ADVERTISEMENT

ಬಂಗಾಳದ್ದಲ್ಲ, ರಾಜ್ಯದಲ್ಲಿರುವ 'ಏಕಗವಾಕ್ಷಿ'ಯನ್ನು ಕೊನೆಗಾಣಿಸಲಿ ಮೋದಿ: ಎಚ್‌ಡಿಕೆ

ಸಿಎಂ ಪುತ್ರ ವಿಜೇಯಂದ್ರ ಮೇಲೆ ಪರೋಕ್ಷ ಟೀಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಮಾರ್ಚ್ 2021, 13:44 IST
Last Updated 21 ಮಾರ್ಚ್ 2021, 13:44 IST
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ   

ಬೆಂಗಳೂರು: ಪಶ್ಚಿಮ ಬಂಗಾಳದ್ದಲ್ಲ, ರಾಜ್ಯದಲ್ಲಿ ಬಿಜೆಪಿ ಸರ್ಕಾರದ 'ಏಕಗವಾಕ್ಷಿ' ವ್ಯವಸ್ಥೆಯನ್ನು ಪ್ರಧಾನಿ ನರೇಂದ್ರ ಮೋದಿ ಮೊದಲು ಕೊನೆಗಾಣಿಸಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಎಚ್.ಡಿ. ಕುಮಾರಸ್ವಾಮಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿ.ಎಸ್. ಯಡಿಯೂರಪ್ಪ ಆಡಳಿತದ ರಾಜ್ಯ ಬಿಜೆಪಿ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದರು.

'ಪ್ರಧಾನಿ ನರೇಂದ್ರ ಮೋದಿ ಬಂಗಾಳದ ಏಕಗವಾಕ್ಷಿ ವ್ಯವಸ್ಥೆ ಬಗ್ಗೆ ಮಾತಾಡಿದ್ದಾರೆ. ದೇಶದಲ್ಲಿ ಅಭಿವೃದ್ಧಿಗೆ ಏಕಗವಾಕ್ಷಿ ವ್ಯವಸ್ಥೆ ಇದೆ ಎಂದೂ, ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಳಿಯ ಅಭಿಷೇಕ್ ಬ್ಯಾನರ್ಜಿ ಕೇಂದ್ರಿತ ಏಕಗವಾಕ್ಷಿ ವ್ಯವಸ್ಥೆ ಇದೆ ಎಂದು ಹೇಳಿದ್ದಾರೆ. ಆದರೆ, ಕರ್ನಾಟಕದಲ್ಲಿ ಯಾವ ಏಕಗವಾಕ್ಷಿ ವ್ಯವಸ್ಥೆ ಇದೆ? ಮೋದಿ ಉತ್ತರಿಸುವರೇ?' ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ADVERTISEMENT

'ಕರ್ನಾಟಕದಲ್ಲಿ ಯಡಿಯೂರಪ್ಪ ಅವರ ಕುರ್ಚಿ ಹಿಂದೆ ಅಡಗಿ ಕುಳಿತಿರುವ, ರಾಜ್ಯದ ಬಿಜೆಪಿ ಸರ್ಕಾರದ 'ಏಕಗವಾಕ್ಷಿ' ಬಗ್ಗೆ ಬಿಜೆಪಿಯ ಹಿರಿಯ ಶಾಸಕರೇ ಹಾದಿ ಬೀದಿಯಲ್ಲಿ ಗೋಳಾಡುತ್ತಿದ್ದಾರೆ. ಯಡಿಯೂರಪ್ಪ ಕುಟುಂಬದ ಅಕ್ರಮದ ಬಗ್ಗೆ ಬಿಜೆಪಿಗರೇ ಆರೋಪಿಸುತ್ತಿದ್ದಾರೆ. ಬಿಜೆಪಿ ಸರ್ಕಾರದ ಸ್ವಘೋಷಿತ 'ಮಹಾನಾಯಕ-ಏಕಗವಾಕ್ಷಿ' ಬಗ್ಗೆ ಮೋದಿ ಮಾತಾಡುವರೇ?' ಎಂದು ಕೇಳಿದರು.

'ಕರ್ನಾಟಕದ ಸರ್ಕಾರದಲ್ಲೇ 'ಏಕಗವಾಕ್ಷಿ'ಯೊಂದು ಇರುವಾಗ, ಅದನ್ನು ಉದ್ದೇಶಪೂರ್ವಕವಾಗಿ ಪೋಷಿಸುತ್ತಿರುವಾಗ ಮೋದಿ ಅವರು ಮಮತಾ ಬ್ಯಾನರ್ಜಿ ಬಗ್ಗೆ ಟೀಕಿಸುವುದು ಆತ್ಮವಂಚನೆ. ರಾಜ್ಯದ ಜನರ ತೆರಿಗೆ ಹಣ, ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ನುಂಗಿಹಾಕುತ್ತಿರುವ, ಬಿಜೆಪಿ ಸರ್ಕಾರದ 'ಏಕಗವಾಕ್ಷಿ' ವ್ಯವಸ್ಥೆಯನ್ನು ಮೋದಿ ಮೊದಲು ಕೊನೆಗಾಣಿಸಲಿ' ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.