ಬೆಂಗಳೂರು: 'ಅಚಾತುರ್ಯವೋ, ಕಳ್ಳತನವೋ ಒಟ್ಟಿನಲ್ಲಿ ವಿದ್ಯುತ್ ಕಳ್ಳತನದ ಬಗ್ಗೆ ಕುಮಾರಸ್ವಾಮಿ ಅವರು ಒಪ್ಪಿಕೊಂಡು, ದಂಡ ಕಟ್ಟುತ್ತೇನೆ ಎಂದು ಹೇಳಿದ್ದಾರೆ' ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
'ಕುಮಾರಸ್ವಾಮಿ ಅವರು ತಮ್ಮ ಮನೆಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಮಾಡಿಕೊಂಡಿದ್ದಾರೆ' ಎಂದು ಕಾಂಗ್ರೆಸ್ ಪಕ್ಷದ 'ಎಕ್ಸ್' ಖಾತೆಯಲ್ಲಿ ಮಾಡಿರುವ ಆರೋಪ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ವಿಧಾನಸೌಧ ಹಾಗೂ ಕೆಪಿಸಿಸಿ ಕಚೇರಿ ಬಳಿ ಅವರು ಪ್ರತಿಕ್ರಿಯಿಸಿದರು.
'ಕುಮಾರಸ್ವಾಮಿ ಮನೆಗೆ ವಿದ್ಯುತ್ ಕಳವು ವಿಚಾರವನ್ನು ಮಾಧ್ಯಮಗಳಲ್ಲಿ ಗಮನಿಸಿದೆ. ಅವರ ನೆರೆಹೊರೆಯವರೇ ಅಕ್ರಮ ವಿದ್ಯುತ್ ಸಂಪರ್ಕದ ವಿಡಿಯೋ ಮಾಡಿ ಮಾಧ್ಯಮಗಳಿಗೆ ನೀಡಿದ್ದಾರೆ.
ಆನಂತರ ನಮ್ಮ ಪಕ್ಷದ ಸಾಮಾಜಿಕ ಜಾಲತಾಣ ಘಟಕ ಏನು ಕೆಲಸ ಮಾಡಬೇಕೊ ಅದನ್ನು ಮಾಡಿದೆ. ಅವರ ಪಕ್ಷದ ಸೋಶಿಯಲ್ ಮೀಡಿಯಾದಲ್ಲಿ ಬೇಕಾದಷ್ಟು ಬರೆದಂತೆ, ನಮ್ಮ ಪಕ್ಷದವರು ಏನು ಕೆಲಸ ಮಾಡಬೇಕೋ ಅದನ್ನು ಮಾಡಿದ್ದಾರೆ. ಅವರು ಮಾಡೋದನ್ನು ನೋಡಿಕೊಂಡು ಸುಮ್ಮನೆ ಕುಳಿತುಕೊಳ್ಳಲು ಆಗುತ್ತದೆಯೇ' ಎಂದು ಮರುಪ್ರಶ್ನಿಸಿದರು.
ಕುಮಾರಸ್ವಾಮಿ ಅವರು ಈ ರೀತಿಯ ಕೆಲಸ ಮಾಡಿರುವುದು ತಪ್ಪಲ್ಲವೇ? ಎಂಬ ಪ್ರಶ್ನೆಗೆ, 'ವಿದ್ಯುತ್ ಕಳ್ಳತನ ಮಾಡಬಾರದು. ಜವಾಬ್ದಾರಿಯುತ ಸ್ಥಾನದಲ್ಲಿ ಇರುವ ನಮ್ಮಂಥವರೇ ಹೀಗೆ ಮಾಡಿದರೆ ತಪ್ಪಲ್ಲವೇ? ಈ ವಿಚಾರವಾಗಿ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ. ನಮಗೆ ಅದರ ಅವಶ್ಯಕತೆಯೂ ಇಲ್ಲ. ಬೆಸ್ಕಾಂನವರು ಕ್ರಮ ತೆಗೆದುಕೊಳ್ಳುತ್ತಾರೆ' ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.