ಬೆಂಗಳೂರು: ಶಿವಮೊಗ್ಗದ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ತನಿಖೆಯನ್ನು, ರಾಷ್ಟ್ರೀಯ ತನಿಖಾ ದಳಕ್ಕೆ (ಎನ್ಐಎ) ವಹಿಸಿದ್ದನ್ನು ಪ್ರಶ್ನಿಸಲಾದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಪ್ರಕರಣದ ಆರೋಪಿಯಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಶಿವಮೊಗ್ಗದ ಹೊಸಬೀದಿ ನಿವಾಸಿ ಎ.ರೋಷನ್ (27) ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಶ್ರೀನಿವಾಸ ಹರೀಶ್ ಕುಮಾರ್ ಮತ್ತು ನ್ಯಾಯಮೂರ್ತಿ ಜೆ.ಎಂ.ಖಾಜಿ ಅವರಿದ್ದ ವಿಭಾಗೀಯ ನ್ಯಾಯಪೀಠ ಇದೇ 20ರಂದು ಪ್ರಕಟಿಸಿದೆ.
ಪ್ರತಿವಾದಿ ಕೇಂದ್ರ ಗೃಹ ಸಚಿವಾಲಯದ ಪರ ಸುಪ್ರೀಂ ಕೋರ್ಟ್ನ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಮಂಡಿಸಿದ್ದ, ‘ಕೊಲೆಯಾದ ಹರ್ಷ, ಗೋ ಸಂರಕ್ಷಣೆ ಹಾಗೂ ಭಜರಂಗದಳದ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದ. ಇದೇ ಕಾರಣಕ್ಕೆ ಆತನನ್ನು ಸಂಚು ರೂಪಿಸಿ ಹತ್ಯೆ ಮಾಡಲಾಗಿದೆ. ನಾಗರಿಕ ಸಮಾಜವನ್ನು ಭಯದ ಕೂಪಕ್ಕೆ ದೂಡುವಂತಹ ವಾತಾವರಣ ನಿರ್ಮಿಸುವುದು ಆರೋಪಿಗಳ ಉದ್ದೇಶವಾಗಿತ್ತು. ಇದೊಂದು ಭಯೋತ್ಪಾದಕ ಕೃತ್ಯ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಹಾಗಾಗಿ, ಎನ್ಐಎ ತನಿಖೆ ನಡೆಸಲು ಇದು ಯೊಗ್ಯವಾದ ಪ್ರಕರಣ’ ಎಂಬ ವಾದವನ್ನು ನ್ಯಾಯಪೀಠ ಎತ್ತಿ ಹಿಡಿದಿದೆ. ಎನ್ಐಎ ಪರ ಪಿ.ಪ್ರಸನ್ನ ಕುಮಾರ್ ವಾದ ಮಂಡಿಸಿದ್ದರು.
ಶಿವಮೊಗ್ಗದಲ್ಲಿ 2022ರ ಮಾರ್ಚ್ 20ರಂದು ರಾತ್ರಿ ಹರ್ಷ ಕೊಲೆ ನಡೆದಿತ್ತು. ಈ ಪ್ರಕರಣದ ತನಿಖೆಯನ್ನು ಕೇಂದ್ರ ಸರ್ಕಾರ 2022ರ ಮಾರ್ಚ್ 21ರಂದು ಎನ್ಐಎಗೆ ವಹಿಸಿ ಆದೇಶಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.