ADVERTISEMENT

ಎಚ್‌ಡಿಕೆಯಿಂದ ‘ಕೈ’ಪಕ್ಷದ ನಾಯಕರಿಗೆ ಪ್ರಶ್ನೆಗಳ ಸರಮಾಲೆ

ಶಾಸಕರ ಖರೀದಿ, ಸರ್ಕಾರ ಉರುಳಿಸುವುದರಲ್ಲಿ ಕಾಂಗ್ರೆಸ್‌ ನಿಪುಣ

​ಪ್ರಜಾವಾಣಿ ವಾರ್ತೆ
Published 28 ಜುಲೈ 2020, 8:14 IST
Last Updated 28 ಜುಲೈ 2020, 8:14 IST
ಎಚ್‌.ಡಿ ಕುಮಾರಸ್ವಾಮಿ
ಎಚ್‌.ಡಿ ಕುಮಾರಸ್ವಾಮಿ    

ಬೆಂಗಳೂರು:ಶಾಸಕರನ್ನು ಖರೀದಿಸುವುದು, ಸರ್ಕಾರಗಳನ್ನು ಉರುಳಿಸುವುದರಲ್ಲಿ ನಿಪುಣತೆ ಹೊಂದಿರುವ ಕಾಂಗ್ರೆಸ್‌ನಿಂದಲೇ ‘ಕುದುರೆ ವ್ಯಾಪಾರ’ ಎಂಬ ಪದ ಹುಟ್ಟಿದ್ದು ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಬಿಜೆಪಿ ರಾಜಸ್ಥಾನದಲ್ಲಿ ಸರ್ಕಾರ ಉರುಳಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್‌ ‘ಪ್ರಜಾಪ್ರಭುತ್ವ ಉಳಿಸಿ’ ಎಂಬ ಹೋರಾಟ ಮಾಡುತ್ತಿದೆ. ಆದರೆ, ರಾಜಸ್ಥಾನದಲ್ಲಿ ಸರ್ಕಾರ ರಚಿಸಲು ಬೆಂಬಲ ನೀಡಿದ ಬಿಎಸ್‌ಪಿಯ ಎಲ್ಲ ಶಾಸಕರನ್ನು ಸೆಳೆಯುವ ಮೂಲಕ ಖರೀದಿಸಲಿಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.

‘ಕಷ್ಟ ಕಾಲದಲ್ಲಿ ಸರ್ಕಾರವನ್ನು ರಚಿಸಲು ಬೆಂಬಲ ಕೊಟ್ಟವರನ್ನೇ ಕುತಂತ್ರದಿಂದ ಸೆಳೆದುಕೊಳ್ಳುವುದು, ಇಡೀ ಪಕ್ಷವನ್ನೇ ವಿಲೀನಗೊಳಿಸುವುದನ್ನು ಪ್ರಜಾಪ್ರಭುತ್ವದ ನಡೆ ಎಂದು ಹೇಳಬಹುದೇ? ಸಮಾನ ಮನಸ್ಕ ಪಕ್ಷಗಳನ್ನು ಒಡೆದು, ಶಾಸಕರನ್ನು ಸೆಳೆಯುತ್ತಿದ್ದರೆ ನಿಮಗೆ ಯಾರು ಬೆಂಬಲ ಕೊಡುತ್ತಾರೆ. ಈ ತಪ್ಪುಗಳು ನಿಮಗೆ ಕಾಣುತ್ತಿಲ್ಲವೆ’ ಎಂದೂ ಕುಮಾರಸ್ವಾಮಿ ಕುಟುಕಿದ್ದಾರೆ.

ADVERTISEMENT

‘ಈಗ ದೊಡ್ಡ ಗಂಟಲು ಮಾಡುತ್ತಿರುವ ಕಾಂಗ್ರೆಸ್‌ ಹಿಂದೆ ಜೆಡಿಎಸ್‌ ಪಕ್ಷವನ್ನು ಒಡೆದಿಲ್ಲವೆ? ಕಳೆದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಂಟು ಶಾಸಕರನ್ನು ರಾಜ್ಯಸಭಾ ಚುನಾವಣೆಗಾಗಿ ಖರೀದಿಸಲಿಲ್ಲವೇ? ಇದು ಪ್ರಜಾಸತ್ತಾತ್ಮಕ ನಡೆಯೇ? ಖರೀದಿ ವಿಚಾರದಲ್ಲಿ ಎರಡೂ ಪಕ್ಷಗಳೂ ಅಪರಾಧಿಗಳೇ’ ಎಂದು ಅವರು ಹೇಳಿದ್ದಾರೆ.

