ಬೆಂಗಳೂರು: ಮೈಸೂರು ದಸರಾ ಉತ್ಸವದಲ್ಲಿ ಕನ್ನಡ ಪುಸ್ತಕ ಪ್ರದರ್ಶನಕ್ಕೆ ಅವಕಾಶ ನೀಡಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕನ್ನಡ ಭಾಷೆ, ಸಂಸ್ಕೃತಿಯ ಕುರಿತ ನಿರ್ಲಕ್ಷ್ಯ ಮಾತೃ ಭಾಷೆಗೆ ಮಾಡಿದ ಅವಮಾನ, ದಸರಾದಲ್ಲಿ ಕನ್ನಡ ಪುಸ್ತಕ ಪ್ರದರ್ಶನ ಹಿಂದಿನಿಂದಲೂ ಇರುತ್ತಿತ್ತು. ಈ ಬಾರಿ ಪ್ರದರ್ಶನಕ್ಕೆ ಅವಕಾಶ ನೀಡದೆ ಕನ್ನಡ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಕಿಡಿಕಾರಿದ್ದಾರೆ.
ಬಿಜೆಪಿಯು ಕನ್ನಡವನ್ನು ಧಿಕ್ಕರಿಸಿ ತನ್ನ ’ರಹಸ್ಯ ಕಾರ್ಯಸೂಚಿ’ ಹೇರಲು ಹೊರಟಿದೆ. ಹಿಂದಿ ಭಾಷೆಯ ವಕ್ತಾರಿಕೆ ಮಾಡುವ ಬಿಜೆಪಿಯಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ ಎಂದು ಕುಟುಕಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ತಕ್ಷಣ ಪ್ರತಿಕ್ರಿಯಿಸಬೇಕು. ಪುಸ್ತಕ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.