ADVERTISEMENT

ರಾಜ್ಯ ರಾಜಕಾರಣಕ್ಕೆ ಮತ್ತೆ ಮರಳುವ ಸುಳಿವು ನೀಡಿದ ಎಚ್‌.ಡಿ.ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 15 ಜನವರಿ 2026, 15:32 IST
Last Updated 15 ಜನವರಿ 2026, 15:32 IST
ಎಚ್‌.ಡಿ.ಕುಮಾರಸ್ವಾಮಿ
ಎಚ್‌.ಡಿ.ಕುಮಾರಸ್ವಾಮಿ   

ಬೆಂಗಳೂರು: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣಕ್ಕೆ ಮತ್ತೆ ಮರಳುವ ಸುಳಿವು ನೀಡಿದ್ದಾರೆ.

ಸಂಕ್ರಾಂತಿಯ ದಿನ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ರಾಜ್ಯ ರಾಜಕಾರಣದಿಂದ ದೂರ ಸರಿಯುವುದಿಲ್ಲ. ನಾನು ಎಲ್ಲಿರಬೇಕು ಎನ್ನುವುದನ್ನು ತೀರ್ಮಾನ ಮಾಡುವುದು ರಾಜ್ಯದ ಜನ. ರಾಜ್ಯ ರಾಜಕಾರಣಕ್ಕೆ ಯಾವಾಗ ಬರಬೇಕು ಎನ್ನುವ ಜನರ ಆಶಯದಂತೆ ಮುಂದಿನ ತೀರ್ಮಾನ ಮಾಡುತ್ತೇನೆ’ ಎಂದರು.

‘ರಾಜ್ಯ ರಾಜಕೀಯದಿಂದ ದೂರ ಸರಿಯುತ್ತೇನೆ ಅಂತ ಯಾರಾದರೂ ತಿಳಿದುಕೊಂಡಿದ್ದರೆ ಅದು ತಪ್ಪು. ಪ್ರಧಾನ ಮಂತ್ರಿಯವರು ಒಳ್ಳೆಯ ಜವಾಬ್ದಾರಿ ಕೊಟ್ಟಿದ್ದಾರೆ. ಎರಡು ಇಲಾಖೆಗಳಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಲು ಅವಕಾಶ ನೀಡಿದ್ದಾರೆ. ರಾಜ್ಯ ರಾಜಕೀಯಕ್ಕೆ ಮರಳುವ ಕುರಿತು ತೀರ್ಮಾನ ಮಾಡುತ್ತೇನೆ’ ಎಂದರು.

ADVERTISEMENT

‘ಜೆಡಿಎಸ್‌ ಪ್ರಸ್ತುತ ಎನ್‌ಡಿಎ ಭಾಗವಾಗಿದೆ. ಮೈತ್ರಿಯಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ಇರಬಾರದು. ರಾಜ್ಯದಲ್ಲಿ ಉತ್ತಮ ಸರ್ಕಾರ ತರಬೇಕು ಎನ್ನುವುದೇ ನನ್ನ ಆಶಯ. ರಾಜ್ಯದ ಆಡಳಿತ ಹೇಗೆ ನಡೆಯುತ್ತಿದೆ ಎಂದು ನಿರಂತರವಾಗಿ ಗಮನಿಸುತ್ತಿದ್ದೇನೆ. ಒಳ್ಳೆಯ ಸರ್ಕಾರ ಬಂದು ಜನರು ನೆಮ್ಮದಿಯಿಂದ ಇರಬೇಕು. ಅದಕ್ಕಾಗಿ ಜನರ ತೀರ್ಮಾನದಂತೆ ನಡೆಯುತ್ತೇನೆ’ ಎಂದು ಹೇಳಿದರು.

‘ಸ್ಥಾನಮಾನಕ್ಕಾಗಿ ಕಾನೂನುಬಾಹಿರ ಕೆಲಸ’
ಸರ್ಕಾರ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಕೆಲಸ ಮಾಡಿಸುತ್ತಿದೆ. ಕಾಂಗ್ರೆಸ್‌ ಕಾರ್ಯಕರ್ತರೂ ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಕಾನೂನುಬಾಹಿರ ಕೆಲಸ ಮಾಡಿಸುತ್ತಿದ್ದಾರೆ. ಸರ್ಕಾರ ಸರಿ ಇಲ್ಲ. ಚುಕ್ಕಾಣಿ ಹಿಡಿದವರೂ ಸರಿ ಇಲ್ಲ ಎಂದು ಕುಮಾರಸ್ವಾಮಿ ದೂರಿದರು. ಕೆಲ ಅಧಿಕಾರಿಗಳು ಬಡ್ತಿ ಉತ್ತಮ ಸ್ಥಳಗಳ ನಿರೀಕ್ಷೆಯಲ್ಲಿ ಕಾನೂನು ಬಾಹಿರ ಕೆಲಸ ಮಾಡಿದಾಗ ಪ್ರತಿಫಲ ಅನುಭವಿಸಬೇಕಾಗುತ್ತದೆ. ‘ಪ್ರಜಾವಾಣಿ’ ಪತ್ರಿಕೆಯಲ್ಲಿ ಈಚೆಗೆ ‘ಕಳಪೆ ಕಾಮಗಾರಿ; ಆರು ಮಂದಿ ಹೊಣೆ’ ಎನ್ನುವ ವರದಿ ಓದಿದೆ. ವಿಕಾಸಸೌಧ ನಿರ್ಮಾಣದಲ್ಲಿ ಎಂಜಿನಿಯರುಗಳು ನಡೆಸಿರುವ ಅಕ್ರಮ ಬಯಲಾಗಿದೆ. ಅಧಿಕಾರಿಗಳು ಜನಪ್ರತಿನಿಧಿಗಳ ಒತ್ತಡಕ್ಕೆ ಕೆಲಸ ಮಾಡಬಾರದು. ಕಾನೂನು ಆತ್ಮಸಾಕ್ಷಿಯಂತೆ ಕೆಲಸ ಮಾಡಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.