ADVERTISEMENT

‘ಎಸ್‌ಸಿಪಿ–ಟಿಎಸ್‌ಪಿ ಹಣ ವಾಪಸ್ ಪಡೆಯಿರಿ’

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2021, 18:50 IST
Last Updated 10 ಆಗಸ್ಟ್ 2021, 18:50 IST
ಎಚ್‌.ಆಂಜನೇಯ
ಎಚ್‌.ಆಂಜನೇಯ   

ಬೆಂಗಳೂರು: ‘ವಿವಿಧ ಇಲಾಖೆಗಳಲ್ಲಿರುವ ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್‌ಸಿಪಿ) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಗಳ (ಟಿಎಸ್‌ಪಿ) ಕೋಟ್ಯಂತರ ಅನುದಾನವನ್ನು ಸಮಾಜ ಕಲ್ಯಾಣ ಇಲಾಖೆ ವಾಪಸ್‌ ಪಡೆಯಬೇಕು. ಆ ಹಣದಿಂದ ಸಮುದಾಯದ ಜನರಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು’ಎಂದು ಕಾಂಗ್ರೆಸ್‌ ಮುಖಂಡ ಎಚ್.ಆಂಜನೇಯ ಒತ್ತಾಯಿಸಿದ್ದಾರೆ.

‘ರಾಜ್ಯದ ಬಹುತೇಕ ಸಚಿವರು ದಕ್ಷವಾಗಿ ಕಾರ್ಯನಿರ್ವಹಿಸದ ಕಾರಣ ವಿವಿಧ ಇಲಾಖೆಗಳಲ್ಲಿನ ಪರಿಶಿಷ್ಟ ಸಮುದಾಯಗಳಿಗೆ ಮೀಸಲಾದ ಹಣ ಸದ್ಬಳಕೆ ಆಗಿಲ್ಲ. ಇದಕ್ಕೆ ಅನುದಾನದ ಕೊರತೆ, ಲಾಕ್‌ಡೌನ್‌ ಎಂಬ ಉತ್ತರ ನೀಡುವುದು ಸಮಂಜಸವಲ್ಲ’ ಎಂದು ಹೇಳಿದ್ದಾರೆ.

‘ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌, ನೀರಾವರಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿರುವ ಎಸ್‌ಸಿಪಿ, ಟಿಎಸ್‌ಪಿ ಯೋಜನೆಗಳ ಹಣವನ್ನು ಸಮಾಜ ಕಲ್ಯಾಣ ಇಲಾಖೆ ವಾಪಸ್ ಪಡೆಯಬೇಕು. ಇದರಿಂದ ಪರಿಶಿಷ್ಟ ಸಮುದಾಯದ ಜನರಿಗೆ ರಸ್ತೆ, ವಸತಿ, ವಿದ್ಯಾರ್ಥಿಗಳಿಗೆ ಗುಣಮಟ್ಟ ಶಿಕ್ಷಣ, ಹಾಸ್ಟೆಲ್‌ ಮತ್ತು ನಿರುದ್ಯೋಗಿಗಳಿಗೆ ಸ್ವಯಂ ಉದ್ಯೊಗ ಕೈಗೊಳ್ಳಲು ಸಾಲ, ಸಹಾಯಧನ ಸೌಲಭ್ಯ ಕಲ್ಪಿಸಬಹುದು’ ಎಂದು ಸಲಹೆ ನೀಡಿದ್ದಾರೆ.

ADVERTISEMENT

‘ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಪರಿಶಿಷ್ಟ ಜಾತಿಯ ಜನರು ವಸತಿ ನಿರ್ಮಿಸಿಕೊಳ್ಳಲು ₹5 ಲಕ್ಷ ನೆರವು ನೀಡುವ ಯೋಜನೆ ಘೋಷಿಸಿರುವುದು ಸ್ವಾಗತಾರ್ಹ. ಇದನ್ನು ಇತರ ವರ್ಗದ ಜನರಿಗೂ ವಿಸ್ತರಿಸಬೇಕು’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.