ADVERTISEMENT

ಪ್ರಚೋದನಕಾರಿ ಭಾಷಣ; ಮುತಾಲಿಕ್ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಕ್ಕೆ ನಿಷೇಧ

​ಪ್ರಜಾವಾಣಿ ವಾರ್ತೆ
Published 28 ಜುಲೈ 2022, 14:47 IST
Last Updated 28 ಜುಲೈ 2022, 14:47 IST
ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್
ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್   

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲ್ಲೂಕುಗಳಿಗೆ ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರವೇಶಕ್ಕೆ ನಿಷೇಧ ವಿಧಿಸಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಪರಿಗಣಿಸಿ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಮೋದ್ ಮುತಾಲಿಕ್ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಪ್ರವೇಶಕ್ಕೆ ಜು.28ರಿಂದ ಮುಂದಿನ ಆದೇಶದವರೆಗೆ ನಿಷೇಧ ಜಾರಿಯಲ್ಲಿ ಇರಲಿದೆ.

ಪ್ರಮೋದ್ ಮುತಾಲಿಕ್‌ ಅವರು ಬೆಳ್ಳಾರೆ ಮತ್ತು ಮೃತ ಪ್ರವೀಣ್‌ ಮನೆ ಹಾಗೂ ಇತರ ಕಡೆಗಳಿಗೆ ಭೇಟಿಯಾಗುವ ಮಾಹಿತಿ ದೊರಕಿದೆ. ಮುತಾಲಿಕ್ ಅವರು ಈ ಹಿಂದೆ ಭೇಟಿ ಮಾಡಿದ ಸ್ಥಳಗಳಲ್ಲಿ ಪ್ರಚೋದನಕಾರಿ ಭಾಷಣ ಮಾಡಿ ಹಿಂದೂ ಸಮುದಾಯದ ಜನರ ಕೋಮು ಭಾವನೆ ಕೆರಳಿಸುತ್ತ ಬಂದಿದ್ದಾರೆ ಹಾಗೂ ಕೋಮು ಸೌಹಾರ್ದ ಹದಗೆಡಿಸಿದ ಪ್ರಕರಣಗಳು ವರದಿಯಾಗಿವೆ. ಈಗ ಅವರು ವ್ಯಾಪ್ತಿಗೆ ಪ್ರವೇಶಿಸಿದ್ದಲ್ಲಿ ಪ್ರಚೋದನಕಾರಿ ಹೇಳಿಕೆಯನ್ನು ನೀಡಿ ಮತ್ತಷ್ಟು ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗುವ ಸಾಧ್ಯತೆ ಇರುವುದರಿಂದ ಅವರಿಗೆ ದಂಡ ಪ್ರಕ್ರಿಯೆ ಸಂಹಿತೆ 1973ರ ಕಲಂ 144ರ ಅನ್ವಯ ಆದೇಶ ಹೊರಡಿಸುವಂತೆ ಪೊಲೀಸ್ ಅಧೀಕ್ಷಕರು ಮಾಡಿರುವ ಮನವಿ ಮೇರೆಗೆ ಈ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.