ಬೆಂಗಳೂರು: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಗೆ ಮಂಗಳವಾರ ನಾಮಪತ್ರ ಸಲ್ಲಿಸಿದರು.
ಸ್ವಂತ ಬಲದಿಂದ ಆಯ್ಕೆ ಆಗುವಷ್ಟು ಶಾಸಕರ ಸಂಖ್ಯೆ ಇಲ್ಲದಿರುವ ಕಾರಣ, ಕಾಂಗ್ರೆಸ್ ಬೆಂಬಲ ಪಡೆದು ಕಣಕ್ಕೆ ಇಳಿದಿದ್ದಾರೆ. ಬಿಜೆಪಿ ಮೂರನೇ ಅಭ್ಯರ್ಥಿಯನ್ನು ಕಣಕ್ಕೆ ಇಳಿಸದ ಕಾರಣ ದೇವೇಗೌಡರ ಆಯ್ಕೆ ಸುಗಮವಾಗಲಿದೆ.
ದೇವೇಗೌಡರು ಎರಡನೇ ಬಾರಿಗೆ ರಾಜ್ಯಸಭೆ ಪ್ರವೇಶಿಸುತ್ತಿದ್ದಾರೆ. ಈ ಹಿಂದೆ ಅವರು ಪ್ರಧಾನಿ ಆಗಿ ಆಯ್ಕೆ ಆದ ಸಂದರ್ಭದಲ್ಲಿ ರಾಜ್ಯಸಭೆ ಪ್ರವೇಶಿಸಿದ್ದರು.
‘ಸೋನಿಯಾಗಾಂಧಿ ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿ ಸ್ಪರ್ಧಿಸುವಂತೆ ಮನವಿ ಮಾಡಿದರು. ಬಿಜೆಪಿಯಲ್ಲೂ ಮೂರನೇ ಅಭ್ಯರ್ಥಿಯಾಗಲು ಹಲವರು ಆಸಕ್ತಿ ಹೊಂದಿದ್ದರೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿಲ್ಲ. ಇದನ್ನು ಅರವಿಂದ ಲಿಂಬಾವಳಿ ಹೇಳಿದ್ದರು. ಇದರ ಹೊರತಾಗಿ ಬಿಜೆಪಿಯ ಯಾರೂ ನನ್ನನ್ನು ಭೇಟಿ ಮಾಡಲಿಲ್ಲ. ಎರಡೂ ಪಕ್ಷಗಳಿಗೂ ಋಣಿ’ ಎಂದು ದೇವೇಗೌಡ ಸುದ್ದಿಗಾರರಿಗೆ ತಿಳಿಸಿದರು.
‘ರಾಜ್ಯಸಭೆಯಲ್ಲಿ ಹೆಚ್ಚು ಮಾತನಾಡಲು ಅವಕಾಶ ಸಿಗುವುದಿಲ್ಲ. ಸಿಕ್ಕ ಅವಕಾಶವನ್ನು ಜನರ ಸಮಸ್ಯೆಗಾಗಿ ಬಳಸಿಕೊಳ್ಳುತ್ತೇನೆ. ಇದು ನನ್ನ ಕೊನೇ ಹೋರಾಟವೋ ಗೊತ್ತಿಲ್ಲ. ಸಿದ್ಧಾಂತದ ಜತೆ ರಾಜಿ ಮಾಡಿಕೊಳ್ಳುವುದಿಲ್ಲ’ ಎಂದೂ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.