ADVERTISEMENT

ಕಪಾಲಬೆಟ್ಟದಲ್ಲಿ ಎಲ್ಲಾ ನಿರ್ಮಾಣ ಕಾರ್ಯಕ್ಕೆ ಹೈಕೋರ್ಟ್‌ ತಡೆ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2020, 20:53 IST
Last Updated 19 ಅಕ್ಟೋಬರ್ 2020, 20:53 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಕನಕಪುರದ ಹಾರೋಬೆಲೆಯ ಕಪಾಲಬೆಟ್ಟದಲ್ಲಿನ ಎಲ್ಲಾ ನಿರ್ಮಾಣ ಕಾರ್ಯಗಳಿಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

‘ಭೂಮಂಜೂರಾತಿ ನಿಯಮಗಳನ್ನು ಉಲ್ಲಂಘಿಸಿ 10 ಎಕರೆ ಗೋಮಾಳವನ್ನು ಮಂಜೂರು ಮಾಡಲಾಗಿದೆ’ ಎಂದು ಅಂತೋಣಿಸ್ವಾಮಿ ಮತ್ತು ಇತರ ಏಳು ಜನ ಸ್ಥಳೀಯರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ಪೀಠ, ಸರ್ಕಾರಕ್ಕೆ ನೋಟಿಸ್ ನೀಡಿದೆ. ನ್ಯಾಯಾಲಯ ಅನುಮತಿ ಪಡೆಯದೆ ಯಾವುದೇ ನಿರ್ಮಾಣ ಕಾರ್ಯ ಕೈಗೊಳ್ಳದಂತೆ ಹಾರೋಬೆಲೆ ಕಪಾಲಬೆಟ್ಟ ಅಭಿವೃದ್ಧಿ ಟ್ರಸ್ಟ್‌ಗೆ ಪೀಠ ನಿರ್ದೇಶನ ನೀಡಿದೆ.

‘ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಅವರ ಸಹೋದರ, ಸಂಸದ ಡಿ.ಕೆ. ಸುರೇಶ್ ಅವರೇ ಮುಂದಾಳತ್ವ ವಹಿಸಿ ಭೂಮಿ ಮಂಜೂರು ಮಾಡಿಸಿದ್ದಾರೆ. ಟ್ರಸ್ಟ್‌ನಿಂದ ಮನವಿ ಸಲ್ಲಿಕೆಯಾಗುವ ಮುನ್ನವೇ ಭೂಮಂಜೂರಾತಿ ಪ್ರಕ್ರಿಯೆ ಆರಂಭಿಸಿದ್ದರು’ ಎಂದು ಅರ್ಜಿದಾರರು ದೂರಿದ್ದಾರೆ.

ADVERTISEMENT

‘2017ರ ಫೆಬ್ರುವರಿ 15ರಂದು ಡಿ.ಕೆ.ಶಿವಕುಮಾರ್, ಅದೇ ತಿಂಗಳ 20ರಂದು ಡಿ.ಕೆ.ಸುರೇಶ್‌ ಅವರು ರಾಮನಗರ ಜಿಲ್ಲಾಧಿಕಾರಿಗೆ ಭೂಮಂಜೂರಾತಿ ಸಂಬಂಧ ಅಧಿಕೃತ ಟಿಪ್ಪಣಿ ಕಳುಹಿಸಿದ್ದರು. ಬಳಿಕ ಮಾರ್ಚ್ 18ರಂದು ಟ್ರಸ್ಟ್‌ನಿಂದ ಔಪಚಾರಿಕ ಮನವಿ ಪತ್ರ ಪಡೆದಿದ್ದಾರೆ. 2018ರ ಫೆಬ್ರುವರಿ 26ರಂದು ಭೂಮಿ ಮಂಜೂರಾಗಿದೆ’ ಎಂದು ಅರ್ಜಿದಾರರು ವಿವರಿಸಿದ್ದಾರೆ.

ಭೂಮಂಜೂರಾತಿ ಮತ್ತು ಭೂಪರಿವರ್ತನೆ ಶುಲ್ಕ ಮನ್ನಾ ಮಾಡಿರುವ ಆದೇಶಗಳನ್ನು ಅರ್ಜಿದಾರರು ಪ್ರಶ್ನಿಸಿದ್ದಾರೆ. ‘ಜಾತಿ, ಮತ ಮತ್ತು ಧರ್ಮದ ಆಧಾರದಲ್ಲಿ ಭೂಮಿ ಮಂಜೂರು ಮಾಡುವುದು ಸುಪ್ರೀಂ ಕೋರ್ಟ್‌ ಆದೇಶದ ಉಲ್ಲಂಘನೆ’ ಎಂದು ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.