ADVERTISEMENT

ಹಾಸನ ಮೆಗಾ ಡೇರಿ ವಿಸ್ತರಣೆಗೆ ₹150 ಕೋಟಿ ನೆರವು: ಕೇಂದ್ರ ಸರ್ಕಾರ ಸಮ್ಮತಿ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2026, 15:45 IST
Last Updated 5 ಫೆಬ್ರುವರಿ 2026, 15:45 IST
   

ನವದೆಹಲಿ: ಹಾಸನ ಮೆಗಾ ಡೇರಿ ವಿಸ್ತರಣಾ ಯೋಜನೆಗೆ ರಾಷ್ಟ್ರೀಯ ಡೇರಿ ಅಭಿವೃದ್ಧಿ ಮಂಡಳಿ ಮೂಲಕ ₹150 ಕೋಟಿ ಸಾಲ ಸೌಲಭ್ಯ ಕೊಡಿಸಲು ಕೇಂದ್ರ ಸರ್ಕಾರ ಸಮ್ಮತಿಸಿದೆ.

ಈ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಹಾಸನ ಹಾಲು ಒಕ್ಕೂಟದ ಅಧ್ಯಕ್ಷ ಎಚ್.ಡಿ. ರೇವಣ್ಣ ಅವರೊಂದಿಗೆ ಕೇಂದ್ರದ ಮೀನುಗಾರಿಕೆ, ಹೈನುಗಾರಿಕೆ ಮತ್ತು ಪಶುಸಂಗೋಪನಾ ಸಚಿವ ರಾಜೀವ್ ರಂಜನ್ ಸಿಂಗ್ (ಲಲನ್ ಸಿಂಗ್) ಅವರನ್ನು ಗುರುವಾರ ಇಲ್ಲಿ ಭೇಟಿಯಾಗಿ ವಿನಂತಿ ಮಾಡಿದರು. ಕುಮಾರಸ್ವಾಮಿ ಮನವಿಗೆ ಸ್ಪಂದಿಸಿದ ಸಚಿವರು, ಸಾಲ ಮಂಜೂರು ಮಾಡಲು ಒಪ್ಪಿಗೆ ನೀಡಿದರು.

ಹಾಸನ ಹಾಲು ಒಕ್ಕೂಟವು ಲಾಭದ ದಾರಿಯಲ್ಲಿ ನಡೆಯುತ್ತಿರುವ ಸಹಕಾರ ಒಕ್ಕೂಟವಾಗಿದೆ. ಹಾಸನ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ಹಾಲು ಉತ್ಪಾದಕರಿಗೆ ಅತಿದೊಡ್ಡ ಆಸರೆಯಾಗಿದೆ. 1977ರಲ್ಲಿ ಆರಂಭವಾದ ಈ ಒಕ್ಕೂಟವು ಪ್ರತೀ ದಿನ 14.5 ಲಕ್ಷದಿಂದ 15 ಲಕ್ಷ ಲೀಟರ್ ನಷ್ಟು ಹಾಲು ಸಂಗ್ರಹ ಮಾಡುತ್ತದೆ. ಸುಮಾರು ಒಂದು ಲಕ್ಷಕ್ಕೂ ಅಧಿಕ ಹಾಲು ಉತ್ಪಾದಕರಿಗೆ ಜೀವನೋಪಾಯ ಒದಗಿಸಿದೆ ಎಂದು ಕುಮಾರಸ್ವಾಮಿ ವಿವರಿಸಿದರು.

ADVERTISEMENT

ನಿತ್ಯವೂ ಸಂಗ್ರಹ ಆಗುತ್ತಿರುವ ಹಾಲನ್ನು ಸಂಸ್ಕರಿಸಿ ಪ್ಯಾಕೆಟ್‌ಗಳಲ್ಲಿ ತುಂಬಿ ಮಾರಾಟ ಮಾಡುತ್ತಿದೆ ಹಾಗೂ ಅನೇಕ ಉಪ ಉತ್ಪನ್ನಗಳ ತಯಾರಿಸಿ ಲಾಭದ ಹಾದಿಯಲ್ಲಿ ಮುಂದೆ ಸಾಗುತ್ತಿದೆ. ಈಗ ಹಾಲು ಸಂಗ್ರಹಣೆಯ ಪ್ರಮಾಣ ಹೆಚ್ಚಾಗುತ್ತದೆ ಹಾಗೂ ಗ್ರಾಮೀಣ ಭಾಗದಲ್ಲಿ ಜೀವನೋಪಾಯ ವೃದ್ಧಿ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಹಾಸನ ಮೆಗಾಡೇರಿಯನ್ನು ಮತ್ತಷ್ಟು ವಿಸ್ತರಿಸಿ ಸಶಕ್ತಿಗೊಳಿಸಬೇಕಿದೆ. ಹೀಗಾಗಿ ಕೇಂದ್ರ ಸರ್ಕಾರದ ನೆರವು ಅಗತ್ಯವಾಗಿದೆ ಎಂದು ಅವರು ಮನವಿ ಮಾಡಿದರು.

ಹಾಸನದ ಮೊಸಳೆ ಹೊಸಹಳ್ಳಿ, ಮಾವಿನಕೆರೆ ರೈಲು ನಿಲ್ದಾಣಗಳ ಅಭಿವೃದ್ಧಿ ಬಗ್ಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಜತೆಹೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಕುಮಾರಸ್ವಾಮಿ ಚರ್ಚೆ ನಡೆಸಿದರು.

ಹೊಳೆನರಸೀಪುರ ತಾಲ್ಲೂಕಿನ ಮೊಸಳೆ ಹೊಸಹಳ್ಳಿ ಹಾಗೂ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯಕ್ಕೆ ನೇರ ಸಂಪರ್ಕ ಕಲ್ಪಿಸುವ ಮಾವಿನಕೆರೆ ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಿ ಅತ್ಯಾಧುನಿಕವಾಗಿ ಅಭಿವೃದ್ಧಿ ಮಾಡಬೇಕು ಎಂದು ದೇವೇಗೌಡ ವಿನಂತಿ ಮಾಡಿದರು.

ಪ್ರಸಕ್ತ ಸಂಸತ್ ಅಧಿವೇಶನ ಮುಗಿಯುವುದಕ್ಕೆ ಮೊದಲೇ ಈ ಬಗ್ಗೆ ವಿಸ್ತೃತ ವರದಿ ಪಡೆದುಕೊಳ್ಳಲಾಗುವುದು. ಮೊಸಳೆ ಹೊಸಹಳ್ಳಿ ರೈಲು ನಿಲ್ದಾಣವನ್ನು ಅತ್ಯಾಧುನಿಕವಾಗಿ ಅಭಿವೃದ್ಧಿಪಡಿಸಲಾಗುವುದು. ಧಾರ್ಮಿಕ ಕೇಂದ್ರ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯಕ್ಕೆ ನೇರ ಸಂಪರ್ಕ ಕಲ್ಪಿಸುವ ಮಾವಿನಕೆರೆ ರೈಲು ನಿಲ್ದಾಣವನ್ನು ಪಾರಂಪರಿಕ ರೈಲು ನಿಲ್ದಾಣವನ್ನಾಗಿ ಅಭಿವೃದ್ಧಿ ಮಾಡಲು ಕ್ರಮ ವಹಿಸಲಾಗುವುದು ಎಂದು ರೈಲ್ವೆ ಸಚಿವರು ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.