‘ಅಷ್ಟೇ ಅಲ್ಲ ಎಸ್‌.ಎಂ.ಕೃಷ್ಣ ಮುಖ್ಯಮಂತ್ರಿ ಆಗಿದ್ದಾಗ ಕಾಂಗ್ರೆಸ್‌ ಪಕ್ಷ ನಮ್ಮ ಶಾಸಕರನ್ನು ಖರೀದಿ ಮಾಡಿರಲಿಲ್ಲವೇ?2018ರ ವಿಧಾನಸಭೆ ಚುನಾವಣೆ ನಂತರ ನಮ್ಮ ಶಾಸಕರನ್ನು ಖರೀದಿಸಿ ಸ್ವತಂತ್ರ ಸರ್ಕಾರವನ್ನು ರಚಿಸಲು ಹೊಂಚು ಹಾಕಿರಲಿಲ್ಲವೇ? ಈ ಪ್ರಶ್ನೆಗಳಿಗೆ ಉತ್ತರಿಸಲು ಕಾಂಗ್ರೆಸ್‌ಗೆ ನೈತಿಕತೆ ಇದೆಯೇ’ ಎಂದೂ ಕುಮಾರಸ್ವಾಮಿ ಹೇಳಿದ್ದಾರೆ.

‘ಹಿಂದೆ ಜೆಡಿಎಸ್ ಸರ್ಕಾರದ ಅವಧಿಯಲ್ಲಿ ಇದೇ ಕಾಂಗ್ರೆಸ್‌ನವರು ನಮ್ಮ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡಿತ್ತು. ಇದನ್ನು ಮನಗಂಡೇ ನಾನು ಕ್ಷಿಪ್ರ ರಾಜಕೀಯ ಕ್ರಾಂತಿ ಮಾಡಬೇಕಾಯಿತು. ಪಕ್ಷವನ್ನು ಒಡೆಯುವ, ಶಾಸಕರನ್ನು ಖರೀದಿಸುವ ವ್ಯವಹಾರದಲ್ಲಿ ಕಾಂಗ್ರೆಸ್‌ ನಿಪುಣತೆ ಪಡೆದಿದೆ’ ಎಂದು ಗೇಲಿ ಮಾಡಿದ್ದಾರೆ.

ಪಕ್ಷಾಂತರ ನಿಷೇಧ ಕಾಯ್ದೆ ಪರಿಣಾಮಕಾರಿಯಾಗಿಲ್ಲ. ಆದ್ದರಿಂದಲೇ ಈ ಪ್ರಜಾಪ್ರಭುತ್ವ ವಿರೋಧಿ ಪ್ರಹಸನಗಳು ನಡೆಯುತ್ತಿವೆ. ಹೀಗಾಗಿ ಪಕ್ಷಾಂತರ ಮಾಡಿದ ವ್ಯಕ್ತಿ, ಆತನ ಕುಟುಂಬಕ್ಕೆ ಎರಡು ಅವಧಿಗಳಿಗೆ ಚುನಾವಣೆಗೆ ಸ್ಪರ್ಧಿಸುವ ಮತ್ತು ಈ ಅವಧಿಯಲ್ಲಿ
ಯಾವುದೇ ಅಧಿಕಾರ ಹೊಂದದಂತೆ ಮಾಡುವುದು ಸೂಕ್ತ ಎಂದೂ ಸಲಹೆ ನೀಡಿದ್ದಾರೆ.

ಪ್ರಾಣ ಕೊಡಬೇಡಿ, ಜೀವ ಅಮೂಲ್ಯ

‘ಪ್ರಜಾಪ್ರಭುತ್ವ ಉಳಿಸಲು ಪ್ರಾಣ ನೀಡುವುದಾಗಿ ಕಾಂಗ್ರೆಸ್‌ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿಯೊಬ್ಬರು ಹೇಳಿದ್ದಾರೆ. ಸ್ವಾಮೀ, ಜೀವ ಅಮೂಲ್ಯ. ನೀವು ಪ್ರಾಣ ಕೊಡುವುದು ಬೇಡ. ಕಾಂಗ್ರೆಸ್‌ ನಡೆದು ಬಂದ ದಾರಿಯನ್ನು ನೆನಪಿಸಿಕೊಳ್ಳಿ. ನಂತರ ಪಕ್ಷಾಂತರ ನಿಷೇಧ ಕಾಯ್ದೆ ಸದೃಢಗೊಳಿಸುವತ್ತ ಚಿಂತನೆ ಮಾಡಿ. ಪ್ರಜಾಪ್ರಭುತ್ವ ತಂತಾನೆ ಉಳಿಯುತ್ತದೆ’ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.