ಹುಬ್ಬಳ್ಳಿ: ‘ವಾಲ್ಮೀಕಿ ಸಮುದಾಯಕ್ಕೆ ಸೇರಿದ ಸತೀಶ್ ಜಾರಕಿಹೊಳಿ ಸಿಎಂ ಆದರೆ ನಮಗೆ ಸಂತಸವಾಗಲಿದೆ. ಪಕ್ಷದಲ್ಲಿ ಅವರು ದುಡಿದಿದ್ದಾರೆ. ಅವಕಾಶ ಸಿಕ್ಕಲ್ಲಿ ಸಿಎಂ ಆದರೆ ಒಳ್ಳೆಯದು’ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು.
‘ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಉಪ ಮುಖ್ಯಮಂತ್ರಿ ಮಾಡುವ ಹಿನ್ನೆಲೆಯಲ್ಲಿ ರಾಜ್ಯದ ಜನರ ಗಮನವನ್ನು ಬೇರೆಡೆ ಸೆಳೆಯುವ ನಿಟ್ಟಿನಲ್ಲಿ ಆರ್ಎಸ್ಎಸ್ ಬೆಂಬಲಿಸುವವರ ಮೇಲೆ ಕಾಂಗ್ರೆಸ್ ಸರ್ಕಾರ ವಿನಾಕಾರಣ ಕಾನೂನು ಕ್ರಮಕೈಗೊಳ್ಳುವ ಕೆಲಸ ಮಾಡುತ್ತಿದೆ' ಎಂದು ಆರೋಪಿಸಿದರು.
‘ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. 1975 ರಲ್ಲಿ ಇಂದಿರಾಗಾಂಧಿ ತಮ್ಮ ವಿರುದ್ಧ ಯಾರಾದರೂ ಮಾತನಾಡಿದರೇ ಅಂತವರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದರು. ಅದೇ ರೀತಿಯಲ್ಲಿ ಇಂದು ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಘೋಷಿತ ತುರ್ತು ಪರಿಸ್ಥಿತಿ ಜಾರಿಮಾಡಿದೆ. ದ್ವೇಷದ ರಾಜಕಾರಣ ಮಾಡುತ್ತಿದೆ’ ಎಂದು ಕಿಡಿಕಾರಿದರು.
ಆಕಾಂಕ್ಷಿಗಳು ಹೆಚ್ಚಳ: ‘ವಿಧಾನ ಪರಿಷತ್ನ ಕೆಲ ಸದಸ್ಯರ ಅವಧಿ ಮುಗಿಯುತ್ತಿದ್ದು, ಆ ಸ್ಥಾನಗಳ ನೇಮಕಕ್ಕೆ ಸಂಬಂಧಿಸಿದಂತೆ ಪಕ್ಷದ ನಾಯಕರು ಕಾರ್ಯಕರ್ತರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ. 15ಕ್ಕೂ ಹೆಚ್ಚು ಆಕಾಂಕ್ಷಿಗಳು ಸ್ಪರ್ಧೆಗೆ ಆಸಕ್ತಿ ವ್ಯಕ್ತಪಡಿಸಿದ್ದು, ಈ ಬಗ್ಗೆ ವರದಿ ಸಿದ್ಧಪಡಿಸಿ ಪಕ್ಷದ ನಾಯಕರಿಗೆ ಸಲ್ಲಿಸಲಾಗುವುದು. ಅಂತಿಮವಾಗಿ ಹೈಕಮಾಂಡ್ ತೀರ್ಮಾನಿಸುತ್ತದೆ’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.
ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಉಪಮುಖ್ಯಮಂತ್ರಿ ಮಾಡುವ ಹಿನ್ನೆಲೆಯಲ್ಲಿ ಆರ್ಎಸ್ಎಸ್ ವಿಷಯವನ್ನು ಮುಂಚೂಣಿಗೆ ತರಲಾಗಿದೆ. ಆರ್ಎಸ್ಎಸ್ ಬೆಂಬಲಿಸುವವರ ವಿರುದ್ಧ ಕಾಂಗ್ರೆಸ್ ಸರ್ಕಾರ ವಿನಾಕಾರಣ ಕ್ರಮ ಕೈಗೊಳ್ಳುತ್ತಿದೆ.–ಬಿ.ಶ್ರೀರಾಮುಲು, ಮಾಜಿ ಸಚಿವ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.