ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ದ್ವಂದ್ವ ನಿಲುವು ಪ್ರದರ್ಶಿಸುತ್ತಿದ್ದಾರೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು.
ಜೆಡಿಎಸ್ ಪ್ರಧಾನ ಕಚೇರಿಯಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, 'ಕಾಂಗ್ರೆಸ್ನ ಕೆಲವು ನಾಯಕರು ಬಹಿರಂಗವಾಗಿ ಯಡಿಯೂರಪ್ಪ ಅವರನ್ನು ಬೆಂಬಲಿಸುತ್ತಿದ್ದಾರೆ. ಇನ್ನು ಕೆಲವರು ಯಡಿಯೂರಪ್ಪ ಅತಿ ಭ್ರಷ್ಟ ಎಂದು ಆರೋಪಿಸುತ್ತಾರೆ. ಇದರಿಂದ ಮುಖ್ಯಮಂತ್ರಿಯವರೇ ಗೊಂದಲಕ್ಕೊಳಗಾಗುವಂತೆ ಮಾಡಿದ್ದಾರೆ' ಎಂದರು.
ಶಾಮನೂರು ಶಿವಶಂಕರಪ್ಪ, ಎಂ.ಬಿ. ಪಾಟೀಲ ಸೇರಿದಂತೆ ಕೆಲವರು ಯಡಿಯೂರಪ್ಪ ಅವರ ಬೆಂಬಲಕ್ಕೆ ನಿಂತಿದ್ದಾರೆ. ಕಾಂಗ್ರೆಸ್ನಿಂದ ಮತ್ತೆ ಮುಖ್ಯಮಂತ್ರಿ ಆಗಲು ಟವೆಲ್ ಹಾಕಿ ಕಾಯುತ್ತಿರುವ ಮಾಜಿ ಮುಖ್ಯಮಂತ್ರಿಯೊಬ್ಬರು ಯಡಿಯೂರಪ್ಪ ಸರ್ಕಾರವನ್ನು ಹೀನಾಮಾನ ಟೀಕಿಸುತ್ತಿದ್ದಾರೆ. ಈ ದ್ವಂದ್ವ ನೀತಿಯನ್ನು ಕಾಂಗ್ರೆಸ್ ಬಿಡಬೇಕು ಎಂದು ಹೇಳಿದರು.
ಪಕ್ಷ ತೊರೆದು ಹೋದವರ ಬಗ್ಗೆ ಜೆಡಿಎಸ್ ಚಿಂತಿಸುವುದಿಲ್ಲ. ಬಿಜೆಪಿಗೆ ಹೋದವರನ್ನು ಮತ್ತೆ ಆಹ್ವಾನಿಸುವುದಿಲ್ಲ. ಹೊಸ ಯುವಕರ ಪಡೆ ಕಟ್ಟಿಕೊಂಡು ಪಕ್ಷ ಸಂಘಟಿಸಲಾಗುವುದು. ವಲಸಿಗರನ್ನು ಕರೆತರಲು ಕಾಂಗ್ರೆಸ್ ಉತ್ಸುಕವಾಗಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.