ADVERTISEMENT

ಮತ ಕಳವು ನೆಪದಲ್ಲಿ ಸುಳ್ಳು ಸಂಕಥನ ಸೃಷ್ಟಿ: ಎಚ್‌.ಡಿ. ದೇವೇಗೌಡ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2025, 15:38 IST
Last Updated 15 ಡಿಸೆಂಬರ್ 2025, 15:38 IST
ಎಚ್.ಡಿ. ದೇವೇಗೌಡ
ಎಚ್.ಡಿ. ದೇವೇಗೌಡ   

ನವದೆಹಲಿ: ಮತ ಕಳವು ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಹಾಗೂ ಸಾಂವಿಧಾನಿಕ ಸಂಸ್ಥೆಗಳ ವಿರುದ್ಧ ಸುಳ್ಳಿನ ಸಂಕಥನ ಸೃಷ್ಟಿಸುತ್ತಿರುವ ಪ್ರತಿಪಕ್ಷಗಳು ಭವಿಷ್ಯದಲ್ಲಿ ಘೋರ ಪರಿಣಾಮ ಅನುಭವಿಸುತ್ತವೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಎಚ್ಚರಿಸಿದರು. 

ಚುನಾವಣಾ ವ್ಯವಸ್ಥೆ ಸುಧಾರಣೆ ಕುರಿತು ರಾಜ್ಯಸಭೆಯಲ್ಲಿ ಸೋಮವಾರ ನಡೆದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಪ್ರತಿಪಕ್ಷಗಳು ನಿರಂತರವಾಗಿ ಸುಳ್ಳಿನ ಕಥೆಗಳನ್ನು ಪ್ರಚಾರ ಮಾಡುತ್ತಾ ಹೋದರೆ, ಮತದಾರರ ಮನಸ್ಸಿನಲ್ಲಿ ಅನುಮಾನಗಳನ್ನು ಹುಟ್ಟು ಹಾಕಿದರೆ ಅದರಿಂದ ಪ್ರತಿಪಕ್ಷಗಳಿಗೆ ಒಳ್ಳೆಯದು ಆಗುವುದಿಲ್ಲ’ ಎಂದರು. 

‘ನಮ್ಮದು ಬಹಳ ದೊಡ್ಡ ರಾಷ್ಟ್ರ. ಕಾಂಗ್ರೆಸ್ ಪಕ್ಷವು ಮೂರು ರಾಜ್ಯಗಳಲ್ಲಿ ಅಧಿಕಾರದಲ್ಲಿ ಇರಬಹುದು. ನನ್ನ ಪ್ರತಿಪಕ್ಷ ಸ್ನೇಹಿತರೇ ದಯವಿಟ್ಟು ನೆನಪಿಡಿ ‘ವೋಟ್ ಚೋರಿ’ ಎಂಬ ಪದಗಳನ್ನು ಬಳಸುವುದರಿಂದ ನೀವು ಮುಂಬರುವ ದಿನಗಳಲ್ಲಿ ತೊಂದರೆ ಅನುಭವಿಸುತ್ತೀರಿ. ನೀವು ಯುದ್ಧದಲ್ಲಿ ಗೆಲ್ಲಲು ಸಾಧ್ಯವಿಲ್ಲ’ ಎಂದರು. 

ADVERTISEMENT

‘ವೋಟ್ ಚೋರಿ’ ಎಂಬ ಅಪಪ್ರಚಾರದ ಮೂಲಕ ನರೇಂದ್ರ ಮೋದಿ ಅವರ ನಾಯಕತ್ವವನ್ನು ದೂಷಿಸುವ ಮೂಲಕ ಮತ್ತು ಮತದಾರರ ಮನಸ್ಸಿನಲ್ಲಿ ಅನುಮಾನವನ್ನು ಸೃಷ್ಟಿಸುವ ಮೂಲಕ ಪ್ರತಿಪಕ್ಷಗಳು ಏನು ಗಳಿಸಲಿವೆ ಎಂದು ಪ್ರಶ್ನಿಸಿದ ಅವರು, ನಿಮ್ಮ ಮನಸ್ಸಿಗೆ ಏನಾಗಿದೆ? ಏನಾದರೂ ಸಮಸ್ಯೆ ಇದ್ದರೆ ಸರಿಪಡಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು. ದೇವೇಗೌಡರ ಮಾತುಗಳಿಗೆ ಕಾಂಗ್ರೆಸ್‌ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. 

