲ್ಲಿ ನೇಮಕ ಮಾಡಿಕೊಂಡು, ವರ್ಷದ ಅಂತ್ಯಕ್ಕೆ ಕರ್ತವ್ಯದಿಂದ ಬಿಡುಗಡೆ ಮಾಡಲಾಗುತ್ತದೆ. 2024–25ನೇ ಸಾಲಿನಲ್ಲಿ ನೇಮಕವಾದ ಅತಿಥಿ ಉಪನ್ಯಾಸಕರನ್ನು ಇದೇ ಆಗಸ್ಟ್ 2ರಂದು ಕರ್ತವ್ಯದಿಂದ ಬಿಡುಗಡೆ ಮಾಡಲಾಗಿತ್ತು. ಮತ್ತೆ ಆ.3 ಕ್ಕೆ ಮರು ನೇಮಕ ಮಾಡಿಕೊಳ್ಳಬೇಕಿತ್ತು. ಆದರೆ, ಅತಿಥಿ ಉಪನ್ಯಾಸಕರ ನಡುವಿನ ‘ಅರ್ಹತೆ’ಯ ವಿಷಯದ ಕಾನೂನು ಹೋರಾಟದಿಂದ ನೇಮಕಾತಿ ವಿಳಂಬವಾಗಿದ್ದು, ಶೈಕ್ಷಣಿಕ ಚಟುವಟಿಕೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ.
ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬೋಧಕರಾಗಿ ಕೆಲಸ ಮಾಡುವವರು ಸ್ನಾತಕೋತ್ತರ ಪದವಿಯ ಜತೆಗೆ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್ಇಟಿ) ಇಲ್ಲವೇ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (ಕೆ-ಸೆಟ್) ತೇರ್ಗಡೆಯಾಗಿರಬೇಕು, ಪಿಎಚ್.ಡಿ ಪಡೆದಿರಬೇಕು ಎಂದು ಕೆಲ ವರ್ಷಗಳ ಹಿಂದೆಯೇ ಯುಜಿಸಿ ನಿಯಮ ರೂಪಿಸಿತ್ತು. ಪ್ರಥಮ ದರ್ಜೆ ಕಾಲೇಜುಗಳಲ್ಲೂ ಇಂತಹ ಅರ್ಹತೆ ಹೊಂದಿರುವ ಅತಿಥಿ ಉಪನ್ಯಾಸಕರನ್ನೇ ನೇಮಕ ಮಾಡಿಕೊಳ್ಳಬೇಕು ಎಂದು ಸೂಚಿಸಿತ್ತು.
ಇದನ್ನು ಪ್ರಶ್ನಿಸಿ ಉಪನ್ಯಾಸಕರು ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ಕೋರ್ಟ್, ‘ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಯುಜಿಸಿ ನಿಗದಿ ಮಾಡಿರುವ ಅರ್ಹತೆಗಳನ್ನೇ ಅತಿಥಿ ಉಪನ್ಯಾಸಕರ ಆಯ್ಕೆಗೂ ಅನ್ವಯಿಸಬೇಕು’ ಎಂದು ತೀರ್ಪು ನೀಡಿತ್ತು. ಅದರ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದ ಉನ್ನತ ಶಿಕ್ಷಣ ಇಲಾಖೆ, ಯುಜಿಸಿ ನಿಗದಿ ಮಾಡಿರುವ ಅರ್ಹತೆ ಹೊಂದಿಲ್ಲದ ಅತಿಥಿ ಉಪನ್ಯಾಸಕರ ಸೇವೆಯನ್ನು 2024–25ನೇ ಸಾಲಿಗೆ ಮುಂದುವರಿಸಿತ್ತು. ಇದನ್ನು ಪ್ರಶ್ನಿಸಿ ಹೊಸದಾಗಿ ಯುಜಿಸಿ ಅರ್ಹತೆ ಪಡೆದಿದ್ದ ಕೆಲವರು ರಿಟ್ ಅರ್ಜಿ ಸಲ್ಲಿಸಿದ್ದರು.
ಎಂ.ಫಿಲ್ ಪರಿಗಣಿಸಲು ಒತ್ತಾಯ
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇದ್ದ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ 2007–08ಲ್ಲಿ ಹೊರಡಿಸಿದ್ದ ನೇಮಕಾತಿ ಅಧಿಸೂಚನೆಯಲ್ಲಿ ಎಂ.ಫಿಲ್ ಆದವರಿಗೂ ಅವಕಾಶ ನೀಡಲಾಗಿತ್ತು. 2009ರ ಜುಲೈ 11ಕ್ಕೂ ಹಿಂದೆ ಎಂ.ಫಿಲ್ ವಿದ್ಯಾರ್ಹತೆ ಪಡೆದಿದ್ದ ಎಲ್ಲರನ್ನೂ ನೇಮಕಾತಿಗೆ ಪರಿಗಣಿಸಲಾಗಿತ್ತು. ಆಗ ಸಹಾಯಕ ಪ್ರಾಧ್ಯಾಪಕರಾಗಿ ನೇಮಕವಾದ ಹಲವರು ಈಗ ಪ್ರಾಧ್ಯಾಪಕರಾಗಿ ಬಡ್ತಿ ಪಡೆದಿದ್ದಾರೆ. ಹಾಗಾಗಿ, 2009ಕ್ಕೂ ಮೊದಲು ಪಡೆದಿದ್ದ ಎಂ.ಫಿಲ್ ಅರ್ಹತೆಯನ್ನು ಅತಿಥಿ ಉಪನ್ಯಾಸಕರ ನೇಮಕಕ್ಕೆ ಪರಿಗಣಿಸಲು ಒತ್ತಾಯಿಸುತ್ತಾರೆ ರಾಜ್ಯ ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಹನುಮಂತಗೌಡ ಕಲ್ಮನಿ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕ ವಿಚಾರ ಕಗ್ಗಂಟಾಗಿದ್ದು, ಕಾನೂನು ತಜ್ಞರ ಸಲಹೆ ಪಡೆದು ತ್ವರಿತ ನಿರ್ಧಾರ ತೆಗೆದುಕೊಳ್ಳಲಾಗುವುದುಡಾ.ಎಂ.ಸಿ.ಸುಧಾಕರ್, ಉನ್ನತ ಶಿಕ್ಷಣ ಸಚಿವ
ಎರಡು ದಶಕದಿಂದ ಕಡಿಮೆ ಗೌರವಧನಕ್ಕೆ ದುಡಿಯುತ್ತಿರುವ ಅತಿಥಿ ಉಪನ್ಯಾಸಕರಿಗೆ ಯುಜಿಸಿ ನಿಯಮ ಪೂರ್ವಾನ್ವಯ ಮಾಡದೆ. ಅನುಭವ ಆಧಾರದ ಮೇಲೆ ಮುಂದುವರಿಸಬೇಕುಎಚ್.ಸೋಮಶೇಖರ ಶಿಮೊಗ್ಗಿ, ಅಧ್ಯಕ್ಷ, ಅತಿಥಿ ಉಪನ್ಯಾಸಕರ ಸಮನ್ವಯ ಸಮಿತಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.