ADVERTISEMENT

ಶರಣಗೌಡ ಕಂದಕೂರ ಹೋರಾಟಕ್ಕೆ ದೇವೇಗೌಡ ಸಾಥ್

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2019, 9:17 IST
Last Updated 23 ಅಕ್ಟೋಬರ್ 2019, 9:17 IST
   

ಯಾದಗಿರಿ: ರಾಜಕೀಯ ಒತ್ತಡಕ್ಕೆ ಮಣಿದು ಪೊಲೀಸರು ಜೆಡಿಎಸ್ ಯುವ ಪ್ರಧಾನ ಕಾರ್ಯದರ್ಶಿ ಶರಣಗೌಡ ಕಂದಕೂರ ನಡೆಸುತ್ತಿರುವ ಪ್ರತಿಭಟನಾ ಸ್ಥಳದ ಸುತ್ತ 144 ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ ಎಂದು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೆಗೌಡ ಆರೋಪಿಸಿದರು.

ಯಾದಗಿರಿಯ ನಗರ ಪೊಲೀಸ್ ಠಾಣೆ ಎದುರು ಜೆಡಿಎಸ್ ಯುವ ಮುಖಂಡ ಶರಣಗೌಡ ಕಂದಕೂರ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಬೆಂಬಲ ಸೂಚಿಸಿದರು.

ನಮ್ಮ ಪಕ್ಷದ ಕಾರ್ಯಕರ್ತರನ್ನು ಬಂಧಿಸಿ ಹಲ್ಲೆ ನಡೆಸಿದ ಅಧಿಕಾರಿ ಮೇಲೆ ಕ್ರಮ ಜರುಗಿಸಬೇಕು ಎನ್ನುವುದು ನಮ್ಮ ಬೇಡಿಕೆ. ಈ ಕುರಿತು ಡಿಜಿ ಅವರ ಜೊತೆ ಮಂಗಳವಾರ ಮಾತಾಡಿದ್ದೆ. ಅವರು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಅದಾದ ಅರ್ಧ ಗಂಟೆಯಲ್ಲೇ ರಾಜಕೀಯ ಒತ್ತಡಕ್ಕೆ ಮಣಿದ ಡಿಜಿ ಅವರು ಕ್ರಮಕೈಗೊಳ್ಳುವ ಕುರಿತು ಪರಿಶೀಲಿಸುವುದಾಗಿ ತಿಳಿಸಿದರು. ರಾಜ್ಯ ಸರ್ಕಾರ ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದೆ. ಆಡಳಿತ ಸಂಪೂರ್ಣ ಕುಸಿದು ಬಿದ್ದಿದೆ ಎಂದು ದೂರಿದರು.

ADVERTISEMENT

ಮುಖ್ಯಮಂತ್ರಿಗಳ ಪ್ರವಾಸದ ವೇಳೆ ಶರಣಗೌಡರು ಊರಲ್ಲಿ ಇರಲ್ಲಿಲ್ಲ. ಆದರೂ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ನಮ್ಮ ಪಕ್ಷದ ಸುಮಾರು 20 ಜನರ ಮೇಲೆ ಪ್ರಕರಣ ದಾಖಲಿಸಿ ರಾಜಕೀಯ ಹಗೆತನ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.

ಹಲ್ಲೆಗೊಳಗಾದ ಕಾರ್ಯಕರ್ತರಿಗೆ ನ್ಯಾಯ ಸಿಗುವವರೆಗೂ ಪ್ರತಿಭಟನೆ ಮುಂದುವರೆಯಲಿದ್ದು, ಶರಣಗೌಡರಿಗೆ ನಾನು ಬೆಂಬಲವಾಗಿ ನಿಲ್ಲುತ್ತೇನೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.