ನಾನು ಏಳು ದಶಕಗಳಿಗೂ ಹೆಚ್ಚಿನ ಸಾರ್ವಜನಿಕ ಜೀವನದಲ್ಲಿ ಚುನಾವಣೆಯಲ್ಲಿ ಸೋಲು ಗೆಲುವನ್ನು ಎದುರಿಸಿದ್ದೇನೆ. 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸ್ನೇಹಿತರೇ ನನ್ನನ್ನು ಸೋಲಿಸಿದಾಗ  ಮತಗಳ್ಳತನವೆಂದು ದೂಷಿಸಲಿಲ್ಲ ಎಂದು ಛೇಡಿಸಿದರು. 

ಕೇರಳದಲ್ಲಿ 18,000 ಮತದಾರರ ಸೇರ್ಪಡೆಗೆ ಸಂಬಂಧಿಸಿದಂತೆ ಅಂದಿನ ಪ್ರಧಾನಿ ಜವಾಹರಲಾಲ್ ನೆಹರೂ ಬರೆದ ಪತ್ರವನ್ನು ಅವರು ಉಲ್ಲೇಖಿಸಿದರು. ‘ನಾನು ಇದನ್ನು ಏಕೆ ಹೇಳುತ್ತಿದ್ದೇನೆಂದರೆ ನೆಹರೂ ಅವಧಿಯಲ್ಲಿಯೂ ಚುನಾವಣಾ ವ್ಯವಸ್ಥೆಯಲ್ಲಿ ಕೆಲವು ಲೋಪಗಳು ಇದ್ದವು’ ಎಂದರು. 

ಮತದಾರರ ಪಟ್ಟಿಯಲ್ಲಿನ ಲೋಪಗಳನ್ನು ಪ್ರಸ್ತಾಪಿಸಿಯೂ ಕಾಂಗ್ರೆಸ್ ಪಕ್ಷವು ಇತ್ತೀಚೆಗೆ ಬಿಹಾರ ಚುನಾವಣೆಯಲ್ಲಿ ಸೋಲು ಕಂಡಿತು. ಮತದಾರರ ಪಟ್ಟಿಯ ಕೂಲಂಕಶ ಪರಿಶೀಲನೆಯ ನಂತರವೂ ಆ ರಾಜ್ಯದಲ್ಲಿ ಏನಾಯಿತು ಎಂಬುದನ್ನು ಸ್ವತಃ ಪ್ರತಿಪಕ್ಷ ನಾಯಕರು ಆಲೋಚಿಸಬೇಕು. ಆ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಆರು ಶಾಸಕರು ಸಿಕ್ಕಿದ್ದಾರೆ ಎಂದು ಅವರು ಕಟುವಾಗಿ ಟೀಕಿಸಿದರು.

ಮತದಾರರ ಪಟ್ಟಿಯ ಪರಿಷ್ಕರಣೆ ಬಗ್ಗೆ ಪ್ರಧಾನಿಯವರ ವಿರುದ್ಧ ಪ್ರತಿಪಕ್ಷಗಳು ಆರೋಪಗಳನ್ನು ಮಾಡಲು ಏಕೆ ಬಯಸುತ್ತದೆ ಎಂದು ಖಾರವಾಗಿ ಪ್ರಶ್ನಿಸಿದ ದೇವೇಗೌಡರು ದೇಶದಲ್ಲಿ ಚುನಾವಣಾ ಆಯೋಗವಿದೆ, ಸುಪ್ರೀಂ ಕೋರ್ಟ್ ಇದೆ. ಈ ಎಲ್ಲ ವಿಷಯಗಳನ್ನು ಸರಿಪಡಿಸಲು ಚುನಾವಣಾ ಆಯೋಗವು ಎಲ್ಲ ರಾಜ್ಯ ಘಟಕಗಳಿಗೆ ನಿರ್ದೇಶನ ನೀಡಿದೆ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.