
ನವದೆಹಲಿ: ಮಾರುಕಟ್ಟೆಯಲ್ಲಿ ತೆಂಗಿನಕಾಯಿ ಮತ್ತು ಅದರ ಉತ್ಪನ್ನಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗುತ್ತಿದೆ. ಇದರಿಂದಾಗಿ, ತೆಂಗು ಬೆಳೆಯುವ ಪ್ರದೇಶಗಳಲ್ಲಿ ಉದ್ಯೋಗಾವಕಾಶಗಳ ಜೊತೆಗೆ ವಿವಿಧ ಉತ್ಪನ್ನಗಳು ಮತ್ತು ಉಪ ಉತ್ಪನ್ನಗಳಿಗೂ ಬೇಡಿಕೆ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ತೆಂಗು ಬೆಳೆಗಾರರಿಗೆ ಬಜೆಟ್ ಹಂಚಿಕೆಯನ್ನು ಹೆಚ್ಚಿಸುವ ಅವಶ್ಯಕತೆಯಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕವೂ ಸೇರಿ ವಿವಿಧ ರಾಜ್ಯಗಳಲ್ಲಿ ಯಥೇಚ್ಛವಾಗಿ ಬೆಳೆಯಲಾಗುತ್ತಿರುವ ಹಲಸು, ಹುಣಸೆ ಮತ್ತು ನೇರಳೆಗೆ ಉತ್ತೇಜನ ನೀಡುವುದಕ್ಕೆ ಪ್ರತ್ಯೇಕ ರಾಷ್ಟ್ರೀಯ ಮಂಡಳಿ ರಚಿಸಬೇಕು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮನವಿ ಮಾಡಿದ್ದಾರೆ.
ತೆಂಗಿನ ರಫ್ತು ವಹಿವಾಟು 2008-09ರಲ್ಲಿ ₹179.81 ಕೋಟಿ ಇತ್ತು. 2024-25ರಲ್ಲಿ ₹4349.01 ಕೋಟಿಗಳಿಗೆ ಏರಿದೆ. ಇದು ಅಖಿಲ ಭಾರತ ಮಟ್ಟದಲ್ಲಿ ಕಳೆದ 15 ವರ್ಷಗಳಲ್ಲಿ 20 ಪಟ್ಟು ಹೆಚ್ಚಾಗಿದೆ. ಕರ್ನಾಟಕದಲ್ಲಿಯೂ ಇದೇ ರೀತಿಯ ಬೆಳವಣಿಗೆ ಕಂಡುಬಂದಿದೆ. ಆದ್ದರಿಂದ, 2030ರ ವೇಳೆಗೆ ತೆಂಗಿನಕಾಯಿ ಕ್ಷೇತ್ರದಲ್ಲಿ ಬಲವಾದ ಬೆಳವಣಿಗೆ ಸಾಧಿಸಲು ಬಜೆಟ್ ಹಂಚಿಕೆಯನ್ನು ಹೆಚ್ಚಿಸಬೇಕಾಗಿದೆ ಎಂದು ಅವರು ಸಲಹೆ ಮಾಡಿದರು.
ಮೌಲ್ಯವರ್ಧನೆ ಮತ್ತು ಸಂಸ್ಕರಣೆಗೆ ₹150 ಕೋಟಿ ಮೀಸಲಿಡಬೇಕು ಎಂದೂ ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.