ರಾಮನಗರ: ಕರ್ನಾಟಕ ಜಾನಪದ ಪರಿಷತ್ ಮತ್ತು ಜಾನಪದ ಲೋಕದ ನೂತನ ಅಧ್ಯಕ್ಷರಾಗಿ ಜಾನಪದ ವಿದ್ವಾಂಸ ಪ್ರೊ. ಹಿ.ಶಿ. ರಾಮಚಂದ್ರೇಗೌಡ ಆಯ್ಕೆಯಾಗಿದ್ದಾರೆ.
ಹಿಂದಿನ ಅಧ್ಯಕ್ಷ ಟಿ. ತಿಮ್ಮೇಗೌಡರ ರಾಜೀನಾಮೆಯಿಂದ ಈ ಸ್ಥಾನ ತೆರವಾ ಗಿತ್ತು. ಬುಧವಾರ ನಡೆದ ಪರಿಷತ್ತಿನ 122ನೇ ಆಡಳಿತ ಮಂಡಳಿ ಸಭೆಯಲ್ಲಿ ರಾಮಚಂದ್ರೇಗೌಡ ಅವರನ್ನು ಸರ್ವಾನುಮತದಿಂದ ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು ಎಂದು ಪರಿಷತ್ತಿನ ಮ್ಯಾನೇಜಿಂಗ್ ಟ್ರಸ್ಟಿ ಆದಿತ್ಯ ನಂಜರಾಜ್ ತಿಳಿಸಿದ್ದಾರೆ.
ಇದೇ 22ರಂದು ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮವು ನಡೆಯಲಿದೆ. ರಾಮಚಂದ್ರೇಗೌಡರು ಈ ಹಿಂದೆ ಪರಿಷತ್ತಿನ ಆಡಳಿತ ಮಂಡಳಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಮೈಸೂರು ವಿವಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿವೃತ್ತ ಜಾನಪದ ಪ್ರಾಧ್ಯಾಪಕರಾಗಿರುವ ರಾಮಚಂದ್ರೇಗೌಡರು 2001ರಿಂದ 2004ರವರೆಗೆ ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕನ್ನಡ ಸಮಗ್ರ ಜನಪದ ಸಾಹಿತ್ಯ ಪ್ರಕಟಣೆ ಸಮಿತಿ ಅಧ್ಯಕ್ಷರಾಗಿಯೂ ದುಡಿದಿದ್ದಾರೆ. 25ಕ್ಕೂ ಹೆಚ್ಚು ಕೃತಿ ರಚಿಸಿದ್ದು, ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪುರಸ್ಕಾರ ಸಂದಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.